ಬೆಳಗಾವಿ : ಕೆಎಲ್ಇ ಸಂಸ್ಥೆಯಲ್ಲಿ ಕಳೆದ ನಾಲ್ಕು ದಶಕಗಳಿಂದ ಸೇವೆ ಸಲ್ಲಿಸುತ್ತಿದ್ದ ಹಿರಿಯ ವೈದ್ಯ ಡಾ. ದಿನೇಶ್ ಭಟ್ಕಳ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಅಂಕೋಲಾದಲ್ಲಿರುವ ಕೆಎಲ್ಇ ಆಸ್ಪತ್ರೆಯ ಆಡಳಿತಾಧಿಕಾರಿಯಾಗಿದ್ದ ಡಾ. ದಿನೇಶ್ ಭಟ್ಕಳ್ ಆತ್ಮಹತ್ಯೆಗೆ ಮೊದಲು ಕೆಎಲ್ಇ ಸಂಸ್ಥೆಯ ಚೇರ್ಮನ್ ಡಾ. ಪ್ರಭಾಕರ ಕೋರೆ ಅವರಿಗೆ ವಾಟ್ಸಪ್ ಮೆಸೇಜ್ ಕಳುಹಿಸಿ ಬಳಿಕ ಗುಂಡು ಹಾರಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಡಾ. ದಿನೇಶ್ ಭಟ್ಕಳ್ ತಮ್ಮ ಸಂದೇಶದಲ್ಲಿ, “ನನಗೆ ನೀವು ಇಷ್ಟು ವರ್ಷಗಳ ಕಾಲ ಸಾಕಷ್ಟು ಸಹಾಯ ಮಾಡಿದ್ದೀರಿ. ಆದರೆ ನಾನು ತೀವ್ರ ಎದೆನೋವಿನಿಂದ ಬಳಲುತ್ತಿದ್ದೇನೆ. ಆದ್ದರಿಂದ ನಾನು ಕಠಿಣ ನಿರ್ಧಾರ ತೆಗೆದುಕೊಳ್ಳುತ್ತಿದ್ದೇನೆ. ಇದು ನನ್ನ ಸ್ವಂತ ನಿರ್ಧಾರ. ದಯವಿಟ್ಟು ನನ್ನ ಕುಟುಂಬಕ್ಕೆ ಸಹಾಯ ಮಾಡಿ. ನಗರ ಪೊಲೀಸ್ ಆಯುಕ್ತರಿಗೂ ಮಾಹಿತಿ ನೀಡಿ” ಎಂದು ಉಲ್ಲೇಖಿಸಿದ್ದಾರೆ ʼಎಂದು ತಿಳಿದುಬಂದಿದೆ.
ಇದೇ ವೇಳೆ ತಮಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯ ಡಾ. ಕೆರೂರ ಅವರಿಗೂ ಸಂದೇಶ ಕಳುಹಿಸಿದ್ದಾಗಿ ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಕೆಎಲ್ಇ ಸಂಸ್ಥೆಯಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸಿದ್ದ ಡಾ. ದಿನೇಶ ಭಟ್ಕಳ್ ಅವರ ನಿಧನ ವೈದ್ಯ ವಲಯದಲ್ಲಿ ಆಘಾತ ಮೂಡಿಸಿದ್ದು, ಕುಟುಂಬಸ್ಥರು ಮತ್ತು ಸಹೋದ್ಯೋಗಿಗಳಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ : ರಕ್ತದ ಮಡುವಿನಲ್ಲಿ ಮಹಿಳೆಯ ಶವ ಪತ್ತೆ – ಬೆಚ್ಚಿಬಿದ್ದ ಜನ!


















