ಬೆಂಗಳೂರು | ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ರಸ್ತೆ ಕಾಮಗಾರಿ ವಿಳಂಬವಾಗುತ್ತಿರುವುದಕ್ಕೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುಮಾರು ಆರು ತಿಂಗಳಿಂದ ನಿಧಾನಗತಿಯಲ್ಲಿ ನಡೆಯುತ್ತಿರುವ ರಸ್ತೆ ಡಾಂಬರೀಕರಣ ಹಾಗೂ ಒಳಚರಂಡಿ ಕಾಮಗಾರಿಗಳು ಜನಜೀವನಕ್ಕೆ ಭಾರೀ ತೊಂದರೆಯುಂಟು ಮಾಡುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.
ನಾಗೇನಹಳ್ಳಿ, ಸುಲ್ತಾನ್ ಪಾಳ್ಯ, ಆರ್.ಟಿ ನಗರ್ ಮತ್ತು ಸಂಜಯನಗರ ಪ್ರದೇಶಗಳಲ್ಲಿ ಕಾಮಗಾರಿ ಹಿನ್ನೆಲೆಯಲ್ಲಿ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ. ಹಲವು ಕಡೆಗಳಲ್ಲಿ ರಸ್ತೆಗಳನ್ನು ಅರ್ಧಕ್ಕರ್ಧ ತೆಗೆಯಲಾಗಿದ್ದು, ವಾಹನ ಸವಾರರು ಹಾಗೂ ಪಾದಚಾರಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ.
ಪ್ರತಿದಿನ ಧೂಳು, ಕೆಸರು ಹಾಗೂ ಗುಂಡಿಗಳಿಂದ ಸರ್ವಾಜನಿಕರ ಆರೋಗ್ಯಕ್ಕೂ ಹಾನಿಯಾಗುತ್ತಿದ್ದು, ಗ್ರಾಹಕರ ಸಂಚಾರ ಕಡಿಮೆಯಾಗಿರುವುದರಿಂದ ವ್ಯಾಪಾರದಲ್ಲಿಯೂ ಕುಸಿತ ಉಂಟಾಗಿದೆ ಎಂದು ಸ್ಥಳೀಯ ವ್ಯಾಪಾರಸ್ಥರು ತಿಳಿಸಿದ್ದಾರೆ.
ಇನ್ನು, ಶಾಲಾ ಮಕ್ಕಳು, ವೃದ್ಧರು ಹಾಗೂ ತುರ್ತು ಸೇವೆಗಳ ಸಂಚಾರಕ್ಕೂ ತೊಂದರೆ ಉಂಟಾಗುತ್ತಿದೆ. ಕಾಮಗಾರಿಗಳು ನಿಧಾನಗತಿಯಲ್ಲಿ ಸಾಗುತ್ತಿದ್ದರೂ, ಗಡುವು ಮೀರಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಸ್ಥಳೀಯರು ಸಂಬಂಧಪಟ್ಟ ಅಧಿಕಾರಿಗಳು ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದ್ದು, ಬೇಗನೆ ಕಾಮಗಾರಿ ಪೂರ್ಣಗೊಳಿಸಲು ಸಂಬಂಧಪಟ್ಟ ಇಲಾಖೆಯು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಒಟ್ಟಾರೆ, ಅಭಿವೃದ್ಧಿಯ ಹೆಸರಿನಲ್ಲಿ ಆರಂಭವಾದ ಕಾಮಗಾರಿ ಇದೀಗ ಜನರಿಗೆ ಸಂಕಷ್ಟದ ಕಾರಣವಾಗಿದೆ. ಸಂಬಂಧಪಟ್ಟ ಇಲಾಖೆ ಮತ್ತು ಜನಪ್ರತಿನಿಧಿಗಳು ತಕ್ಷಣ ಎಚ್ಚೆತ್ತು ಸಮಸ್ಯೆ ಪರಿಹರಿಸುವರೆ ಎಂದು ಕಾದು ನೋಡಬೇಕಾಗಿದೆ.
ಇದನ್ನೂ ಓದಿ : ಖ್ಯಾತ ಸಿನಿಮಾ PRO ಸುಧೀಂದ್ರ ವೆಂಕಟೇಶ್ಗೆ ಡಾಕ್ಟರೇಟ್..!



















