ಬೆಂಗಳೂರು: ಬೇಸಿಗೆ(Summer)ಯಲ್ಲೂ ಮಳೆರಾಯ ಹಲವೆಡೆ ತನ್ನ ಅಟ್ಟಹಾಸ ಮುಂದುವರೆಸಿದ್ದಾರೆ.
ಸಿಲಿಕಾನ್ ಸಿಟಿ ಸೇರಿದಂತೆ ಹಲವೆಡೆ ಮಳೆ (Rain)ಯಾಗಿದೆ. ಕಳೆದ ಎರಡು ದಿನಗಳಿಂದ ಅಲ್ಪಮಟ್ಟಿಗೆ ಬಿಡುವು ನೀಡಿದ್ದ ಮಳೆ, ಭಾನುವಾರ ಮತ್ತೆ ಆರ್ಭಟಿಸಿದೆ. ಸಿಲಿಕಾನ್ ಸಿಟಿಯ ಕೆಂಗೇರಿ, ಮಹದೇವಪುರ, ಕೆ.ಆರ್.ಪುರಂ, ಕೋರಮಂಗಲ, ಎಲೆಕ್ಟ್ರಾನಿಕ್ ಸಿಟಿ, ರಿಚ್ಮಂಡ್ ಸರ್ಕಲ್, ಶಾಂತಿನಗರ, ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ವ್ಯಾಪಕ ಮಳೆ ಸುರಿದಿದೆ. ಇದರಿಂದಾಗಿ ವಾಹನ ಸವಾರರು ಪರದಾಟ ನಡೆಸುವಂತಾಗಿದೆ.
ಅಲ್ಲದೇ, ರಾಜ್ಯದ ಕರಾವಳಿ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಮುಂದಿನ ಎರಡು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ. ಬೆಳಗಾವಿ, ಧಾರವಾಡ, ಹಾವೇರಿ, ರಾಯಚೂರು, ಬಳ್ಳಾರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಕರ್ನಾಟಕದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.



















