ಬೆಂಗಳೂರು : ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಮೊಮ್ಮಗ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಭಾವುಕರಾಗಿದ್ದಾರೆ. ಅಜ್ಜಿಯನ್ನು ನೆನೆದು ಕಣ್ಣೀರು ಹಾಕುತ್ತಿರುವ ಅವರು, ಸಾವಿನ ಸುದ್ದಿಯಿಂದ ತೀವ್ರ ಬೇಸರಕ್ಕೊಳಗಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಅಜ್ಜಿ ಚೆನ್ನಮ್ಮರ ಪ್ರೀತಿಯ ಮೊಮ್ಮಗನಾಗಿದ್ದರೂ ಆಕೆಯ ಕೊನೆ ಕಾಲದಲ್ಲಿ ಕನಿಷ್ಠ ಅವರ ಮುಖವನ್ನು ನೋಡಲೂ ಸಾಧ್ಯವಾಗದ ಕಾರಣ ಮಾಜಿ ಸಂಸದ ಭಾವುಕರಾಗಿದ್ದಾರೆ. ಅಜ್ಜಿಯನ್ನು ನೆನೆದು ಪ್ರಜ್ವಲ್ ಬಿಕ್ಕಿ ಬಿಕ್ಕಿ ಅತ್ತಿದ್ದು, ರಾತ್ರಿಯಿಡೀ ನಿದ್ದೆ ಮಾಡದೆ ಮೌನಕ್ಕೆ ಶರಣಾಗಿದ್ದಾರೆ ಎನ್ನಲಾಗಿದೆ.
ಇನ್ನು, ಅಜ್ಜಿ ನಿಧನದ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಅವರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ತುರ್ತು ಪೆರೋಲ್ ನೀಡುವಂತೆ ಜೈಲು ಮುಖ್ಯ ಅಧೀಕ್ಷಕರಿಗೆ ತಮ್ಮ ವಕೀಲರ ಮೂಲಕ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ಕುರಿತು ಜೈಲು ಮುಖ್ಯ ಅಧೀಕ್ಷಕ ಅನ್ಶು ಕುಮಾರ್ ಪರಿಶೀಲನೆ ನಡೆಸಲಿದ್ದು, ಅವರ ನಿರ್ಧಾರದ ಮೇಲೇ ತುರ್ತು ಪೆರೋಲ್ ಮಂಜೂರಾಗುವುದೇ ಇಲ್ಲವೇ ಎಂಬುದು ನಿರ್ಧಾರವಾಗಲಿದೆ.
ಸದ್ಯ ಅತ್ಯಾಚಾರ ಪ್ರಕರಣದಲ್ಲಿ ದೋಷಿಯಾಗಿ ಶಿಕ್ಷೆ ಅನುಭವಿಸುತ್ತಿರುವ ಪ್ರಜ್ವಲ್ ರೇವಣ್ಣ, ಅಜ್ಜಿಯ ಅಂತಿಮ ದರ್ಶನ ಪಡೆಯಲು ಅವಕಾಶ ಸಿಗುತ್ತದೆಯೇ ಎಂಬ ಆತಂಕದಲ್ಲಿದ್ದಾರೆ. ತುರ್ತು ಪೆರೋಲ್ ಕುರಿತು ಕಾರಾಗೃಹ ಅಧಿಕಾರಿಗಳ ತೀರ್ಮಾನಕ್ಕಾಗಿ ಕುಟುಂಬಸ್ಥರು ಹಾಗೂ ಸಾರ್ವಜನಿಕರು ಕಾಯುತ್ತಿದ್ದಾರೆ.
ಚೆನ್ನಮ್ಮನವರ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ
ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯ ಸಮೀಪದ ಕ್ಯಾತನಹಳ್ಳಿ ಬಳಿ ಇರುವ ದೇವೇಗೌಡರ ಕುಟುಂಬಕ್ಕೆ ಸೇರಿದ ಜಮೀನಿನಲ್ಲಿ ಚೆನ್ನಮ್ಮನವರ ಅಂತ್ಯಕ್ರಿಯೆ ನಾಳೆ ಮಧ್ಯಾಹ್ನದ ವೇಳೆಗೆ ನಡೆಯಲಿದೆ. ಅಂತಿಮ ವಿಧಿ ವಿಧಾನ ನೆಯಲಿರುವ ಜಾಗದಲ್ಲಿ ನೆಲ ಸಮತಟ್ಟು ಮಾಡುವ ಜೊತೆಗೆ ಶಾಮಿಯಾನ ಹಾಗೂ ವಿದ್ಯುತ್ ವ್ಯವಸ್ಥೆ ಮಾಡಲಾಗಿದೆ. ಮೈಸೂರಿನಿಂದ 4 ಸಾವಿರ ಕುರ್ಚಿಗಳನ್ನು ತರಿಸಿ ಸ್ಥಳದಲ್ಲಿ ಹಾಕಲು ವ್ಯವಸ್ಥೆ ನಡೆಯುತ್ತಿದೆ. ಅಂತ್ಯಕ್ರಿಯೆಯಲ್ಲಿ ರಾಜ್ಯದ ವಿವಿಧ ಭಾಗದ ಜನಪ್ರತಿನಿಧಿಗಳು ಭಾಗಿ ಸಾಧ್ಯತೆ ಹಿನ್ನೆಲೆ ಅಗತ್ಯ ತಯಾರಿ ಶುರುವಾಗಿದೆ.
ಇದನ್ನೂ ಓದಿ : ಅಜ್ಜಿ ಅಂತಿಮ ದರ್ಶನಕ್ಕೆ ಬರ್ತಾರಾ ಪ್ರಜ್ವಲ್ ರೇವಣ್ಣ?


















