ಉಡುಪಿ : ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಧರ್ಮಸ್ಥಳ ಕ್ಷೇತ್ರದ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಕುರಿತು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ಈ ಆರೋಪಗಳ ಬಗ್ಗೆ ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ ಸತ್ಯಾಂಶವನ್ನು ಸಾರ್ವಜನಿಕರ ಮುಂದೆ ಬಹಿರಂಗಪಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಧರ್ಮಸ್ಥಳದಂತಹ ಪವಿತ್ರ ಧಾರ್ಮಿಕ ಕ್ಷೇತ್ರದ ವಿರುದ್ಧ ಇಂತಹ ಗಂಭೀರ ಆರೋಪಗಳು ಕೇಳಿಬರುತ್ತಿರುವುದು ಕಳವಳಕಾರಿ ಬೆಳವಣಿಗೆಯಾಗಿದೆ ಎಂದು ಶ್ರೀಗಳು ಅಭಿಪ್ರಾಯಪಟ್ಟಿದ್ದಾರೆ. ವಿಶೇಷವಾಗಿ ನೂರಾರು ಕೋಟಿ ರೂಪಾಯಿ ಅವ್ಯವಹಾರದ ಆರೋಪಗಳ ಕುರಿತು ಸತ್ಯಾಸತ್ಯತೆ ಪರಿಶೀಲನೆ ಅತ್ಯಗತ್ಯ ಎಂದು ತಿಳಿಸಿದ್ದಾರೆ.
ಇದರ ಜೊತೆಗೆ, ಧಾರ್ಮಿಕ ಕ್ಷೇತ್ರದ ವಿರುದ್ಧ ಯಾವುದೇ ಸಂಚು ರೂಪಿಸಲಾಗಿದೆಯೇ ಎಂಬ ಅಂಶವನ್ನೂ ತನಿಖೆ ಮೂಲಕ ಸ್ಪಷ್ಟಪಡಿಸಬೇಕು, ಈ ಬೆಳವಣಿಗೆಯ ಹಿಂದೆ ಯಾರ ಪಾತ್ರವಿದೆ ಎಂಬುದನ್ನು ಬಯಲಿಗೆಳೆಯುವ ಅಗತ್ಯವಿದೆ ಎಂದು ಹೇಳಿದ್ದಾರೆ.
ಲಕ್ಷಾಂತರ ಭಕ್ತರ ನಂಬಿಕೆ ಮತ್ತು ಭಕ್ತಿಭಾವದ ಕೇಂದ್ರವಾಗಿರುವ ಧರ್ಮಸ್ಥಳದ ಕುರಿತು ಉಂಟಾಗುತ್ತಿರುವ ವಿವಾದಗಳು ಸಮಾಜದಲ್ಲಿ ಗೊಂದಲ ಹಾಗೂ ಅಶಾಂತಿಗೆ ಕಾರಣವಾಗುವ ಸಾಧ್ಯತೆ ಇದೆ ಎಂದು ಶಿರೂರು ಶ್ರೀ ಆತಂಕ ವ್ಯಕ್ತಪಡಿಸಿದ್ದಾರೆ.
ಪ್ರಕರಣವನ್ನು ಸಂಬಂಧಿತ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು. ಯಾವುದೇ ಅನುಮಾನಗಳಿಗೆ ತೆರೆ ಎಳೆಯುವ ರೀತಿಯಲ್ಲಿ ಪಾರದರ್ಶಕ ತನಿಖೆ ನಡೆಯಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಧಾರ್ಮಿಕ ಕ್ಷೇತ್ರಗಳ ಗೌರವ, ಪಾವಿತ್ರ್ಯ ಮತ್ತು ಸಾರ್ವಜನಿಕರ ನಂಬಿಕೆಯನ್ನು ಕಾಪಾಡುವ ಜವಾಬ್ದಾರಿ ಸಮಾಜದ ಮೇಲಿದೆ ಎಂದು ಹೇಳಿದ ಅವರು, ಹಿಂದೂ ಸಮಾಜ ಈ ವಿಚಾರದಲ್ಲಿ ಜಾಗೃತರಾಗಬೇಕು, ಯಾವುದೇ ಹೋರಾಟ ಅಥವಾ ಅಭಿಪ್ರಾಯ ವ್ಯಕ್ತಪಡಿಸುವ ಸಂದರ್ಭದಲ್ಲೂ ಕಾನೂನುಬದ್ಧ ಹಾಗೂ ಪ್ರಜಾಪ್ರಭುತ್ವದ ಚೌಕಟ್ಟಿನೊಳಗೆ ಧ್ವನಿ ಎತ್ತಬೇಕು ಎಂದು ಶಿರೂರು ಶ್ರೀಗಳು ಸಂದೇಶ ನೀಡಿದ್ದಾರೆ.
ಇದನ್ನೂ ಓದಿ : ಅಪಘಾತದಲ್ಲಿ ಸಾವು, ಆದ್ರೆ ಯಾರು ಈ ವ್ಯಕ್ತಿ? ಬೆಂಗಳೂರು ಪೊಲೀಸರಿಗೆ ದೊಡ್ಡ ಸವಾಲಾದ ಕೇಸ್!



















