ಬೆಂಗಳೂರು: ‘ಜನ ಸ್ನೇಹಿ ಆಡಳಿತ’ ಜಾರಿಗೆ ತರುವ ಉದ್ದೇಶದಿಂದ ರಾಜ್ಯ ಪೊಲೀಸ್ ಇಲಾಖೆ ರೂಪಿಸಿರುವ ‘ಮನೆ-ಮನೆಗೆ ಪೊಲೀಸ್’ ಎಂಬ ವಿನೂತನ ಯೋಜನೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಚಾಲನೆ ನೀಡಿದ್ದಾರೆ.
ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜನರ ದುಃಖ-ದುಮ್ಮಾನ ಕೇಳಲು ಬರುವ ಪೊಲೀಸರ ಕಾರ್ಯಕ್ಕೆ ಹಸಿರು ಬಾವುಟ ತೋರಿಸಿ ಸಚಿವರು ಮಾತನಾಡಿದರು.
ರಾಜ್ಯ ಸರ್ಕಾರದ ವಿನೂತನ ಯೋಜನೆಯ ಭಾಗವಾಗಿ, ಪರಮೇಶ್ವರ, ಗೋವಿಂದರಾಜನಗರ ಶಾಸಕ ಪ್ರಿಯಾಕೃಷ್ಣ, ಡಿಜಿ ಮತ್ತು ಐಜಿಪಿ ಎಂಎ ಸಲೀಂ, ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್ ಮತ್ತು ಇತರ ಹಿರಿಯ ಅಧಿಕಾರಿಗಳು ಹಲವಾರು ಮನೆಗಳಿಗೆ ಭೇಟಿ ನೀಡಿದರು. ರಾಜ್ಯಾದ್ಯಂತ ಪೊಲೀಸ್ ಸಿಬ್ಬಂದಿ ಮನೆಗಳಿಗೆ ಭೇಟಿ ನೀಡಿ ನಿವಾಸಿಗಳ ಕುಂದುಕೊರತೆಗಳನ್ನು ಪರಿಹರಿಸಿದರು.
ದೇಶದಲ್ಲಿ ಇಂತಹ ಉಪಕ್ರಮವನ್ನು ಜಾರಿಗೆ ತರುತ್ತಿರುವುದು ಇದೇ ಮೊದಲು. “ಬೇರೆ ಯಾವುದೇ ರಾಜ್ಯವೂ ಈ ರೀತಿಯ ಕಾರ್ಯಕ್ರಮವನ್ನು ಪರಿಚಯಿಸಿಲ್ಲ. ಇದು ರಾಷ್ಟ್ರವ್ಯಾಪಿ ಯಶಸ್ವಿ ಮಾದರಿಯಾಗಲಿದೆ ಎಂದು ನಾನು ನಂಬುತ್ತೇನೆ ಪರಮೇಶ್ವರ್ ಹೇಳಿದ್ದಾರೆ.
ಪೊಲೀಸರನ್ನು ಸಹೋದರರಂತೆ ನೋಡಬೇಕು. ಜನರ ಮನೆ ಬಾಗಿಲಿಗೆ ಹೋಗಿ, ಅವರ ಕುಂದುಕೊರತೆಗಳನ್ನು ಆಲಿಸಿ, ಅವುಗಳನ್ನು ಪರಿಹರಿಸಲು ಸಹಾಯ ಮಾಡುಬೇಕಿದೆ. ಇದು ಸಕಾರಾತ್ಮಕ ಸಾರ್ವಜನಿಕ ಗ್ರಹಿಕೆಯನ್ನು ಬೆಳೆಸಲು ಸಹಾಯ ಮಾಡುತ್ತದೆ ಎಂದು ತಿಳಿಸಿದರು.



















