ಬೆಂಗಳೂರು: ಸುಹಾಸ್ ಶೆಟ್ಟಿ ಸಾಯಿಸುವುದಾಗಿ ಹಾಗೂ ಶ್ರದ್ಧಾಂಜಲಿ ಸಲ್ಲಿಸುವುದಾಗಿ ಮುಂಚಿತವಾಗಿ ತಿಳಿಸಿದ್ದರೂ ಪೊಲೀಸರು ಮುಂಜಾಗ್ರತಾ ಕ್ರಮ ಕೈಗೊಂಡಿಲ್ಲ ಎಂದು ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಆಕ್ಷೇಪಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿನ್ನೆ ಹತ್ಯೆಗೀಡಾದ ಸುಹಾಸ್ ಶೆಟ್ಟಿಗೆ ಸಂಜೆ “ಫ್ರೀಡಂ ಪಾರ್ಕ್”ನಲ್ಲಿ ಶ್ರದ್ಧಾಂಜಲಿ ಸಲ್ಲಿಸಿ ಮಾತನಾಡಿದ ಅವರು, ಇದರಿಂದ ನಾವು ಹಿಂದೂ ಕಾರ್ಯಕರ್ತನನ್ನು ಕಳಕೊಳ್ಳಬೇಕಾಗಿದೆ. ಇದರ ವಿರುದ್ಧ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಲಿದ್ದೇವೆ ಎಂದು ಹೇಳಿದರು.
ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ ಅವರು ಮಾತನಾಡಿ, ಕಾಂಗ್ರೆಸ್ ಸರ್ಕಾರ ಬಂದಾಗ ಜಿಹಾದಿಗಳು, ಭಯೋತ್ಪಾದಕರಿಗೆ ಹುಮ್ಮಸ್ಸು ಬರುತ್ತದೆ. ಡಿಜೆ ಹಳ್ಳಿ, ಕೆಜಿ ಹಳ್ಳಿ, ಹುಬ್ಬಳ್ಳಿ ಪೊಲೀಸ್ ಠಾಣೆ ಸುಟ್ಟು ಹಾಕಿದವರನ್ನು ನಿರಪರಾಧಿಗಳೆಂದು ಬಿಡುವುದರಿಂದ ಇಂಥ ದುರ್ಘಟನೆ ನಡೆಯುತ್ತದೆ ಎಂದು ಆಕ್ಷೇಪಿಸಿದರು. ಪಕ್ಷದ ಮುಖಂಡರು, ಕಾರ್ಯಕರ್ತರು ಈ ಸಾಂಕೇತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.