ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಬುನಾದಿಗೆ ಕಾರಣವಾಗಿರುವ ಅಹಿಂದ ಚಳುವಳಿಗೆ ಮತ್ತೆ ಬಲ ತುಂಬುವ ನಿಟ್ಟಿನಲ್ಲಿ ಹೊಸ ಲೆಕ್ಕಾಚಾರ ರೂಪಿಸಿದ್ದಾರೆ ಎನ್ನಲಾಗುತ್ತಿದೆ. ಹಳೆಯ ಸಹಚಾರಿಗಳನ್ನು ಅವಲಂಬಿಸುವ ಬದಲು ಹೊಸ ನಾಯಕತ್ವವನ್ನು ಬೆಳೆಸುವುದು ಹಾಗೂ ಭವಿಷ್ಯದ ನಾಯಕರಿಗೆ ಅವಕಾಶ ಕಲ್ಪಿಸುವ ಚಿಂತನೆ ಸಿದ್ದರಾಮಯ್ಯ ಅವರಲ್ಲಿದೆ ಎನ್ನಲಾಗಿದ್ದು, ಈ ಸಾಲಿನಲ್ಲಿ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೂ ಪ್ರಮುಖ ಸ್ಥಾನ ನೀಡುವತ್ತ ಸಿದ್ದು ಗಮನಹರಿಸಿದ್ದಾರೆ ಎನ್ನಲಾಗಿದೆ.
ಇದೇ ಸೆಪ್ಟೆಂಬರ್ 6ರಂದು ಬೆಂಗಳೂರಿನಲ್ಲಿ ನಡೆಯಲಿರುವ ಒಬಿಸಿ ಸಮಾವೇಶ ಈ ಹೊಸ ಲೆಕ್ಕಾಚಾರಕ್ಕೆ ವೇದಿಕೆಯಾಗುವ ಸಾಧ್ಯತೆ ಇದೆ. ಅಹಿಂದ ಸಮಾವೇಶದ ಬದಲಿಗೆ ಕುರುಬ ಸಮುದಾಯದ ನೇತೃತ್ವದಲ್ಲಿ ಒಬಿಸಿ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಈ ಮೂಲಕ ಹಿಂದುಳಿದ ವರ್ಗಗಳ ಒಗ್ಗಟ್ಟಿಗೆ ಹೊಸ ರೂಪ ನೀಡುವ ಪ್ರಯತ್ನ ನಡೆಯುತ್ತಿದೆ ಎನ್ನಲಾಗುತ್ತಿದೆ. ಈ ಸಮಾವೇಶಕ್ಕೆ ಸಿದ್ದರಾಮಯ್ಯ ಅವರ ಹಳೆಯ ಆಪ್ತರಾದ ಸತೀಶ್ ಜಾರಕಿಹೊಳಿ, ಎಚ್.ಸಿ. ಮಹದೇವಪ್ಪ ಹಾಗೂ ಜಮೀರ್ ಅಹ್ಮದ್ ಖಾನ್ ದೂರ ಉಳಿಯುವ ಸಾಧ್ಯತೆ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆ.
ಇತ್ತ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಇತ್ತೀಚೆಗೆ ಲಭಿಸಿರುವ ಸ್ಥಾನಮಾನ ಹಳೆಯ ಆಪ್ತರಲ್ಲಿ ಮತ್ತಷ್ಟು ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ ಇದೇ ಕಾರಣಕ್ಕೆ ಸಮಾವೇಶಕ್ಕೆ ಹೆಚ್ಚಿನ ಬಲ ನೀಡಲು ಡಿಸಿಎಂ ಡಾ. ಜಿ. ಪರಮೇಶ್ವರ್ ಅವರನ್ನು ಕಾರ್ಯಕ್ರಮದ ಮುಂಚೂಣಿಗೆ ತರಲು ಸಿದ್ದರಾಮಯ್ಯ ಬಣ ಪ್ರಯತ್ನಿಸುತ್ತಿದೆ ಎನ್ನಲಾಗಿದೆ. ಇದರ ಮೂಲಕ ಅಹಿಂದ ಅಭಿಯಾನಕ್ಕೆ ಮತ್ತಷ್ಟು ಶಕ್ತಿ ತುಂಬಿ, ಹೊಸ ನಾಯಕತ್ವವನ್ನು ಮುನ್ನೆಲೆಗೆ ತರುವ ಉದ್ದೇಶ ಸಿದ್ದರಾಮಯ್ಯ ಅವರದ್ದಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಈ ನಡುವೆ ಯತೀಂದ್ರ ಸಿದ್ದರಾಮಯ್ಯ ಅವರು ಎಚ್.ಸಿ. ಮಹದೇವಪ್ಪ ಹಾಗೂ ಸತೀಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಸಮಾವೇಶದ ಹಿನ್ನೆಲೆ ಹಳೆಯ ನಾಯಕರೊಂದಿಗೆ ಚರ್ಚೆ ನಡೆಸಿ ಒಗ್ಗಟ್ಟಿನ ಸಂದೇಶ ನೀಡುವ ಪ್ರಯತ್ನವನ್ನು ಯತೀಂದ್ರ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಅಹಿಂದ ವೇದಿಕೆಯನ್ನು ಮತ್ತೆ ಸಕ್ರಿಯಗೊಳಿಸುವ ಪ್ರಯತ್ನದ ಭಾಗವಾಗಿಯೇ ಈ ಭೇಟಿಗಳು ನಡೆದಿವೆ ಎಂಬ ಚರ್ಚೆಯೂ ರಾಜಕೀಯ ವಲಯದಲ್ಲಿ ನಡೆಯುತ್ತಿದೆ.
ಹೀಗಾಗಿ ಸೆಪ್ಟೆಂಬರ್ 6ರ ಒಬಿಸಿ ಸಮಾವೇಶದ ಮೂಲಕ ಹಳೆಯ ನಾಯಕರನ್ನು ಒಗ್ಗೂಡಿಸುವುದರ ಜೊತೆಗೆ ಹೊಸ ನಾಯಕತ್ವಕ್ಕೆ ವೇದಿಕೆ ಕಲ್ಪಿಸುವ ಸಿದ್ದರಾಮಯ್ಯ ಅವರ ಲೆಕ್ಕಾಚಾರ ಎಷ್ಟರ ಮಟ್ಟಿಗೆ ಯಶಸ್ವಿಯಾಗಲಿದೆ ಎಂಬುದು ಕುತೂಹಲ ಮೂಡಿಸಿದೆ.
ಇದನ್ನೂ ಓದಿ : ಇಂದು ಎಸ್ಐಆರ್ ಮತದಾರರ ಕರಡು ಪಟ್ಟಿ ಪ್ರಕಟ ; 43.80 ಲಕ್ಷ ಮತದಾರರಿಗೆ ನೋಟಿಸ್



















