ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ರಾಜಭವನಕ್ಕೆ ಹಲವಾರು ದೂರುಗಳು ಸಲ್ಲಿಕೆಯಾಗುತ್ತಿವೆ. ಈಗಾಗಲೇ ರಾಜಭವನಕ್ಕೆ ಹೋದ ದೂರಿನಿಂದಾಗಿ ಸಿಎಂ ಸಿದ್ದರಾಮಯ್ಯ ಸಾಕಷ್ಟು ಅನುಭವಿಸುತ್ತಿದ್ದಾರೆ. ಈ ಮಧ್ಯೆ ಈಗ ಸಚಿವ ಭೋಸರಾಜು ವಿರುದ್ಧ ದೂರು ಹೋಗಿದೆ.
ಅಲ್ಲದೇ, ಸಚಿವ ಎಂಬಿ ಪಾಟೀಲ್, ಪ್ರಿಯಾಂಕ್ ಖರ್ಗೆ ವಿರುದ್ಧ ಕೂಡ ರಾಜ್ಯಪಾಲರಿಗೆ ದೂರು ಸಲ್ಲಿಕೆಯಾಗಿವೆ. ಈಗ ಸಚಿವ ಬೋಸರಾಜು ವಿರುದ್ಧ ಆರ್ ಟಿಐ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ರಾಜಭವನ ಮೆಟ್ಟಿಲೇರಿದ್ದಾರೆ. ಸಚಿವ ಎನ್.ಎಸ್. ಬೋಸರಾಜು ಪತ್ನಿ ಹೆಸರಿನಲ್ಲಿ ಅರಣ್ಯ ಭೂಮಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ದೂರು ಸಲ್ಲಿಸಲಾಗಿದೆ. ಈ ಕುರಿತು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಳ್ಳಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
ರಾಯಚೂರಿನಲ್ಲಿ ರಕ್ಷಿತಾರಣ್ಯ ಪ್ರದೇಶದಲ್ಲಿ 5 ಎಕರೆ 27 ಗುಂಟೆ ಭೂಮಿಯನ್ನು ಒತ್ತುವರಿ ಮಾಡಿಕೊಳ್ಳಲಾಗಿದೆ ಎಂಬ ಆರೋಪ ಮಾಡಲಾಗಿದೆ. ರಾಯಚೂರು ಉಪವಲಯ ಅರಣ್ಯಾಧಿಕಾರಿ ಈ ಕುರಿತು ತನಿಖೆ ನಡೆಸುತ್ತಿದ್ದು, ನ್ಯಾಯಾಲಯಕ್ಕೆ ವರದಿ ನೀಡಿದ್ದಾರೆ. ಅದರ ಪ್ರಕಾರ, ಸಿ.ಎಚ್.ಶ್ರೀನಿವಾಸ್, ಎನ್.ಎಸ್.ಕೃಷ್ಣವೇಣಿ, ಮುತ್ಯಾಲ ತಿರುಮಲ, ವಿ.ಶಿವನಾದ ಅವರು ಆರೋಪಿಗಳಾಗಿದ್ದಾರೆ. ಕೃಷ್ಣವೇಣಿಯವರು ಎನ್.ಎಸ್.ಬೋಸರಾಜು ಅವರ ಪತ್ನಿಯಾಗಿದ್ದು, ಅರಣ್ಯ ಒತ್ತುವರಿಯಲ್ಲಿ ಪ್ರಭಾವ ಬಳಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.
ಹೀಗಾಗಿ ಅರಣ್ಯ ಒತ್ತುವರಿ ವಿಚಾರವಾಗಿ ಅಧಿಕಾರ ದುರುಪಯೋಗಪಡಿಸಿಕೊಂಡಿರುವ ಎನ್.ಎಸ್.ಬೋಸರಾಜು ಅವರನ್ನು ಸಂಪುಟದಿಂದ ಕೈಬಿಡುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಮನವಿ ಮಾಡಲಾಗಿದೆ.