ಗದಗ: ಗದಗದ ನಾಗಾವಿ ಬಳಿಯಿರುವ ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯ (RDRP) ಆವರಣದಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರ ಅನುಮಾನಾಸ್ಪದ ಮೃತದೇಹ ಪತ್ತೆಯಾಗಿದೆ. ಮೃತ ವಿದ್ಯಾರ್ಥಿನಿಯನ್ನು 24 ವರ್ಷದ ವೀಣಾ ಹಾನಾಪುರ ಎಂದು ಗುರುತಿಸಲಾಗಿದೆ.
ವೀಣಾ ಹಾನಾಪುರ, ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯದಲ್ಲಿ ಎಂಪಿಎಚ್ ವ್ಯಾಸಂಗ ಮಾಡುತ್ತಿದ್ದರು. ಎಲ್ಲಾ ಪರೀಕ್ಷೆಗಳಲ್ಲೂ ಉತ್ತಮ ಫಲಿತಾಂಶ ಪಡೆದಿದ್ದಳು. ಈಕೆಯ ಮೃತದೇಹ ವಸತಿ ನಿಲಯದ ಕೊಠಡಿಯಲ್ಲಿ ಡಬಲ್ ಬೆಡ್ ಕಾಟ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯ ಪೋಷಕರು ಇದು ಆತ್ಮಹತ್ಯೆಯಲ್ಲ, ಕೊಲೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ವಿದ್ಯಾರ್ಥಿನಿಯ ಮುಖದ ಮೇಲೆ ಗಾಯಗಳಿದ್ದು, ಮೂಗಿನಲ್ಲಿ ರಕ್ತಸ್ರಾವವಾಗಿರುವುದು ಕಂಡುಬಂದಿದೆ. ಯಾರೋ ಹಲ್ಲೆ ನಡೆಸಿ ಬಳಿಕ ನೇಣು ಹಾಕಿದ್ದಾರೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದಲ್ಲದೆ, ಮೃತದೇಹ ಮೊಣಕಾಲು ಮಂಡಿಯೂರಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪೋಷಕರು ಸ್ಥಳಕ್ಕೆ ಬರುವ ಮುನ್ನವೇ ವಿಶ್ವವಿದ್ಯಾಲಯದ ಸಿಬ್ಬಂದಿ ಶವವನ್ನು ಆಸ್ಪತ್ರೆಗೆ ರವಾನಿಸಿರುವ ಕ್ರಮವೂ ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಮಗಳ ಸಾವಿನ ಬಗ್ಗೆ ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ ನ್ಯಾಯ ಒದಗಿಸಬೇಕು ಎಂದು ಪೋಷಕರು ಒತ್ತಾಯಿಸಿದ್ದಾರೆ.


















