ಉಡುಪಿ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಗೈರು ಹಾಜರಾದ ಹಿನ್ನಲೆಯಲ್ಲಿ ಮೂವರು ಶಿಕ್ಷಕಿಯರನ್ನು ಅಮಾನತುಗಳಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶ ಹೊರಡಿಸಿದ್ದಾರೆ.
ಉಡುಪಿ ತಾಲೂಕಿನ ಒಳಕಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಸುರೇಖ ಹಾಗೂ ರತ್ನ, ಉದ್ಯಾವರ ಸರಕಾರಿ ಪದವಿ ಪೂರ್ವ ಕಾಲೇಜಿನ ಸಹ ಶಿಕ್ಷಕಿ ಪ್ರಭಾ ಬಿ ಇವರನ್ನು ಗಣತಿದಾರರಾಗಿ ನೇಮಿಸಲಾಗಿತ್ತು. ಆದರೆ ಈ ಮೂವರು ಶಿಕ್ಷಕಿಯರು ನೇಮಕಾತಿ ಆದೇಶ ಪ್ರತಿಯನ್ನು ಸ್ವೀಕರಿಸಲು ನಿರಾಕರಿಸಿದ್ದರು. ಕಾರಣ ಕೇಳಿ ನೋಟಿಸ್ ನೀಡಿದರು ಸಹ ಯಾವುದೇ ಪ್ರತಿಕ್ರಿಯೆ ನೀಡದ ಕಾರಣ ಜಿಲ್ಲಾಧಿಕಾರಿಗಳು ಅ. 4 ರಂದು ಶಿಕ್ಷಕಿಯರನ್ನು ಅಮಾನತುಗೊಳಿಸಿ ಆದೇಶ ಕೊಟ್ಟಿದ್ದಾರೆ.
ಇದೇ ರೀತಿ ಸಮೀಕ್ಷೆ ಕಾರ್ಯದಲ್ಲಿ ಯಾವುದೇ ಸಮೀಕ್ಷೆದಾರರು ನಿರ್ಲಕ್ಷ್ಯ ತೋರಿದರೆ ಸೂಕ್ತ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಎಚ್ಚರಿಕೆ ನೀಡಿದ್ದಾರೆ