ನವದೆಹಲಿ: ಪಹಲ್ಗಾಮ್ ದಾಳಿಯ ನಂತರ ಭಾರತ ಹಾಗೂ ಪಾಕ್ ಗಡಿಯಲ್ಲಿ ಉದ್ವಿಗ್ನತೆ ಮನೆ ಮಾಡಿದೆ. ಯುದ್ಧದ ಸಾಧ್ಯತೆ ದಟ್ಟವಾಗಿದ್ದು, ಇಂದು ಪ್ರಧಾನಿ ನರೇಂದ್ರ ಮೋದಿ ಅವರು ವಾಯುಪಡೆ ಮುಖ್ಯಸ್ಥ ಅಮರ್ಪ್ರೀತ್ ಸಿಂಗ್ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.
ಶನಿವಾರ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ. ತ್ರಿಪಾಠಿ ಅವರು ಪ್ರಧಾನಿಯನ್ನು ಭೇಟಿಯಾಗಿದ್ದರು. ಕೆಲವು ದಿನಗಳ ಹಿಂದೆ ಪ್ರಧಾನಿ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಂತರ, ವಾಯುಪಡೆಯ ಮುಖ್ಯಸ್ಥರು ಮತ್ತು ಪ್ರಧಾನಿ ಮೋದಿ ನಡುವೆ ಈಗ ಮತ್ತೆ ಸಭೆ ನಡೆಯಿತು.
ಪಹಲ್ಗಾಮ್ ದಾಳಿಯಲ್ಲಿ 26 ಜನ ಪ್ರಾಣ ಕಳೆದುಕೊಂಡಿದ್ದಾರೆ. ಭಯೋತ್ಪಾದನೆಯನ್ನು ಹತ್ತಿಕ್ಕುವ ಭಾರತದ ರಾಷ್ಟ್ರೀಯ ಸಂಕಲ್ಪವನ್ನು ಸರ್ಕಾರ ಪುನರುಚ್ಚರಿಸಿದೆ. ಭಯೋತ್ಪಾದಕ ದಾಳಿಗೆ ಕಾರಣರಾದವರು ಮತ್ತು ಸಂಚುಕೋರರಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಸರ್ಕಾರ ಹೇಳಿದೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಸರ್ಕಾರ ಸರ್ವಪಕ್ಷ ಸಭೆ ನಡೆಸಿತ್ತು. ಈ ವೇಳೆ ಸರ್ಕಾರ ತೆಗೆದುಕೊಳ್ಳುವ ನಿರ್ಧಾರಕ್ಕೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ವಿಪಕ್ಷಗಳು ಹೇಳಿದ್ದವು. ಸದ್ಯ ಪ್ರಧಾನಿ ಮೋದಿ ಅವರ ಸಭೆ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.