ಚೆನ್ನೈ: 2026ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ರಾಜಕೀಯ ಕಣ ರಂಗೇರುತ್ತಿದ್ದು, ಪ್ರಮುಖ ಬೆಳವಣಿಗೆಯೊಂದರಲ್ಲಿ ಪಾಟ್ಟಾಳಿ ಮಕ್ಕಳ್ ಕಚ್ಚಿ (ಪಿಎಂಕೆ) ಪಕ್ಷವು ಅಧಿಕೃತವಾಗಿ ಎನ್ಡಿಎ ಮೈತ್ರಿಕೂಟಕ್ಕೆ ಸೇರ್ಪಡೆಯಾಗಿದೆ. ಎಐಎಡಿಎಂಕೆ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ (ಇಪಿಎಸ್) ಈ ಮೈತ್ರಿಯನ್ನು ‘ಗೆಲ್ಲುವ ಕುದುರೆ’ ಎಂದು ಬಣ್ಣಿಸಿದ್ದಾರೆ.
ಚೆನ್ನೈನಲ್ಲಿ ಪಿಎಂಕೆ ಮುಖ್ಯಸ್ಥ ಅನ್ಬುಮಣಿ ರಾಮದಾಸ್ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಇಪಿಎಸ್, “ಎಐಎಡಿಎಂಕೆ, ಬಿಜೆಪಿ ಮತ್ತು ಪಿಎಂಕೆ ಈಗ ಒಂದೇ ಮೈತ್ರಿಕೂಟದಲ್ಲಿವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಪಕ್ಷಗಳು ನಮ್ಮೊಂದಿಗೆ ಕೈಜೋಡಿಸುವ ಸಾಧ್ಯತೆಯಿದೆ. ನಮ್ಮೆಲ್ಲರ ಒಂದೇ ಗುರಿ ಡಿಎಂಕೆಯನ್ನು ಅಧಿಕಾರದಿಂದ ಕೆಳಗಿಳಿಸುವುದು,” ಎಂದು ವಿಶ್ವಾಸ ವ್ಯಕ್ತಪಡಿಸಿದರು.
‘ಭ್ರಷ್ಟ ಡಿಎಂಕೆ ಸರ್ಕಾರಕ್ಕೆ ಉಳಿಗಾಲವಿಲ್ಲ’
ಮೈತ್ರಿ ಬಗ್ಗೆ ಹರ್ಷ ವ್ಯಕ್ತಪಡಿಸಿದ ಪಿಎಂಕೆ ನಾಯಕ ಅನ್ಬುಮಣಿ ರಾಮದಾಸ್, “ಇಂದು ಎಐಎಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಸೇರ್ಪಡೆಯಾಗಿರುವುದು ನಮಗೆ ಸಂತಸ ತಂದಿದೆ. ಮಹಿಳಾ ವಿರೋಧಿ, ಜನವಿರೋಧಿ ಮತ್ತು ಭ್ರಷ್ಟಾಚಾರದಲ್ಲಿ ಮುಳುಗಿರುವ ಡಿಎಂಕೆ ಸರ್ಕಾರವನ್ನು ಕಿತ್ತೊಗೆಯುವುದೇ ನಮ್ಮ ಪ್ರಮುಖ ಅಜೆಂಡಾ. ಎಐಎಡಿಎಂಕೆ ನೇತೃತ್ವದಲ್ಲಿ ನಾವು ಭಾರಿ ಬಹುಮತದೊಂದಿಗೆ ಸರ್ಕಾರ ರಚಿಸುತ್ತೇವೆ,” ಎಂದು ಡಿಎಂಕೆ ವಿರುದ್ಧ ವಾಗ್ದಾಳಿ ನಡೆಸಿದರು.
ಇಪಿಎಸ್ ರಣಕಹಳೆ
ಅಧಿಕಾರರೂಢ ಡಿಎಂಕೆ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಇಪಿಎಸ್, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಆರೋಪಿಸಿದ್ದಾರೆ. ಕಲ್ಲಕುರಿಚಿಯಲ್ಲಿ ನಡೆದ ಮಹಿಳಾ ಸಮಾವೇಶದಲ್ಲಿ ಮಾತನಾಡಿದ್ದ ಅವರು, ಎಐಎಡಿಎಂಕೆ ಜಾರಿಗೆ ತಂದಿದ್ದ ಯೋಜನೆಗಳಿಗೆ ಸಿಎಂ ಸ್ಟಾಲಿನ್ ತಮ್ಮದೆಂದು ಸ್ಟಿಕ್ಕರ್ ಅಂಟಿಸಿಕೊಳ್ಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದರು. ಅಲ್ಲದೆ, ಡಿಎಂಕೆ ಆಡಳಿತದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ ಎಂದು ಗಂಭೀರ ಆರೋಪ ಮಾಡಿದ್ದರು.
ಈ ಮೈತ್ರಿಯು ತಮಿಳುನಾಡು ರಾಜಕೀಯದಲ್ಲಿ ಹೊಸ ಸಮೀಕರಣಕ್ಕೆ ನಾಂದಿ ಹಾಡಿದ್ದು, ಉತ್ತರ ತಮಿಳುನಾಡಿನಲ್ಲಿ ಪ್ರಬಲವಾಗಿರುವ ವನ್ನಿಯರ್ ಸಮುದಾಯದ ಬೆಂಬಲ ಹೊಂದಿರುವ ಪಿಎಂಕೆ ಸೇರ್ಪಡೆ ಎನ್ಡಿಎಗೆ ಆನೆಬಲ ತಂದಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಇದನ್ನೂ ಓದಿ: ಪರಶುರಾಮ ಥೀಮ್ ಪಾರ್ಕ್ ರಾಜಕೀಯ ಜಟಾಪಟಿ | ಇದೊಂದು ವ್ಯವಸ್ಥಿತ ಸಂಚು ಎಂದ ಉದಯ್ ಕುಮಾರ್ ಶೆಟ್ಟಿ



















