ನವದೆಹಲಿ: ಭಾರತ ಕ್ರಿಕೆಟ್ ತಂಡವು 2024ರ ಟಿ20 ವಿಶ್ವಕಪ್ ನ್ನು ಗೆದ್ದು ಬೀಗಿದೆ. ಇಡೀ ದೇಶವೇ ಸಂಭ್ರಮಿಸಿದೆ. ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಜುಲೈ 4 ರಂದು ವಿಶ್ವಕಪ್ ವಿಜೇತ ಭಾರತ ತಂಡವನ್ನು ಭೇಟಿಯಾಗಿ ಅಭಿನಂದಿಸಲಿದ್ದಾರೆ.
ಭಾರೀ ಮಳೆಯಿಂದಾಗಿ ಟೀಂ ಇಂಡಿಯಾ (Team India) ಎಲ್ಲಾ ಆಟಗಾರರು, ಬಿಸಿಸಿಐ ಅಧಿಕಾರಿಗಳು ಹಾಗೂ ಸಹಾಯಕ ಸಿಬ್ಬಂದಿ ಬಾರ್ಬಡೋಸ್ನಲ್ಲಿ (Barbados) ಸಿಲುಕಿಕೊಂಡಿದ್ದಾರೆ. ಈಗಾಗಲೇ ಬಾರ್ಬಡೋಸ್ನಿಂದ ವಿಶೇಷ ಏರ್ ಇಂಡಿಯಾ ವಿಮಾನದಲ್ಲಿ ಹೊರಟಿದ್ದು, ಮತ್ತು ನಾಳೆ ಮುಂಜಾನೆ ರಾಷ್ಟ್ರ ರಾಜಧಾನಿಯನ್ನು ತಲುಪಲಿದ್ದಾರೆ.

ವಿಶ್ವಕಪ್ ಗೆದ್ದ ನಂತರ ಪ್ರಧಾನಿ ನರೇಂದ್ರ ಮೋದಿ, ರೋಹಿತ್ ಶರ್ಮಾ (Rohit Sharma) ಮತ್ತು ವಿರಾಟ್ ಕೊಹ್ಲಿ (Virat Kohli) ಸೇರಿದಂತೆ ಟೀಂ ಇಂಡಿಯಾ ಆಟಗಾರರೊಂದಿಗೆ ಮಾತನಾಡಿದ್ದರು. ಇದರ ಫೋಟೋಗಳನ್ನು ಕೂಡ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದರು. ಸದ್ಯ ಖುದ್ದಾಗಿ ಭೇಟಿ ಮಾಡಿ ಅಭಿನಂದಿಸಲಿದ್ದಾರೆ.
ಬೆರಿಲ್ ಚಂಡಮಾರುತದಿಂದಾಗಿ ಬಾರ್ಬಡೋಸ್ ಮತ್ತು ಕೆರಿಬಿಯನ್ನಲ್ಲಿ ವಿಮಾನ ನಿಲ್ದಾಣವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿತ್ತು. ಹೀಗಾಗಿ ಭಾರತೀಯ ಆಟಗಾರರು ಅಲ್ಲಿಯೇ ಉಳಿದುಕೊಂಡಿದ್ದರು. ರೋಹಿತ್ ಶರ್ಮಾ ನಾಯಕತ್ವದ ಭಾರತ ಕ್ರಿಕೆಟ್ ತಂಡ 7 ರನ್ಗಳಿಂದ ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಜೂನ್ 29 ರಂದು ಗೆದ್ದ T20 ವಿಶ್ವಕಪ್ ಟ್ರೋಫಿಯೊಂದಿಗೆ ಮನೆಗೆ ಮರಳುತ್ತಿದ್ದಾರೆ.

ಕಳೆದ ವರ್ಷ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ODI ವಿಶ್ವಕಪ್ನ ಫೈನಲ್ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಸೋಲು ಕಂಡಿತ್ತು. ಆದರೆ, ಆಸ್ಟ್ರೇಲಿಯಾದೊಂದಿಗೆ ಸೇಡು ತೀರಿಸಿಕೊಳ್ಳುವುದರ ಮೂಲಕ ಭಾರತ ಈ ಬಾರಿ ಕಪ್ ಗೆದ್ದು ಬೀಗಿದೆ. ಇದಕ್ಕಾಗಿ ಭಾರತೀಯರು ಹೆಮ್ಮೆ ಪಡುತ್ತಿದ್ದಾರೆ.