ಬೆಂಗಳೂರು : ಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ A2 ಆರೋಪಿಯಾಗಿರುವ ಶಿವಕುಮಾರ್ ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.
ಈ ಹಿಂದೆ ಪ್ರಕರಣಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ನ್ಯಾಯಾಲಯದ ಮುಂದೆ ನೀಡುವುದಾಗಿ A2 ಶಿವಕುಮಾರ್ ಪರವಾಗಿ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಯ ವಿಚಾರಣೆ ವೇಳೆ (ಆ.13ರಂದು) ಎರಡೂ ಕಡೆಯ ವಾದ-ಪ್ರತಿವಾದಗಳನ್ನು ನ್ಯಾಯಾಲಯ ಆಲಿಸಿತ್ತು.
A2 ಶಿವಕುಮಾರ್ ಪರ ವಕೀಲರು, ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನ್ಯಾಯಾಲಯಕ್ಕೆ ನೀಡಲು ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದ್ದರು. ಆದರೆ ಸೂರಜ್ ರೇವಣ್ಣ ಪರ ಹಿರಿಯ ವಕೀಲ ಮಿತ್ತಳಿಕೆ ಗಂಗಾಧರ ಶೆಟ್ಟಿ ಅವರು ಅರ್ಜಿಗೆ ಆಕ್ಷೇಪಣೆ ಸಲ್ಲಿಸಿ ವಾದ ಮಂಡಿಸಿದ್ದರು. ಅರ್ಜಿಯ ವಿಚಾರಣೆ ಪೂರ್ಣಗೊಂಡ ಬಳಿಕ ನ್ಯಾಯಾಲಯ ಆದೇಶವನ್ನು (ಆ.18) ಇಂದು ಪ್ರಕಟಿಸಲು ಕಾಯ್ದಿರಿಸಿತ್ತು.
ಇದೀಗ ನ್ಯಾಯಾಲಯವು A2 ಶಿವಕುಮಾರ್ ಸಲ್ಲಿಸಿದ್ದ ಮಾಫಿ ಸಾಕ್ಷಿ ಅರ್ಜಿಯನ್ನು ವಜಾಗೊಳಿಸಿದೆ. ಹೀಗಾಗಿ ಪ್ರಕರಣದಲ್ಲಿ A2 ಆರೋಪಿಯಾಗಿರುವ ಶಿವಕುಮಾರ್ಗೆ ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಮಾಡಿದ್ದ ಮನವಿಗೆ ನ್ಯಾಯಾಲಯದಿಂದ ಹಿನ್ನಡೆಯಾಗಿದೆ. ನ್ಯಾಯಾಲಯದ ಇಂದಿನ ಆದೇಶ ಇದೀಗ ಪ್ರಕರಣದ ಮುಂದಿನ ಕಾನೂನು ಪ್ರಕ್ರಿಯೆಯಲ್ಲಿ ಮಹತ್ವ ಪಡೆದುಕೊಂಡಿದೆ.
ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿಯನ್ನು ನ್ಯಾಯಾಲಯದ ಮುಂದೆ ಬಹಿರಂಗಪಡಿಸುವ ಉದ್ದೇಶದಿಂದ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಗೆ ಸೂರಜ್ ರೇವಣ್ಣ ಪರ ಹಿರಿಯ ವಕೀಲ ಮಿತ್ತಳಿಕೆ ಗಂಗಾಧರ ಶೆಟ್ಟಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ವಿಚಾರಣೆ ವೇಳೆ ನಡೆದ ವಾದ-ಪ್ರತಿವಾದಗಳ ಬಳಿಕ ನ್ಯಾಯಾಲಯ ತನ್ನ ಅಂತಿಮ ನಿಲುವು ಪ್ರಕಟಿಸಿದ್ದು, ಮಾಫಿ ಸಾಕ್ಷಿಯಾಗಲು ಸಲ್ಲಿಸಿದ್ದ ಅರ್ಜಿಯನ್ನೇ ತಿರಸ್ಕರಿಸಿದೆ.
ಇದನ್ನೂ ಓದಿ : ಜಡೇಜಾ ‘ಅಪ್ಗ್ರೇಡೆಡ್ ವರ್ಷನ್’ ಮಾನವ್ ಸುತಾರ್ : ಯುವ ಸ್ಪಿನ್ನರ್ ಗುಣಗಾನ ಮಾಡಿದ ಆಕಾಶ್ ಚೋಪ್ರಾ



















