ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸಕ್ಕೆ ಬಂದು ನಿಗೂಢವಾಗಿ ನಾಪತ್ತೆಯಾಗಿದ್ದ ಕೇರಳ ಮೂಲದ ಬಾಲಕಿ ಶ್ರಿನಂದಾ (15) ಶವವಾಗಿ ಪತ್ತೆಯಾಗಿದ್ದಾಳೆ.
ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಶವ ಸುಮಾರು 2 ಸಾವಿರ ಅಡಿ ಆಳದ ಪ್ರಪಾತದಲ್ಲಿ ಸಿಕ್ಕಿರುವುದು ದೃಢಪಟ್ಟಿದೆ.
ಕೇರಳದಿಂದ ಏಪ್ರಿಲ್ 7ರಂದು ಚಿಕ್ಕಮಗಳೂರು ನಗರಕ್ಕೆ ಆಗಮಿಸಿದ್ದ 40 ಜನರ ಪ್ರವಾಸಿ ತಂಡದಲ್ಲಿ ಶ್ರೀನಂದಾ ಕೂಡ ಇದ್ದರು. ಇನಾಮು ದತ್ತಾತ್ರೇಯ ಪೀಠ ಹಾಗೂ ಮಾಣಿಕ್ಯಧಾರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಬಾಲಕಿ ನಾಪತ್ತೆಯಾಗಿದ್ದಳು. ಈ ಘಟನೆ ನಡೆದ ನಂತರ ಪೊಲೀಸರ ತಂಡ ಹುಡುಗಿಗಾಗಿ ಕಾರ್ಯಚರಣೆಯನ್ನು ಆರಂಭಿಸಿದ್ದರು. ಇದೀಗ ಬಾಲಕಿಯ ಮೃತದೇಹ ಪತ್ತೆಯಾಗಿದೆ.
ಬಾಲಕಿಯ ಪತ್ತೆಗಾಗಿ ಎಸ್ಡಿಆರ್ಎಫ್ (SDRF), ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ ಹಾಗೂ ಎಎನ್ಎಫ್ (ANF) ತಂಡಗಳು ಜಂಟಿ ಕಾರ್ಯಾಚರಣೆ ನಡೆಸಿದ್ದವು. ದಟ್ಟ ಅರಣ್ಯ ಮತ್ತು ಕಡಿದಾದ ಪರ್ವತ ಪ್ರದೇಶವಾದ್ದರಿಂದ ಡ್ರೋನ್ ಹಾಗೂ ಥರ್ಮಲ್ ಕ್ಯಾಮರಾಗಳನ್ನು ಸಹ ಬಳಸಲಾಗಿತ್ತು. ಸತತ ಮೂರು ದಿನಗಳ ಕಾಲ ನಡೆಸಿದ ತೀವ್ರ ಶೋಧದ ನಂತರ, ಇಂದು ಮಾಣಿಕ್ಯಧಾರಾದ ಅತ್ಯಂತ ಆಳವಾದ ಪ್ರಪಾತದ ಕೆಳಗೆ ಬಾಲಕಿಯ ಮೃತದೇಹ ಪತ್ತೆಯಾಗಿದೆ.
ಬಾಲಕಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾಳೆಯೇ ಅಥವಾ ಬೇರೆನಾದರೂ ಕಾರಣವಿದೆಯೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ. ಕೇರಳದಿಂದ ಆಗಮಿಸಿದ್ದ ಪೋಷಕರು ಮತ್ತು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ಇದನ್ನೂ ಓದಿ : 10 ಗಂಟೆಗಳ ಕಾಲ ಪೋಷಕರ ‘ಡಿಜಿಟಲ್ ಅರೆಸ್ಟ್’.. 8ನೇ ತರಗತಿ ಬಾಲಕನ ಜಾಣ್ಮೆಯಿಂದ ತಪ್ಪಿದ ಭಾರೀ ವಂಚನೆ!



















