ಹಾವೇರಿ : ನಗರದಲ್ಲಿ ಬಸವ ಜಯಂತಿಯ ದಿನವೇ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಪುತ್ಥಳಿಗೆ ಅಪಮಾನ ಮಾಡಿರುವ ಘಟನೆ ಆತಂಕ ಮೂಡಿಸಿದೆ. ನಗರದ ಹೃದಯಭಾಗದಲ್ಲಿರುವ ಗಾಂಧಿ ಸರ್ಕಲ್ನಲ್ಲಿ ದುಷ್ಕರ್ಮಿಗಳು ಪುತ್ಥಳಿಯನ್ನು ನೆಲಕ್ಕುರುಳಿಸಿ ಧ್ವಂಸಗೊಳಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಈ ಕೃತ್ಯವನ್ನು ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ನಡೆಸಿರಬಹುದೆಂದು ಶಂಕಿಸಲಾಗಿದೆ. ರಾತ್ರಿ ವೇಳೆಯಲ್ಲಿ ದಾಳಿ ನಡೆಸಿ ಪುತ್ಥಳಿಯನ್ನು ಕೆಡವಿರುವ ಸಾಧ್ಯತೆ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.
ಘಟನೆಯ ಮಾಹಿತಿ ತಿಳಿದ ತಕ್ಷಣ ಹಾವೇರಿ ಶಹರಾ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಸುಳಿವುಗಳನ್ನು ಪತ್ತೆಹಚ್ಚಲು ಶೋಧ ಕಾರ್ಯ ಮುಂದುವರಿದಿದೆ. ಈಗಾಗಲೇ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಗಂಭೀರವಾಗಿ ಕೈಗೊಂಡಿದ್ದಾರೆ.
ಈ ಘಟನೆ ಹಾವೇರಿ ನಗರದಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ತರುವಂತಹದ್ದಾಗಿದ್ದು, ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಇದನ್ನೂ ಓದಿ : ನಾಳೆ ಪ್ರಧಾನಿ ಮೋದಿ ಚಾಲನೆ ನೀಡಬೇಕಿದ್ದ ಸಂಸ್ಕರಣಾಗಾರದಲ್ಲಿ ಭಾರೀ ಅಗ್ನಿ ಅವಘಡ!



















