ವಿಜಯಪುರ : ಉತ್ತರ ಕರ್ನಾಟಕದಲ್ಲಿ ಭೀಮಾನದಿ ಉಕ್ಕಿಹರಿದ ಪರಿಣಾಮ ಉಂಟಾದ ಭೀಕರ ಪ್ರವಾಹ ಪರಿಸ್ಥಿತಿ ಕುರಿತು ವಿಜಯಪುರದ ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಪ್ರವಾಹ ಪರಿಹಾರದ ವಿಚಾರದಲ್ಲಿ ಮಧ್ಯಪ್ರವೇಶಿಸಿ ಉತ್ತರ ಕರ್ನಾಟಕ ಜನತೆಗೆ ನೆರವಾಗಬೇಕೆಂದು ಮನವಿ ಮಾಡಿದ್ದಾರೆ.

ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ಭೀಮಾನದಿಯ ಉಕ್ಕಿ ಹರಿದ ಪರಿಣಾಮ 117 ಗ್ರಾಮಗಳು ಜಲಾವೃತಗೊಂಡಿದ್ದು, 10 ಸಾವಿರಕ್ಕೂ ಹೆಚ್ಚು ಮಂದಿ ಜನರು ಸಂಕಷ್ಟಕ್ಕೀಡಾಗಿದ್ದಾರೆ. 547 ಮನೆಗಳು ಸಂಪೂರ್ಣ ಹಾನಿಗೊಳಗಾಗಿದ್ದು, ಸಾವಿರಾರು ಜನರು ಆಶ್ರಯ ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ.
ಇನ್ನು ಭೀಮಾ ನದಿ ತೀರ ಪ್ರದೇಶಗಳಲ್ಲಿ ಉಂಟಾದ ಭಾರಿ ಪ್ರವಾಹವು 10 ಲಕ್ಷ ಹೆಕ್ಟೇರ್ಗೂ ಹೆಚ್ಚು ಪ್ರದೇಶದಲ್ಲಿ ಬೆಳೆ ನಷ್ಟಕ್ಕೆ ಕಾರಣವಾಗಿದೆ. ರೈತರು ತಮ್ಮ ಬೆಳೆಗಳು ಮತ್ತು ಜೀವನೋಪಾಯವನ್ನು ಕಳೆದುಕೊಂಡಿದ್ದಾರೆ. ಹೀಗಾಗಿ ಉತ್ತರ ಕರ್ನಾಟಕ ಪ್ರವಾಹ ಪೀಡಿತ ಪ್ರದೇಶಗಳಿಗೆ ಕೇಂದ್ರ ಮಧ್ಯಸ್ಥಿಕೆ ವಹಿಸಬೇಕು. ಈ ಪ್ರದೇಶಕ್ಕೆ ಕೂಡಲೇ ಪರಿಹಾರ ಬಿಡುಗಡೆ ಮಾಡುವಂತೆ ಚ ಯತ್ನಾಳ್ ಅವರು ಪ್ರಧಾನಿ ಮೋದಿಗೆ ಮನವಿ ಮಾಡಿದ್ದಾರೆ.



















