ಬೆಂಗಳೂರು: ಮೈಕ್ರೋ ಫೈನಾನ್ಸ್ ವಿರುದ್ಧ ರಾಜ್ಯ ಸರ್ಕಾರ ಹೊರಡಿಸಿದ್ದ ಸುಗ್ರೀವಾಜ್ಞೆ 2025 (ಮೈಕ್ರೋ ಫೈನಾನ್ಸ್) ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ.
ಕರ್ನಾಟಕ ಹೈರ್ ಪರ್ಚೇಸ್ ಅಸೋಸಿಯೇಷನ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಈ ಮೂಲಕ ಸಿದ್ದರಾಮಯ್ಯ ಸರ್ಕಾರ ಮೇಲುಗೈ ಸಾಧಿಸಿದೆ. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ವಿಚಾರಣೆ ಪೂರ್ಣಗೊಳಿಸಿ ಇಂದಿಗೆ ಆದೇಶವನ್ನು ಕಾಯ್ದಿರಿಸಿತ್ತು. ಅಲ್ಲದೇ, ಸುಗ್ರೀವಾಜ್ಞೆ ಕುರಿತಂತೆ ನ್ಯಾಯಾಲಯ ಪರಾಮರ್ಶಿಸಿ ಸ್ಪಷ್ಟೀಕರಣ ನೀಡುವ ಅಗತ್ಯವಿದೆ ಎಂದು ಪೀಠ ಹೇಳಿತು.
ಈ ವಿಷಯವಾಗಿ ರಾಜ್ಯ ಸರ್ಕಾರವು, ಮೈಕ್ರೋ ಫೈನಾನ್ಸ್ ಗಳಿಗೆ ಮಾತ್ರ ಈ ನಿಯಮಗಳು ಅನ್ವಯವಾಗುತ್ತದೆ. ವಾರ್ಷಿಕ 3 ಲಕ್ಷಕ್ಕಿಂತ ಕಡಿಮೆ ವರಮಾನದವರಿಗೆ ಭದ್ರತೆ ರಹಿತ ಸಾಲಕ್ಕೆ ಅನ್ವಯವಾಗುತ್ತದೆ ಎಂದು ಮಾಹಿತಿ ನೀಡಿತ್ತು. ಸರ್ಕಾರದ ಈ ಹೇಳಿಕೆ ಪರಿಗಣಿಸಿ ಹೈಕೋರ್ಟ್ ರಿಟ್ ಅರ್ಜಿ ವಜಾಗೊಳಿಸಿದೆ.