ಉಡುಪಿ : ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆಯುವ ಐತಿಹಾಸಿಕ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಭಾಗವಹಿಸುತ್ತಿದ್ದಾರೆ. ಹೀಗಾಗಿ ನವೆಂಬರ್ 28ಕ್ಕೆ ಜಿಲ್ಲೆಗೆ ಸಾರ್ವತ್ರಿಕ ಸ್ಥಳೀಯ ರಜೆ ಘೋಷಿಸುವಂತೆ ಶಾಸಕ ಯಶ್ಪಾಲ್ ಸುವರ್ಣ ಉಡುಪಿ ಜಿಲ್ಲಾಧಿಕಾರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.
ಪತ್ರದಲ್ಲೇನಿದೆ?
ನವೆಂಬರ್ 28ರ ಶುಕ್ರವಾರದಂದು ನಮ್ಮ ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿರವರು ಉಡುಪಿಯ ಶ್ರೀ ಕೃಷ್ಣ ಮಠ ಮತ್ತು ಪರ್ಯಾಯ ಪುತ್ತಿಗೆ ಮಠಗಳ ಆಶ್ರಯದಲ್ಲಿ ನಡೆಯುವ ಲಕ್ಷ ಕಂಠ ಗೀತಾ ಗಾಯನ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವುದು ತಮಗೆ ತಿಳಿದ ವಿಚಾರವಾಗಿದೆ.
ದೇಶದ ಪ್ರಧಾನಿಯೋರ್ವರು ಸರಿಸುಮಾರು ಮೂರು ದಶಕಗಳ ಬಳಿಕ (ಚುನಾವಣಾ ಪ್ರಚಾರವನ್ನು ಹೊರತುಪಡಿಸಿ) ಉಡುಪಿಗೆ ಭೇಟಿ ನೀಡುತ್ತಿರುವುದು ಜಿಲ್ಲೆಗೆ ಸಂಭ್ರಮದ ವಿಚಾರವಾಗಿದೆ. ಸದರಿ ಕಾರ್ಯಕ್ರಮದಲ್ಲಿ ಜಿಲ್ಲೆಯ ಜನತೆ ಭಾಗಿಯಾಗಲು ಅನುಕೂಲವಾಗುವ ನಿಟ್ಟಿನಲ್ಲಿ ಮತ್ತು ಪ್ರಧಾನಮಂತ್ರಿಗಳ ಭೇಟಿ ಸಮಯದ ಶಿಷ್ಟಾಚಾರಕ್ಕೆ ಸಂಬಂಧಿಸಿದಂತೆ ವಾಹನಗಳ ಸಂಚಾರ ಮತ್ತು ಸಾರ್ವಜನಿಕ ಓಡಾಟದ ನಿರ್ಬಂಧವಿರುವುದರಿಂದ 28ರ ಶುಕ್ರವಾರದಂದು ತುರ್ತು ಮತ್ತು ಅಗತ್ಯ ಸೇವೆಗಳನ್ನು ಹೊರತುಪಡಿಸಿ, ಅಂಗನವಾಡಿ, ಶಾಲಾ-ಕಾಲೇಜು ಹಾಗೂ ಸರಕಾರಿ ಕಛೇರಿಗಳು ಸೇರಿದಂತೆ ಜಿಲ್ಲಾದ್ಯಂತ ಒಂದು ದಿನದ ಸಾರ್ವತ್ರಿಕ ಸ್ಥಳೀಯ ರಜೆ ಘೋಷಿಸುವಂತೆ ಕೋರಿದ್ದಾರೆ.
ಈ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮ ಪರ್ಯಾಯ ಶ್ರೀ ಪುತ್ತಿಗೆ ಮಠದ ನೇತೃತ್ವದಲ್ಲಿ ನಡೆಯುತ್ತಿದ್ದು, ಸದ್ಯ ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. ಜರ್ಮನ್ ತಂತ್ರಜ್ಞಾನದ ಪೆಂಡಾಲ್ ಅಳವಡಿಕೆ ಮಾಡಲಾಗಿದ್ದು, ಸುಮಾರು ಒಂದು ಲಕ್ಷ ಜನ ಪಾಲ್ಗೊಳ್ಳಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಭಗವದ್ಗೀತೆಯ 10 ಶ್ಲೋಕಗಳನ್ನು ಪಠಿಸಲಿದ್ದಾರೆ.
ಪ್ರಧಾನಿ ಭೇಟಿಯ ವೇಳಾಪಟ್ಟಿ
ನ.28ರ ಬೆಳಗ್ಗೆ 8 ಗಂಟೆಗೆ ದೆಹಲಿಯಿಂದ ಹೊರಡಲಿರುವ ಪ್ರಧಾನಿ ಮೋದಿ, ಮಂಗಳೂರು ಏರ್ಪೋರ್ಟ್ಗೆ ಬಂದಿಳಿಯಲಿದ್ದಾರೆ. ಬೆಳಗ್ಗೆ 11.45ರ ಸುಮಾರಿಗೆ ಉಡುಪಿ ಆಗಮಿಸಲಿದ್ದು, ಮಧ್ಯಾಹ್ನ 12 ಗಂಟೆಗೆ ಉಡುಪಿ ಕೃಷ್ಣಮಠಕ್ಕೆ ಭೇಟಿ ನೀಡಲಿದ್ದಾರೆ. ಉಡುಪಿ ಶ್ರೀಕೃಷ್ಣನ ದರ್ಶನ, ಸುವರ್ಣತೀರ್ಥ ಮಂಟಪ, ಕನಕನ ಕಿಂಡಿಗೆ ಸ್ವರ್ಣ ಕವಚ ಲೋಕಾರ್ಪಣೆ ಮಾಡಲಿದ್ದಾರೆ. ಮಧ್ಯಾಹ್ನ 12.15ರಿಂದ 1.15ರವರೆಗೆ ಲಕ್ಷ ಕಂಠ ಗೀತಾಪಠಣ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಮಧ್ಯಾಹ್ನ 1.45ಕ್ಕೆ ಉಡುಪಿಯಿಂದ ಮಂಗಳೂರಿಗೆ ತೆರಳಲಿದ್ದಾರೆ.
ಇದನ್ನೂ ಓದಿ : ಭಾರತದ 53ನೇ ಸಿಜೆಐ ಆಗಿ ನ್ಯಾ. ಸೂರ್ಯಕಾಂತ್ ಪ್ರಮಾಣ ವಚನ ಸ್ವೀಕಾರ



















