ನವದೆಹಲಿ | ಕರ್ನಾಟಕದ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರಿಗೆ ಸುಪ್ರೀಂ ಕೋರ್ಟ್ ಇಂದು ದೊಡ್ಡ ಮಟ್ಟದ ರಿಲೀಫ್ ಕೊಟ್ಟಿದೆ. ಆಸ್ತಿ ವಿವರಗಳನ್ನು ಮುಚ್ಚಿಟ್ಟ ಆರೋಪದಲ್ಲಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಿದ್ದ ಕರ್ನಾಟಕ ಹೈಕೋರ್ಟ್ನ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಇದರಿಂದಾಗಿ ಸುಬ್ಬಾರೆಡ್ಡಿ ಅವರು ಶಾಸಕರಾಗಿ ಮುಂದುವರಿಯಲು ಇದ್ದ ಕಾನೂನು ಅಡ್ಡಿ ಸದ್ಯಕ್ಕೆ ದೂರವಾಗಿದೆ.
ಸುಪ್ರೀಂ ಕೋರ್ಟ್ನ ಮಧ್ಯಂತರ ಆದೇಶ
ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜಾಯ್ಮಾಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ಈ ಮಹತ್ವದ ಆದೇಶ ಹೊರಡಿಸಿದೆ. ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಬ್ಬಾರೆಡ್ಡಿ ಸಲ್ಲಿಸಿದ್ದ ಮೇಲ್ಮನವಿಯನ್ನು ಪುರಸ್ಕರಿಸಿದ ಪೀಠವು, ಮುಂದಿನ ವಿಚಾರಣೆಯವರೆಗೆ ಸುಬ್ಬಾರೆಡ್ಡಿ ಅವರೇ ಬಾಗೇಪಲ್ಲಿ ಕ್ಷೇತ್ರದ ಶಾಸಕರಾಗಿ ಮುಂದುವರಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದೆ. ಸುಬ್ಬಾರೆಡ್ಡಿ ಪರವಾಗಿ ಹಿರಿಯ ವಕೀಲರಾದ ಕಪಿಲ್ ಸಿಬಲ್ ಮತ್ತು ದೇವದತ್ ಕಾಮತ್ ವಾದ ಮಂಡಿಸಿದರು.
ಹೈಕೋರ್ಟ್ ತೀರ್ಪು ಏನಿತ್ತು?
2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಸುಬ್ಬಾರೆಡ್ಡಿ ಅವರು ತಮ್ಮ ಆಸ್ತಿ ಮತ್ತು ವ್ಯವಹಾರಗಳ ಬಗ್ಗೆ ಪೂರ್ಣ ಮಾಹಿತಿಯನ್ನು ನಾಮಪತ್ರದಲ್ಲಿ ಬಹಿರಂಗಪಡಿಸಿಲ್ಲ ಎಂದು ಆರೋಪಿಸಿ ಬಿಜೆಪಿಯ ಪರಾಜಿತ ಅಭ್ಯರ್ಥಿ ಸಿ. ಮುನಿರಾಜು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದನ್ನು ಪುರಸ್ಕರಿಸಿದ್ದ ಹೈಕೋರ್ಟ್, ಶಾಸಕರ ಆಯ್ಕೆಯನ್ನು ರದ್ದುಗೊಳಿಸಿತ್ತು. ಸುಪ್ರೀಂ ಕೋರ್ಟ್ನಲ್ಲಿ ಮುನಿರಾಜು ಪರ ವಕೀಲರು ವಾದ ಮಂಡಿಸಿ, “ಶಾಸಕರು ತಮ್ಮ ಕೆಲವು ವ್ಯವಹಾರದ ಬಗ್ಗೆ ಮಾಹಿತಿ ನೀಡಿಲ್ಲ” ಎಂದು ದೂರಿದರು.
ವಾದವನ್ನು ಆಲಿಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು, “ಚುನಾವಣೆಯಲ್ಲಿ ಸೋತಾಗ ನೀವು ಇಂತಹ ಕಾರಣಗಳನ್ನು ಹುಡುಕುತ್ತೀರಿ” ಎಂದು ಮಾರ್ಮಿಕವಾಗಿ ಪ್ರತಿಕ್ರಿಯಿಸಿದರು. “ಚುನಾವಣಾ ನಿಯಮಗಳ ಪ್ರಕಾರ ಆದಾಯವನ್ನು ಬಹಿರಂಗಪಡಿಸುವುದು ಮುಖ್ಯವೇ ಹೊರತು ವ್ಯವಹಾರದ ಸ್ವರೂಪವನ್ನಲ್ಲ. ನ್ಯಾಯಾಲಯಗಳು ಚಾರ್ಟರ್ಡ್ ಅಕೌಂಟೆಂಟ್ ಕೆಲಸ ಮಾಡಲು ಸಾಧ್ಯವಿಲ್ಲ” ಎಂದು ನ್ಯಾಯಮೂರ್ತಿ ಬಾಗ್ಚಿ ಅವರು ಹೇಳಿದರು. ಅಲ್ಲದೆ, ಹೂಡಿಕೆ ಮತ್ತು ನಡೆಯುತ್ತಿರುವ ವ್ಯವಹಾರಗಳ ನಡುವೆ ವ್ಯತ್ಯಾಸವಿದೆ ಎಂದು ನ್ಯಾಯಪೀಠವು ಈ ಸಂದರ್ಭದಲ್ಲಿ ಅಭಿಪ್ರಾಯಪಟ್ಟಿತು.
ಮುಂದಿನ ವಿಚಾರಣೆ ಸೆಪ್ಟೆಂಬರ್ನಲ್ಲಿ
ಆಸ್ತಿ ತೆರಿಗೆ ಬಾಕಿ ಪಾವತಿ ವಿಚಾರವಾಗಿಯೂ ದೂರುದಾರರು ಆಕ್ಷೇಪ ವ್ಯತ್ತಪಡಿಸಿದರೂ, ಸುಪ್ರೀಂ ಕೋರ್ಟ್ ಸದ್ಯಕ್ಕೆ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 2026ಕ್ಕೆ ಮುಂದೂಡಲಾಗಿದೆ. ಈ ತೀರ್ಪಿನಿಂದಾಗಿ ಕರ್ನಾಟಕ ಕಾಂಗ್ರೆಸ್ ಪಾಳಯದಲ್ಲಿ ಸಂತಸ ವ್ಯಕ್ತವಾಗಿದ್ದು, ಬಾಗೇಪಲ್ಲಿ ಕ್ಷೇತ್ರದಲ್ಲಿ ಉಪಚುನಾವಣೆಯ ಭೀತಿ ಸದ್ಯಕ್ಕೆ ತಪ್ಪಿದಂತಾಗಿದೆ.
ಇದನ್ನೂ ಓದಿ : ಕೊಲೆ ಕೇಸಲ್ಲಿ ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ | ಜಾಮೀನು ಮಂಜೂರು


















