ನವದೆಹಲಿ : ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನವೇ ರಾಜಧಾನಿ ದೆಹಲಿಯಲ್ಲಿ ಭಾರೀ ಹಂಗಾಮ ಸೃಷ್ಟಿಯಾಗಿದೆ. ನೀಟ್ (NEET) ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸಮಗ್ರ ಸುಧಾರಣೆಗೆ ಆಗ್ರಹಿಸಿ ‘ಕಾಕ್ರೋಚ್ ಜನತಾ ಪಾರ್ಟಿ‘ (CJP) ಹಮ್ಮಿಕೊಂಡಿರುವ “ಸಂಸದ್ ಚಲೋ” ಪಾದಯಾತ್ರೆ ಭಾರೀ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ಪಾದಯಾತ್ರೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದರೂ ಸಾವಿರಾರು ವಿದ್ಯಾರ್ಥಿಗಳು, ಕಾರ್ಯಕರ್ತರು ಜಂತರ್ ಮಂತರ್ ಬಳಿ ಜಮಾಯಿಸಿದ್ದರಿಂದ ಪರಿಸ್ಥಿತಿ ಕೈಮೀರಿ, ಪೊಲೀಸರು ಲಾಠಿಪ್ರಹಾರ ಮಾಡುವ ಮೂಲಕ ಪ್ರತಿಭಟನಾಕಾರರನ್ನು ಚದುರಿಸಲು ಯತ್ನಿಸಿದ್ದಾರೆ.

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಸಾವಿರಾರು ಯುವಕರು ಮತ್ತು ವಿದ್ಯಾರ್ಥಿಗಳು ಜಂತರ್ ಮಂತರ್ನಲ್ಲಿ ಕಳೆದ ಹಲವು ದಿನಗಳಿಂದ ಪ್ರತಿಭಟನೆ, ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಮುಂಗಾರು ಅಧಿವೇಶನದ ಆರಂಭದ ದಿನವಾದ ಇಂದು ಸಂಸತ್ ಭವನದತ್ತ ಮೆರವಣಿಗೆ ಹೊರಡಲು ಯತ್ನಿಸಿದ ಪ್ರತಿಭಟನಾಕಾರರನ್ನು ತಡೆಯಲು ದೆಹಲಿ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಈ ವೇಳೆ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಭಾರೀ ನೂಕಾಟ-ತಳ್ಳಾಟ ನಡೆದು, ಸ್ಥಳದಲ್ಲಿ ಗೊಂದಲ ಹಾಗೂ ಆತಂಕದ ವಾತಾವರಣ ನಿರ್ಮಾಣವಾಯಿತು. ಮುನ್ನೆಚ್ಚರಿಕಾ ಕ್ರಮವಾಗಿ ಕೇಂದ್ರ ದೆಹಲಿಯ ಹಲವು ಭಾಗಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.
ಪೊಲೀಸ್ ನಿಷೇಧಾಜ್ಞೆ ಮತ್ತು ಸಿಜೆಪಿ ಮನವಿ
ಸಂಸತ್ ಭವನದ ಕಡೆಗೆ ಯಾವುದೇ ಮೆರವಣಿಗೆಗೆ ಅನುಮತಿ ನೀಡಿಲ್ಲ ಎಂದು ದೆಹಲಿ ಪೊಲೀಸರು ಭಾನುವಾರವೇ ಸ್ಪಷ್ಟಪಡಿಸಿದ್ದರು. ಈ ಕುರಿತು ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದ ಪೊಲೀಸರು, ನವದೆಹಲಿಯಲ್ಲಿ ಬಿಎನ್ಎಸ್ಎಸ್ ಸೆಕ್ಷನ್ 163 ಅಡಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದು, ಐದಕ್ಕಿಂತ ಹೆಚ್ಚು ಜನರು ಗುಂಪುಗೂಡುವುದನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದ್ದರು. ಮತ್ತೊಂದೆಡೆ, ಪ್ರತಿಭಟನಾಕಾರರಿಗೆ ಶಾಂತಿ ಕಾಪಾಡುವಂತೆ ಸಿಜೆಪಿ ಪಕ್ಷ ಮನವಿ ಮಾಡಿದೆ. “ಪೊಲೀಸರು ನಿಮ್ಮನ್ನು ಎಲ್ಲೇ ತಡೆದರೂ ಶಾಂತಿಯಿಂದಿರಿ. ನಾವು ಈ ಹೋರಾಟವನ್ನು ಪ್ರೀತಿ ಮತ್ತು ಅಹಿಂಸೆಯ ಮೂಲಕವೇ ಗೆಲ್ಲಲಿದ್ದೇವೆ” ಎಂದು ಪಕ್ಷದ ನಾಯಕರು ಕಾರ್ಯಕರ್ತರಲ್ಲಿ ಕೋರಿದ್ದಾರೆ.
ಬಂದ್ ಆದ ಮೆಟ್ರೋ ನಿಲ್ದಾಣಗಳು, ಸಾರ್ವಜನಿಕರ ಪರದಾಟ
ಪ್ರತಿಭಟನೆಯ ಕಾವು ಹೆಚ್ಚಾಗುತ್ತಿದ್ದಂತೆ ಭದ್ರತಾ ಹಿತದೃಷ್ಟಿಯಿಂದ ದೆಹಲಿಯ ರಾಜೀವ್ ಚೌಕ್, ಜನಪಥ್, ಪಟೇಲ್ ಚೌಕ್, ಸೆಂಟ್ರಲ್ ಸೆಕ್ರೆಟರಿಯೇಟ್ ಮತ್ತು ಸೇವಾ ತೀರ್ಥ ಎಂಬ ಐದು ಪ್ರಮುಖ ಮೆಟ್ರೋ ನಿಲ್ದಾಣಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಯಿತು. ಇದರಿಂದಾಗಿ ಸಾವಿರಾರು ಉದ್ಯೋಗಿಗಳು ಮತ್ತು ದಿನನಿತ್ಯದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುವಂತಾಯಿತು. ರಾಜೀವ್ ಚೌಕ್ನಂತಹ ಜನನಿಬಿಡ ನಿಲ್ದಾಣಗಳಲ್ಲಿ ಮೆಟ್ರೋ ಗೇಟ್ಗಳನ್ನು ಮುಚ್ಚಿದ್ದರಿಂದ ಪ್ರಯಾಣಿಕರು ಗಂಟೆಗಟ್ಟಲೆ ಸರತಿಯಲ್ಲಿ ನಿಂತು ಪರದಾಡಿದರು.
ಇದನ್ನೂ ಓದಿ : ಬಿಜೆಪಿ–ಜೆಡಿಎಸ್ನಲ್ಲಿ ಒಳಜಗಳ.. ಮೈತ್ರಿ ಉಳಿಯುತ್ತಾ, ಮುರಿಯುತ್ತಾ..?



















