ಬೆಂಗಳೂರು: ರಾಜ್ಯದಲ್ಲಿ ಚಳಿಯ ತೀವ್ರತೆ ಹೆಚ್ಚುತ್ತಿರುವ ನಡುವೆ, ಹೊಸ ವರ್ಷದ ಆರಂಭದಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವರ್ಷದ ಕೊನೆಯ ದಿನವಾದ ಡಿಸೆಂಬರ್ 31 ಮತ್ತು ಹೊಸ ವರ್ಷದ ಮೊದಲ ದಿನವಾದ ಜನವರಿ 1ರಂದು ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಸಂಭವವಿದೆ ಎಂದು ತಿಳಿಸಿದೆ.
ಹವಾಮಾನ ಇಲಾಖೆಯ ಮಾಹಿತಿಯಂತೆ, ಬಂಗಾಳ ಕೊಲ್ಲಿಯ ಆಗ್ನೇಯ ಭಾಗದಲ್ಲಿ ಉಂಟಾಗಿರುವ ವಾಯುಭಾರ ಕುಸಿತವೇ ಮಳೆಯಾಗಲು ಕಾರಣ. ಇದು ಸರಾಸರಿ ಸಮುದ್ರ ಮಟ್ಟಕ್ಕಿಂತ ಸುಮಾರು 1.5 ಕಿಲೋಮೀಟರ್ ಎತ್ತರದಲ್ಲಿ ಚಲಿಸುತ್ತಿದೆ. ಜೊತೆಗೆ, ಉತ್ತರ ಕೇರಳ ಮತ್ತು ಅದರ ನೆರೆಹೊರೆಯ ಪ್ರದೇಶಗಳಲ್ಲಿ 1.5 ಕಿ.ಮೀ ಮತ್ತು 4.5 ಕಿ.ಮೀ ಎತ್ತರದಲ್ಲಿ ವಾಯು ಚಂಡಮಾರುತದ ಪರಿಚಲನೆ ಮುಂದುವರಿದಿರುವುದು ರಾಜ್ಯದ ಹವಾಮಾನ ಮೇಲೆ ಪ್ರಭಾವ ಬೀರುತ್ತಿದೆ.
ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ, ಮಂಡ್ಯ, ಮೈಸೂರು, ತುಮಕೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಡಿಸೆಂಬರ್ 31 ಮತ್ತು ಜನವರಿ 1ರಂದು ಲಘು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ಉತ್ತರ ಒಳನಾಡಿನ ಕರ್ನಾಟಕದಲ್ಲಿ ಚಳಿಯ ತೀವ್ರತೆ ಮತ್ತಷ್ಟು ಹೆಚ್ಚಾಗಿದೆ. ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 4ರಿಂದ 5 ಡಿಗ್ರಿ ಸೆಲ್ಸಿಯಸ್ನಷ್ಟು ಇಳಿಕೆಯಾಗಿದೆ. ಹಲವೆಡೆ ದಟ್ಟ ಮಂಜು ಕವಿದ ವಾತಾವರಣ ಮುಂದುವರಿದಿದೆ.
ಬೀದರ್ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಶೀತ ತೀವ್ರತೆ ಹೆಚ್ಚು ಕಂಡುಬಂದಿದೆ. ವಿಜಯಪುರದಲ್ಲಿ ಕನಿಷ್ಠ ತಾಪಮಾನ 9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಬೀದರ್ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳಲ್ಲಿ 9 ರಿಂದ 12 ಡಿಗ್ರಿ ಸೆಲ್ಸಿಯಸ್ವರೆಗೆ ತಾಪಮಾನ ದಾಖಲಾಗಿದೆ.
ಉತ್ತರ ಒಳ ಕರ್ನಾಟಕದ ಧಾರವಾಡ, ಗದಗ, ಹಾವೇರಿ, ವಿಜಯಪುರ, ಕಲಬುರ್ಗಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳ ಕರ್ನಾಟಕದ ಹಾಸನ, ಬೆಂಗಳೂರು, ಚಿತ್ರದುರ್ಗ, ದಾವಣಗೆರೆ, ಚಿಂತಾಮಣಿ, ಮಂಡ್ಯ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ವರದಿಯಾಗಿದೆ. ಕರಾವಳಿ ಕರ್ನಾಟಕದ ಕಾರವಾರ ಮತ್ತು ಮಂಗಳೂರು ಭಾಗಗಳಲ್ಲೂ ಚಳಿಯ ಪ್ರಭಾವ ಕಂಡುಬಂದಿದೆ.
ಬೀದರ್ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಕಡಿಮೆಯಾಗಿದೆ. ರಾಯಚೂರು, ಗದಗ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳಲ್ಲಿಯೂ ತಾಪಮಾನ ಇಳಿಕೆಯಾಗಿದೆ. ಆದರೆ ಧಾರವಾಡ, ಹಾವೇರಿ, ಕೊಪ್ಪಳ, ಹಾಸನ ಹಾಗೂ ಬೆಂಗಳೂರು ನಗರದಲ್ಲಿ ಸಾಮಾನ್ಯಕ್ಕಿಂತ ಸ್ವಲ್ಪ ಹೆಚ್ಚಾದ ತಾಪಮಾನ ದಾಖಲಾಗಿದೆ.
ಮುಂದಿನ ಎರಡು ದಿನಗಳವರೆಗೆ ಉತ್ತರ ಒಳನಾಡಿನ ಬೀದರ್, ಕಲಬುರ್ಗಿ ಮತ್ತು ವಿಜಯಪುರ ಜಿಲ್ಲೆಗಳ ಪ್ರತ್ಯೇಕ ಪ್ರದೇಶಗಳಲ್ಲಿ ಶೀತಗಾಳಿ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.
ಇದನ್ನೂ ಓದಿ : ಮಾಟಮಂತ್ರದ ಶಂಕೆ | ದಂಪತಿಯನ್ನು ಜೀವಂತ ಸುಟ್ಟು ಕೊಂದ ಗ್ರಾಮಸ್ಥರು



















