ಶಿವಮೊಗ್ಗ: ಸೆಮಿಸ್ಟರ್ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಹತ್ತಿರದ ಆಡೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸೆಮೆಸ್ಟರ್ ನಲ್ಲಿ ಫೇಲ್ ಆಗಿದ್ದಕ್ಕೆ ವಿದ್ಯಾರ್ಥಿಯು ಕಳೆನಾಶಕ ಸೇವಿಸಿದ್ದಾನೆ. ರಿಪ್ಪನ್ಪೇಟೆ ಸರ್ಕಾರಿ ಪದವಿ ಕಾಲೇಜಿನಲ್ಲಿ ಬಿಎ ವ್ಯಾಸಾಂಗ ಮಾಡುತಿದ್ದ ವಿದ್ಯಾರ್ಥಿ ಮನುಷ್ ಡಿ (19) ಸಾವನ್ನಪ್ಪಿದ ದುರ್ದೈವಿ. ಈ ವಿದ್ಯಾರ್ಥಿ ಇಂಗ್ಲಿಷ್ ವಿಷಯದಲ್ಲಿ ಫೇಲ್ ಆಗಿದ್ದ ಎನ್ನಲಾಗಿದೆ.
ಇತ್ತೀಚೆಗೆ ನಡೆದಿದ್ದ ಸೆಮಿಸ್ಟರ್ ವಿಷಯದಲ್ಲಿ ಅನುತ್ತೀರ್ಣನಾಗಿದ್ದ. ಇದರಿಂದ ಬೇಸತ್ತು ವಿಷ ಸೇವಿಸಿದ್ದಾನೆ. ವಿಷಯ ತಿಳಿದ ಕೂಡಲೇ ವಿದ್ಯಾರ್ಥಿ ಮನುಷ್ನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಈ ಕುರಿತು ಆನಂದಪುರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
