ಬೆಂಗಳೂರು: ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮುನಿರತ್ನ ವಿರುದ್ಧ ತನಿಖೆಗೆ ಆದೇಶ ನೀಡಲಾಗಿದೆ.
ಬಿಬಿಎಂಪಿ (BBMP) ಗುತ್ತಿಗೆದಾರ ಚಲುವಾರಜುಗೆ ಲಂಚಕ್ಕೆ ಬೇಡಿಕೆ ಇಟ್ಟ ಪ್ರಕರಣದ ತನಿಖೆಗೆ ಸಕ್ಷಮ ಪ್ರಾಧಿಕಾರ ಅನುಮತಿ ನೀಡಿದೆ. ಈ ಕರಿತು ಬೆಂಗಳೂರಿನ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಂಎಲ್ಎ ಮುನಿರತ್ನ ವಿರುದ್ಧ ತನಿಖೆಗೆ ಸಿಐಡಿ ಪೋಲಿಸ್ ಮಹಾ ನಿರ್ದೇಶಕರು ಸಕ್ಷಮ ಪ್ರಾಧಿಕಾರಕ್ಕೆ ಅನುಮತಿ ಕೋರಿದ್ದರು.
ಬಿಬಿಎಂಪಿ ಗುತ್ತಿಗೆದಾರ ಚಲುವರಾಜುಗೆ ಕಸ ವಿಲೇವಾರಿ ಗುತ್ತಿಗೆ ನೀಡಲು ಶಾಸಕ ಮುನಿರತ್ನ 36 ಲಕ್ಷ ರೂ. ಲಂಚ ಕೇಳಿದ್ದು, 20 ಲಕ್ಷ ರೂ. ಈಗಾಗಲೆ ಸ್ವೀಕರಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಕುರಿತು ಪ್ರಕರಣ ದಾಖಲಾಗಿತ್ತು.
ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಲಕ್ಷ್ಮಿದೇವಿನಗರ ವಾರ್ಡ್ನ ಡಿ ದೇವರಾಜು ಅರಸು ಟ್ರಕ್ ಟರ್ಮಿನಲ್ ಪ್ರದೇಶದ ಘನ ತ್ಯಾಜ್ಯ ಸಂಗ್ರಹಣ ಮತ್ತು ವಿಲೇವಾರಿ ಗುತ್ತಿಗೆ ಪಡೆದು ಕೆಲಸ ಮಾಡುತ್ತಿದ್ದೆ. ಶಾಸಕ ಮುನಿರತ್ನ 36 ಲಕ್ಷ ರೂ. ಲಂಚ ನೀಡುವಂತೆ ಬೇಡಿಕೆ ಇಟ್ಟು ಕಿರುಕುಳ ನೀಡಿದ್ದಾರೆ ಎಂದು ದೂರು ನೀಡಿರುವ ಚಲುವರಾಜು ಆರೋಪಿಸಿ ದೂರು ಸಲ್ಲಿಸಿದ್ದರು. ಅಲ್ಲದೇ, ಹಲ್ಲೆ ನಡೆಸಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆಂದು ಚಲುವರಾಜು ಆರೋಪಿಸಿದ್ದರು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಲಾಗಿದೆ.