ನವದೆಹಲಿ: ನವ ಮಂಗಳೂರು ಬಂದರು ವ್ಯಾಪ್ತಿಗೆ ಒಳಗೊಂಡಿರುವ ಸುರತ್ಕಲ್ -ಬಿ.ಸಿ. ರೋಡ್ ನಡುವಿನ ಹೆದ್ದಾರಿಯ ನಿರ್ವಹಣೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವ್ಯಾಪ್ತಿಗೆ ತಂದು ಅದರ ಸಮರ್ಪಕ ನಿರ್ವಹಣೆ, ವಾಹನಗಳ ಸುಗಮ ಸಂಚಾರಕ್ಕೆ ಶಾಶ್ವತ ಪರಿಹಾರ ಒದಗಿಸಬೇಕೆಂದು ಕೋರಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾ. ಬ್ರಿಜೇಶ್ ಚೌಟ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಸಲ್ಲಿಸಿದ್ದಾರೆ.
ದೆಹಲಿಯಲ್ಲಿ ಸಚಿವರನ್ನು ಭೇಟಿಯಾದ ಸಂಸದ ಕ್ಯಾ.ಚೌಟ, ಮಂಗಳೂರಿನ ಬಂದರು ಸಂಪರ್ಕ ಹೆದ್ದಾರಿ ತೀರಾ ಹದಗೆಟ್ಟಿದ್ದು, ಈ ರಸ್ತೆ ಪ್ರಸ್ತುತ ವಿಶೇಷ ಉದ್ದೇಶದ ಘಟಕವಾಗಿ ರಚಿಸಲಾದ ರಾಷ್ಟ್ರೀಯ ಹೆದ್ದಾರಿ ಸರಕು ಸಾಗಣೆ ನಿರ್ವಹಣೆ ಲಿಮಿಟೆಡ್ ವ್ಯಾಪ್ತಿಯಲ್ಲಿದೆ. ಈ ರಸ್ತೆ ನಿರ್ವಹಣೆಗೆ ನಿರ್ದಿಷ್ಟ ಏಜೆನ್ಸಿ ಇಲ್ಲದಿರುವುದು, ನಿಧಿಯ ಕೊರತೆ ಹಾಗೂ ಕಾಲ ಕಾಲಕ್ಕೆ ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡದಿರುವುದು ಈ ಮಾರ್ಗದ ದುಸ್ಥಿತಿಗೆ ಪ್ರಮುಖ ಕಾರಣವಾಗಿದೆ. ಮಳೆಗಾಲದಲ್ಲಿ ಈ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಿ ವಾಹನ ಸಂಚಾರ ದುಸ್ತರವಾಗುತ್ತದೆ ಎಂದು ಅವರು ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.
ಈ ಗಂಭೀರ ಸಮಸ್ಯೆಯನ್ನು ಪರಿಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸುರತ್ಕಲ್ -ಬಿ.ಸಿ. ರೋಡ್ ಹೆದ್ದಾರಿಯನ್ನು ಎನ್ ಹೆಚ್ಎಐ ವ್ಯಾಪ್ತಿಗೆ ತಂದು ನವೀಕರಣ ಮತ್ತು ನಿಯಮಿತ ನಿರ್ವಹಣೆಗೆ ಶಾಶ್ವತ ಪರಿಹಾರಕ್ಕಾಗಿ ಈ ಸಮಸ್ಯೆ ಬಗೆಹರಿಸಲು ಸಚಿವರ ಹಸ್ತಕ್ಷೇಪ ಕೋರಿದ್ದಾರೆ.
ಬಹು ನಿರೀಕ್ಷಿತ ಮಂಗಳೂರು-ಬೆಂಗಳೂರು ಹೈಸ್ಪೀಡ್ ಕಾರಿಡಾರ್ ಯೋಜನೆ ಹೆದ್ದಾರಿ ಸಚಿವಾಲಯದಿಂದ ಟೆಂಡರ್ ನಡೆಸಿ ವಿಸ್ತ್ರತ ಯೋಜನಾ ವರದಿ(ಡಿಪಿಆರ್) ತಯಾರಿಸುವ ಕಾರ್ಯಕ್ಕೆ ಚಾಲನೆ ನೀಡಿರುವುದು ಸೇರಿದಂತೆ ದಕ್ಷಿಣ ಕನ್ನಡದ ಪ್ರಮುಖ ಮೂಲಸೌಕರ್ಯ ಯೋಜನೆಗಳಿಗೆ ಸಂಬಂಧಿಸಿದಂತೆ ಸಚಿವರಿಗೆ ಕ್ಯಾ. ಚೌಟ ಇದೇ ಸಂದರ್ಭದಲ್ಲಿ ವಿಶೇಷ ಕೃತಜ್ಞತೆ ಸಲ್ಲಿಸಿದ್ದಾರೆ.
ನಗರೀಕರಣದ ದೃಷ್ಟಿಯಿಂದ ಮಂಗಳೂರು ಹೃದಯಭಾಗದ ಜನದಟ್ಟನೆ ಹಾಗೂ ಟ್ರಾಫಿಕ್ ಸಮಸ್ಯೆಗೆ ದೂರದೃಷ್ಟಿಯ ಪರಿಹಾರ ಕಂಡುಕೊಳ್ಳುವುದಕ್ಕೆ NH-66 ಮತ್ತು NH-75 ಹೆದ್ದಾರಿಗಳನ್ನು ಸಂಪರ್ಕಿಸುವ ಮಂಗಳೂರಿಗೆ ಹೊರ ವರ್ತುಲ ರಸ್ತೆ(ರಿಂಗ್ ರೋಡ್ )ಯನ್ನು ನಿರ್ಮಿಸುವಂತೆ ಸಂಸದರು ಮನವಿ ಮಾಡಿದ್ದಾರೆ.
ಶಿರಾಡಿ ಘಾಟಿ ವಿಭಾಗದ ಜಂಟಿ ಸಮೀಕ್ಷೆ :
ಶಿರಾಡಿ ಘಾಟಿ ಭಾಗದಲ್ಲಿ ರಸ್ತೆ ಹಾಗೂ ರೈಲು ಹಳಿಗಳ ಅಭಿವೃದ್ದಿ ಕಾಮಗಾರಿಗೆ ರೈಲ್ವೇ ಇಲಾಖೆ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಜಂಟಿ ಸಮೀಕ್ಷೆಯನ್ನು ಕೈಗೊಳ್ಳಲು ಮತ್ತು ಅದಕ್ಕೆ ಸಂಬಂಧಿಸಿದ DPR ಅನ್ನು ಮೇಲ್ವಿಚಾರಣೆ ಮಾಡಲು ತಜ್ಞರ ಸಮಿತಿಯನ್ನು ನೇಮಿಸುವಂತೆ ರೈಲ್ವೆ ಸಚಿವಾಲಯದೊಂದಿಗೆ ಮಾತುಕತೆ ನಡೆಸುವಂತೆಯೂ ಮನವಿ ಮಾಡಿದ್ದಾರೆ. ಶಿರಾಡಿ ಘಾಟಿ ಪ್ರದೇಶ ಪರಿಸರ ಸೂಕ್ಷ್ಮತೆ ಮತ್ತು ತಾಂತ್ರಿಕ ಸಂಕೀರ್ಣತೆಯನ್ನು ಗಮನದಲ್ಲಿಟ್ಟುಕೊಂಡು, ರೈಲ್ವೆ ಸಚಿವಾಲಯದೊಂದಿಗೆ ತಜ್ಞರ ನೇತೃತ್ವದ ಜಂಟಿ ವಿಧಾನ ಸೂಕ್ತ ಜೋಡಣೆ, ಸುಸ್ಥಿರತೆ ಮತ್ತು ದೀರ್ಘಕಾಲೀನ ಪರಿಹಾರ-ಮಾರ್ಗೋಪಾಯಗಳನ್ನು ಒದಗಿಸುತ್ತದೆ ಎಂದು ಸಂಸದರು ಸಚಿವರಿಗೆ ಮನದಟ್ಟು ಮಾಡಿದ್ದಾರೆ.


















