ಬೆಂಗಳೂರು : ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ಮತ್ತೆ ಮುನ್ನಲೆಗೆ ಬಂದಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಉಚ್ಚಾಟಿಸುವ ಕುರಿತು ಮಾಜಿ ಸಿಎಂ ಡಿ.ವಿ. ಸದಾನಂದಗೌಡರು ಕೇಂದ್ರದ ಪ್ರಭಾವಿ ನಾಯಕರೊಬ್ಬರ ಜೊತೆ ನಡೆಸಿದ್ದಾರೆ ಎನ್ನಲಾದ ಆಡಿಯೋ ಕ್ಲಿಪ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಾಜಕೀಯ ವಲಯದಲ್ಲಿ ಭಾರೀ ತಲ್ಲಣ ಸೃಷ್ಟಿಸಿದೆ.
ಇಂಗ್ಲಿಷ್ ಭಾಷೆಯಲ್ಲಿ ನಡೆಸಿದ ಸಂಭಾಷಣೆ ಇದಾಗಿದ್ದು, ಇದರಲ್ಲಿ ಮೂರು ತಿಂಗಳ ಬಳಿಕ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಅವರನ್ನು ಕಿತ್ತು ಬಿಸಾಕಿ ಎಂದು ಬೇಡಿಕೆ ಇಡಲಾಗಿದೆ. ಈ ಆಡಿಯೋ ಇದೀಗ ರಾಜ್ಯ ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದು, ಮತ್ತೆ ಬಣ ಬಡಿದಾಟ ಶುರುವಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಅವರು ಇನ್ನು ಮೂರು ತಿಂಗಳಲ್ಲಿ ಮೂರು ವರ್ಷ ಪೂರೈಸಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರ ಅವಧಿ ಮೂರು ವರ್ಷ ಇರುವುದು ಬಿಜೆಪಿಯಲ್ಲಿ ನಡೆದುಕೊಂಡು ಬಂದ ನಿಯಮವಾಗಿದೆ. ಇದೇ ಸಂದರ್ಭದಲ್ಲಿ ದೆಹಲಿ ಮಟ್ಟದ ನಾಯಕರೊಬ್ಬರ ಜೊತೆಗೆ ಡಿವಿ ಸದಾನಂದ ಗೌಡ ಅವರು ಮಾತನಾಡಿದ್ದಾರೆ ಎಂಬ ಆಡಿಯೋ ಹೊರಬಂದಿದ್ದು, ಡಿವಿ ಸದಾನಂದಗೌಡ ಅವರ ಧ್ವನಿಯನ್ನೇ ಹೋಲುವಂತಹ ಆಡಿಯೋ ಇದಾಗಿದೆ. ಹೀಗಾಗಿ ಸದ್ಯ ಬಿಜೆಪಿ ಪಾಳಯದಲ್ಲಿ ಸಂಚಲನ ಸೃಷ್ಟಿಸಿದೆ.
ಆಗಸ್ಟ್, ಸೆಪ್ಟೆಂಬರ್, ಅಕ್ಟೋಬರ್ವರೆಗೂ ವಿಜಯೇಂದ್ರ ಮುಂದುವರೆಯಲು ಬಿಡಿ, ಬಳಿಕ ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆದು ಹಾಕಿ ಎಂಬುವುದು ಆಡಿಯೋದಲ್ಲಿ ಉಲ್ಲೇಖವಾಗಿದೆ. ಈಗಲೇ ತೆಗೆದು ಹಾಕಿದ್ರೆ ಬಿಜೆಪಿ ಮತ್ತೆ ಲಿಂಗಾಯತ ವಿರೋಧಿ ಅಂತ ಟೀಕೆಗೆ ಗುರಿ ಆಗುವ ಅಪಾಯ ಇದೆ. ಇದು ಪಕ್ಷಕ್ಕೆ ಡ್ಯಾಮೇಜ್ ಆಗಬಹುದು. ಹಾಗಾಗಿ ಮುಂದಿನ ಅಕ್ಟೋಬರ್ ವರೆಗೂ ಕಾದು ವಿಜಯೇಂದ್ರ ಅವರನ್ನು ಪದವಿಯಿಂದ ತೆಗೆಯುವಂತೆ ಮನವಿ ಮಾಡಲಾಗಿದೆ.
ಬಿವೈ ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾಗಿ ಮೂರು ವರ್ಷ ಪೂರ್ಣಗೊಳಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಗೊಂದಲ ಮಾಡಿಕೊಳ್ಳುವುದು ಯಾಕೆ? ಎರಡು ತಿಂಗಳ ಒಳಗಾಗಿ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಬೇಕಾಗಿದೆ. ಎರಡು ತಿಂಗಳಲ್ಲಿ ಅವರ ಅವಧಿ ಕೂಡಾ ಮುಕ್ತಾಯವಾಗುತ್ತಿದೆ. ಇಂತಹ ಸಂದರ್ಭದಲ್ಲಿ ಯಾರೂ ಇದನ್ನು ಪ್ರಶ್ನೆ ಮಾಡುವುದಿಲ್ಲ. ಪಕ್ಷದಲ್ಲಿ ಮುಂದುವರಿಯಬೇಕೆಂದು ಯಾವುದೇ ಷರತ್ತು ಇಲ್ಲ. ಹಾಗಾಗಿ ಯೋಜನಾಬದ್ಧವಾಗಿ ಅಕ್ಟೋಬರ್ನಲ್ಲಿ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿ. ಈ ಕೆಲಸ ಮಾಡಿದರೆ, ಲಿಂಗಾಯತರು ಸ್ವಲ್ಪ ವಿರೋಧ ಮಾಡಬಹುದು. ಆದರೆ ಯೋಗ್ಯರನ್ನು ನಾವು ರಾಜ್ಯಾಧ್ಯಕ್ಷರನ್ನಾಗಿ ಮಾಡಿದರೆ ಎಲ್ಲಾ ವಿರೋಧಗಳು ತಣ್ಣಗಾಗಲಿದೆ. ಇದು ನನ್ನ ಅಭಿಪ್ರಾಯವಾಗಿದೆ. ಬೇರೆ ಉತ್ತಮ ಅವಕಾಶಗಳು ಇದ್ದರೆ ನಾನು ಪಕ್ಷದ ನಿರ್ಧಾರಕ್ಕೆ ಬದ್ಧವಾಗಿದ್ದೇನೆ. ನಾನು ದೇವರಲ್ಲಿ ನಂಬಿಕೆ ಇಟ್ಟಿದ್ದೇನೆ. ನನ್ನನ್ನು ಜನರು ಒಪ್ಪಿಕೊಂಡಿದ್ದಾರೆ. ಬಸ್ ನಿಲ್ದಾಣದಲ್ಲಿ ಕಾಣಿಸಿಕೊಂಡರೂ 25-30 ಆಟೋ ಚಾಲಕರು ಬಂದು ಮಾತನಾಡಿಸುತ್ತಾರೆ. ನಾನು ಆ ರೀತಿಯ ಸಂಪರ್ಕ ಇಟ್ಟಿದ್ದೇನೆ ಎಂದು ಪ್ರದೀಪ್ ಎಂಬುವವರ ಜೊತೆಗೆ ಮಾತನಾಡಿದ ಆಡಿಯೋನಲ್ಲಿದೆ.
ಈ ಬಗ್ಗೆ ಸದಾನಂದಗೌಡ ಹೇಳಿದ್ದೇನು?
ಇನ್ನು ಈ ಆಡಿಯೋ ವೈರಲ್ ಆಗುತ್ತಿದ್ದಂತೆಯೇ ಈ ಬಗ್ಗೆ ಮಾತನಾಡಿರುವ ನೀಡಿರುವ ಡಿವಿಎಸ್, ಆಡಿಯೋ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಈ ಆಡಿಯೋ ಬಗ್ಗೆ ನನಗೆ ಗೊತ್ತಿಲ್ಲ, ಹಾಗಾಗಿ ಉತ್ತರ ಕೊಡುವುದಿಲ್ಲ. ಆಡಿಯೋ ಬಗ್ಗೆ ಸತ್ಯ ಸಂಗತಿ ಹೊರಬರಲಿ. ನನ್ನ ಬಗ್ಗೆ ಬಹಳ ದಿನದಿಂದ ಚರ್ಚೆ ಆಗುತ್ತಿತ್ತು. ಕೋರ್ ಕಮಿಟಿ ಸಭೆಯಲ್ಲಿ ಕೆಲವು ಮಾತುಗಳನ್ನು ಹೇಳಿದ್ದೇನೆ. ಕೇಂದ್ರ ನಾಯಕರು, ರಾಜ್ಯ ನಾಯಕರು ಕೇಳಿದ್ರೆ ಉತ್ತರ ಕೊಡುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ : ‘ಸಿಎಂ ಎಲ್ಲರಿಗೂ ಇರಬೇಕೇ ಹೊರತು ಕಾಂಗ್ರೆಸ್ಗೆ ಮಾತ್ರ ಅಲ್ಲ’ – ಡಿಕೆಶಿ ವಿರುದ್ಧ ಆರ್.ಅಶೋಕ್ ವಾಗ್ದಾಳಿ!


















