ನವದೆಹಲಿ : ಕಳೆದ 20ಕ್ಕೂ ಹೆಚ್ಚು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್ಚುಕ್, ತಮ್ಮ ಮುಷ್ಕರವನ್ನು ಕೊನೆಗೊಳಿಸಲು ಸರ್ಕಾರಕ್ಕೆ ಮೂರು ಪ್ರಮುಖ ಷರತ್ತುಗಳನ್ನು ವಿಧಿಸಿದ್ದಾರೆ. ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ತಮ್ಮನ್ನು “ಅಕ್ರಮವಾಗಿ ಬಂಧನದಲ್ಲಿಡಲಾಗಿದೆ” ಎಂದು ಆರೋಪಿಸಿರುವ ಅವರು, ಅಲ್ಲಿಂದಲೇ ಕೈಬರಹದ ಪತ್ರವೊಂದನ್ನು ಬಿಡುಗಡೆ ಮಾಡುವ ಮೂಲಕ ತಮ್ಮ ಬೇಡಿಕೆಗಳನ್ನು ಬಹಿರಂಗಪಡಿಸಿದ್ದಾರೆ.
ನೀಟ್ (NEET) ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ವ್ಯವಸ್ಥೆಯ ವೈಫಲ್ಯಗಳ ಹೊಣೆಯನ್ನು ಸರ್ಕಾರವೇ ವಹಿಸಿಕೊಳ್ಳಬೇಕು ಎನ್ನುವುದು ವಾಂಗ್ಚುಕ್ ಅವರ ಮೊದಲ ಷರತ್ತಾಗಿದೆ. ಇನ್ನು ಸಂಸತ್ತಿನ ಅಧಿವೇಶನದಲ್ಲಿ ಈ ಪರೀಕ್ಷಾ ಅಕ್ರಮಗಳ ವಿಷಯವನ್ನು ಗಂಭೀರವಾಗಿ ಪ್ರಸ್ತಾಪಿಸುವುದಾಗಿ ವಿವಿಧ ರಾಜಕೀಯ ಪಕ್ಷಗಳ ಪ್ರಮುಖ ನಾಯಕರು ತಮಗೆ ಭರವಸೆ ನೀಡಬೇಕು ಎಂಬುದು ಎರಡನೇ ಬೇಡಿಕೆಯಾಗಿದೆ.
ತಮ್ಮ ಆರೋಗ್ಯ ಅಥವಾ ಇತರ ಕಾರಣಗಳಿಂದಾಗಿ ‘ಸಂಸತ್ ಚಲೋ’ ಮೆರವಣಿಗೆಯಲ್ಲಿ ಭಾಗವಹಿಸಲು ಸಾಧ್ಯವಾಗದಿದ್ದರೆ, ದೇಶದ ಪ್ರಮುಖ ರಾಜಕೀಯ ನಾಯಕರು ಸ್ವತಃ ಆಸ್ಪತ್ರೆಗೆ ಆಗಮಿಸಿ ತಮ್ಮನ್ನು ಭೇಟಿ ಮಾಡಿ ಈ ಭರವಸೆಗಳನ್ನು ನೀಡಬೇಕು ಎಂಬುದು ಅವರ 3ನೇ ಷರತ್ತಾಗಿದೆ. ಆಸ್ಪತ್ರೆಯಲ್ಲಿ ತಮ್ಮ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಸಂವಹನಕ್ಕೆ ನಿರ್ಬಂಧ ಹೇರಲಾಗಿದೆ ಎಂದೂ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಜಂತರ್ ಮಂತರ್ನಿಂದ ಆಸ್ಪತ್ರೆಗೆ ರವಾನೆ
ನೀಟ್ ಅಕ್ರಮವನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜೂನ್ 28 ರಿಂದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಜೊತೆಗೂಡಿ ವಾಂಗ್ಚುಕ್ ಜಂತರ್ ಮಂತರ್ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು. ಜುಲೈ 18ರಂದು ಸತ್ಯಾಗ್ರಹ 21ನೇ ದಿನಕ್ಕೆ ಕಾಲಿಟ್ಟಾಗ, ಅವರ ದೇಹದ ಅಂಗಾಂಗಗಳು ವಿಫಲವಾಗುವ ಭೀತಿ ಎದುರಾಗಿದೆ ಎಂದು ವೈದ್ಯರು ಎಚ್ಚರಿಸಿದ್ದರು. ಹೀಗಾಗಿ ದೆಹಲಿ ಹೈಕೋರ್ಟ್ ನಿರ್ದೇಶನದಂತೆ ಪೊಲೀಸರು ಅವರನ್ನು ಬಲವಂತವಾಗಿ ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಿದ್ದರು.
ಹೈಕೋರ್ಟ್ ಮೆಟ್ಟಿಲೇರಿದ ವಾಂಗ್ಚುಕ್ ಪತ್ನಿ
ಇನ್ನೊಂದೆಡೆ, ಸೋನಮ್ ವಾಂಗ್ಚುಕ್ ಅವರನ್ನು ಸರ್ಕಾರಿ ಆಸ್ಪತ್ರೆಯಿಂದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲು ಅನುಮತಿ ಕೋರಿ ಅವರ ಪತ್ನಿ ಗೀತಾಂಜಲಿ ಆಂಗ್ಮೊ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಈ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್, ವಾಂಗ್ಚುಕ್ ಅವರ ಜೀವ ಉಳಿಸಲು ಆಸ್ಪತ್ರೆಗೆ ಸೇರಿಸುವ ಪೂರ್ಣ ಹಕ್ಕು ಸರ್ಕಾರಕ್ಕಿದೆ ಮತ್ತು ವೈದ್ಯರು ಸೂಕ್ತ ಚಿಕಿತ್ಸೆ ನೀಡುತ್ತಿರುವುದರಿಂದ ಇದರಲ್ಲಿ ಯಾವುದೇ ಬಲಪ್ರಯೋಗವಾಗಿಲ್ಲ ಎಂದು ಸ್ಪಷ್ಟಪಡಿಸಿದೆ. ಈ ಆದೇಶವನ್ನು ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲು ವಾಂಗ್ಚುಕ್ ಕುಟುಂಬ ನಿರ್ಧರಿಸಿದೆ.
ಇದನ್ನೂ ಓದಿ : “ಅದು 28 ವರ್ಷದ ಯುವಕರ ಸಾಧನೆ, 56 ವರ್ಷದ ‘ಯುವಕ’ನದ್ದಲ್ಲ” : ರಾಹುಲ್ ಗಾಂಧಿಗೆ ಮೋದಿ ಟಾಂಗ್!



















