ಬೆಂಗಳೂರು : ಮಳೆಗಾಲ ಆರಂಭವಾಗುತ್ತಿರುವ ಹಿನ್ನೆಲೆ ನಗರದಲ್ಲಿ ಸಂಭವಿಸಬಹುದಾದ ಅನಾಹುತಗಳನ್ನು ತಪ್ಪಿಸಲು ಬೆಂಗಳೂರು ಸಂಚಾರ ಪೊಲೀಸ್ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳನ್ನು ಆರಂಭಿಸಿದೆ. ಕಳೆದ ವಾರ ಸುರಿದ ಅಕಾಲಿಕ ಮಳೆ ಹಾಗೂ ಬಿರುಗಾಳಿಯಿಂದ ನಗರದ ಹಲವು ಭಾಗಗಳಲ್ಲಿ ಬೃಹತ್ ಗಾತ್ರದ ಮರಗಳು ಹಾಗೂ ಮರದ ಕೊಂಬೆಗಳು ರಸ್ತೆಗಳ ಮೇಲೆ ಬಿದ್ದು ಸಾರ್ವಜನಿಕರ ಆಸ್ತಿ–ಪಾಸ್ತಿಗೆ ಹಾನಿಯಾಗಿದ್ದಲ್ಲದೆ, ಕೆಲವರು ಪ್ರಾಣ ಕಳೆದುಕೊಂಡ ಘಟನೆಗಳೂ ನಡೆದಿವೆ.
ಈ ಹಿನ್ನೆಲೆಯಲ್ಲಿ ನಗರದ ವಿವಿಧ ಭಾಗಗಳಲ್ಲಿ ಒಣಗಿರುವ, ಶಿಥಿಲಾವಸ್ಥೆಯಲ್ಲಿರುವ ಹಾಗೂ ಯಾವುದೇ ಕ್ಷಣದಲ್ಲಿ ಬೀಳುವ ಸಾಧ್ಯತೆಯಿರುವ ಮರಗಳನ್ನು ಗುರುತಿಸಿ ತಕ್ಷಣ ತೆರವುಗೊಳಿಸುವಂತೆ ಬೆಂಗಳೂರು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತರು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ)ಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಪ್ರಸ್ತುತ ಮಳೆಗಾಲ ಆರಂಭವಾಗಿದ್ದು, ಬಿರುಗಾಳಿಯೊಂದಿಗೆ ಮಳೆಯಾಗುವ ಸಂದರ್ಭಗಳಲ್ಲಿ ಹಳೆಯ ಮರಗಳು ಹಾಗೂ ದುರ್ಬಲಗೊಂಡ ಕೊಂಬೆಗಳು ರಸ್ತೆಗಳ ಮೇಲೆ ಬೀಳುವ ಅಪಾಯ ಹೆಚ್ಚಿದೆ. ಇದರಿಂದ ಸಾರ್ವಜನಿಕರ ಸುರಕ್ಷತೆ, ವಾಹನ ಸಂಚಾರ ಹಾಗೂ ಜೀವ–ಆಸ್ತಿಗೆ ಹಾನಿಯಾಗುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಮರಗಳ ಕಟಾವು ಹಾಗೂ ತೆರವು ಕಾರ್ಯ ಕೈಗೊಳ್ಳುವ ಅಗತ್ಯವಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಬೆಂಗಳೂರು ಸಂಚಾರ ವಿಭಾಗದ ಪರಿಶೀಲನೆಯಲ್ಲಿ ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆ ಪ್ರದೇಶಗಳಲ್ಲಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ತೊಂದರೆ ಉಂಟುಮಾಡುತ್ತಿರುವ ಹಾಗೂ ಅಪಾಯಕಾರಿಯಾಗಿ ಗುರುತಿಸಲ್ಪಟ್ಟ ಒಟ್ಟು 404 ಮರಗಳು ಪತ್ತೆಯಾಗಿವೆ. ಈ ಮರಗಳು ಹಾಗೂ ಅವುಗಳ ಶಿಥಿಲಗೊಂಡ ಕೊಂಬೆಗಳನ್ನು ತಕ್ಷಣ ಕತ್ತರಿಸಿ ತೆರವುಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡುವಂತೆ ಮನವಿ ಮಾಡಲಾಗಿದೆ.
ನಗರ ಪಾಲಿಕೆವಾರು ಗುರುತಿಸಲ್ಪಟ್ಟ ಮರಗಳ ವಿವರಗಳನ್ನು ಪತ್ರದೊಂದಿಗೆ ಲಗತ್ತಿಸಲಾಗಿದ್ದು, ಮುಂದಿನ ದಿನಗಳಲ್ಲಿ ಮಳೆಯ ತೀವ್ರತೆ ಹೆಚ್ಚುವ ಸಾಧ್ಯತೆ ಇರುವುದರಿಂದ ಯಾವುದೇ ಅನಾಹುತ ಸಂಭವಿಸುವ ಮುನ್ನವೇ ತ್ವರಿತ ಕ್ರಮ ಕೈಗೊಳ್ಳಬೇಕೆಂದು ಸಂಚಾರ ಪೊಲೀಸರು ಒತ್ತಾಯಿಸಿದ್ದಾರೆ.
ನಗರದಲ್ಲಿ ಮಳೆಗಾಲದ ಸಂದರ್ಭಗಳಲ್ಲಿ ಮರಗಳು ಉರುಳಿ ರಸ್ತೆ ಬಂದ್, ಟ್ರಾಫಿಕ್ ಸಮಸ್ಯೆ ಹಾಗೂ ಜೀವಹಾನಿ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯ ಈ ಕ್ರಮ ಸಾರ್ವಜನಿಕ ವಲಯದಲ್ಲಿ ಗಮನಸೆಳೆದಿದೆ.
ಇದನ್ನೂ ಓದಿ : ದಿಲ್ಲಿಯಲ್ಲಿ ಸಿದ್ದರಾಮಯ್ಯ, ಡಿಕೆಶಿ : ವರಿಷ್ಠರ ಜೊತೆ ಹೊಸ ಸರ್ಕಾರ, ಸಂಪುಟ ರಚನೆಯ ಚರ್ಚೆ!



















