ನವದೆಹಲಿ: ದುಬೈ ಇಂಟರ್ನ್ಯಾನಷಲ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ (IND vs NZ) ನಡುವೆ ಭಾನುವಾರ ನಡೆಯುವ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ( ICC Champions Trophy 2025) ಟೂರ್ನಿಯ ಫೈನಲ್ ಪಂದ್ಯದಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಗೆಲ್ಲುವವರು ಯಾರು ಎಂದು ಮಾಜಿ ಕೋಚ್ ರವಿ ಶಾಸ್ತ್ರಿ ಹೇಳಿದ್ದಾರೆ,
ರವೀಂದ್ರ ಜಡೇಜಾ ಅಥವಾ ಅಕ್ಷರ್ ಪಟೇಲ್ ಅವರಲ್ಲಿ ಒಬ್ಬರು ಪಂದ್ಯ ಶ್ರೇಷ್ಠ ಪ್ರಶಸ್ತಿ ಮುಡಿಗೇರಿಸಿಕೊಳ್ಳಲಿದ್ದಾರೆಂದು ಟೀಮ್ ಇಂಡಿಯಾ ಮಾಜಿ ಆಟಗಾರ ಭವಿಷ್ಯ ನುಡಿದಿದ್ದಾರೆ. ವಿರಾಟ್ ಕೊಹ್ಲಿ ಹಾಗೂ ವರುಣ್ ಚಕ್ರವರ್ತಿ ಭಾರತದ ಗೆಲುವಿನಲ್ಲಿ ಪ್ರಧಾನ ಪಾತ್ರ ವಹಿಸಿದ್ದರೆ, ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್ ಪ್ರಭಾವ ಬೀರುವ ಆಟಗಾರರಾಗಿದ್ದಾರೆ ಎಂದು ಹೇಳಿದ್ದಾರೆ.
ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಭಾರತ ತಂಡ ಅತ್ಯುತ್ತಮ ಪ್ರದರ್ಶನವನ್ನು ತೋರುತ್ತಿದೆ. ಆ ಮೂಲಕ ಇಲ್ಲಿಯ ತನಕ ಆಡಿದ ನಾಲ್ಕೂ ಪಂದ್ಯಗಳಲ್ಲಿ ಗೆಲುವು ಪಡೆದು ಫೈನಲ್ಗೆ ಪ್ರವೇಶ ಮಾಡಿದೆ. ಅಲ್ಲದೆ, ಮತ್ತೊಂದು ಫೈನಲಿಸ್ಟ್ ಆಗಿರುವ ನ್ಯೂಜಿಲೆಂಡ್ ತಂಡದ ವಿರುದ್ಧವೂ ರೋಹಿತ್ ಶರ್ಮಾ ಪಡೆ, ಲೀಗ್ ಹಂತದ ಕೊನೆಯ ಪಂದ್ಯದಲ್ಲಿ 44 ರನ್ಗಳಿಂದ ಗೆಲುವು ಪಡೆದಿತ್ತು.
ಹಲವರು ಭಾರತ ತಂಡ ಫೈನಲ್ ಗೆಲ್ಲುವ ನೆಚ್ಚಿನ ತಂಡವಾಗಿದೆ ಎಂದು ಅಭಿಪ್ರಾಯವನ್ನು ಮಂಡಿಸುತ್ತಿದ್ದಾರೆ. ಆದರೆ, ಐಸಿಸಿ ಟೂರ್ನಿಗಳ ನಾಕ್ಔಟ್ ಪಂದ್ಯಗಳಲ್ಲಿನ ಮುಖಾಮುಖಿ ದಾಖಲೆಯಲ್ಲಿ ಭಾರತವನ್ನು ನ್ಯೂಜಿಲೆಂಡ್ ತಂಡ ಹಿಂದಿಕ್ಕಿದೆ.
25 ವರ್ಷದ ಸೇಡು ತೀರಿಸುವ ತವಕ
ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ಯಾವ ಆಟಗಾರ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಮುಡಿಗೇರಿಸಿಕೊಳ್ಳಬಹುದೆಂದು ಭಾರತದ ಮಾಜಿ ಕೋಚ್ ರವಿ ಶಾಸ್ತ್ರಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆಲ್ರೌಂಡರ್ಗಳನ್ನು ಆಯ್ಕೆ ಮಾಡಿದ್ದಾರೆ. ಈ ಪಂದ್ಯವನ್ನು ಭಾರತ ಗೆದ್ದರೆ ರವೀಂದ್ರ ಜಡೇಜಾ ಅಥವಾ ಅಕ್ಷರ್ ಪಟೇಲ್ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆಯಬಹುದು. ಒಂದು ವೇಳೆ ಕಿವೀಸ್ ಗೆದ್ದರೆ ಅವರ ಪರ ಗ್ಲೆನ್ ಫಿಲಿಪ್ಸ್ ಮ್ಯಾನ್ ಆಫ್ ಮ್ಯಾಚ್ ಸ್ವೀಕರಿಸಬಹುದು ಎಂದು ಶಾಸ್ತ್ರಿ ಹೇಳಿದರು.
2019ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿಯೂ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ತೋರಿದ್ದ ಭಾರತ ತಂಡ, ಸೆಮಿಫೈನಲ್ವರೆಗೂ ಸೋಲಿಲ್ಲದೆ ಬಂದಿತ್ತು. ಆದರೆ, ಸೆಮಿಫೈನಲ್ನಲ್ಲಿ ಕಿವೀಸ್ ಎದುರು ಪಂದ್ಯ ಗೆಲ್ಲುವ ನೆಚ್ಚಿನ ತಂಡವಾಗಿತ್ತು. ಆದರೆ, ಮಳೆಯ ಕಾರಣ ಎರಡು ದಿನ ನಡೆದಿದ್ದ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಸೋತಿತ್ತು. ಅದೇ ರೀತಿ 2021ರ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ನಲ್ಲಿಯೂ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಕಾದಾಟ ನಡೆಸಿದ್ದವು. ಈ ಪಂದ್ಯದಲ್ಲಿಯೂ ಭಾರತ ಗೆಲ್ಲುವ ನೆಚ್ಚಿನ ತಂಡವಾಗಿತ್ತು. ಆದರೆ, ಅಂತಿಮವಾಗಿ ಭಾರತವನ್ನು ಮಣಿಸಿದ್ದ ಕೇನ್ ವಿಲಿಯಮ್ಸನ್ ನಾಯಕತ್ವದ ಕಿವೀಸ್ ಚೊಚ್ಚಲ ಟೆಸ್ಟ್ ಚಾಂಪಿಯನ್ಷಿಪ್ ಗೆದ್ದಿತ್ತು.
2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿಯೂ ಭಾರತ ತಂಡದ ಕಥೆ ಇದೇ ರೀತಿ ಇತ್ತು. ಅಂದು ಒಂದೂ ಪಂದ್ಯವನ್ನು ಸೋಲದೆ ಟೀಮ್ ಇಂಡಿಯಾ ಫೈನಲ್ಗೆ ಲಗ್ಗೆ ಇಟ್ಟಿತ್ತು. ಫೈನಲ್ನಲ್ಲಿ ಪಂದ್ಯ ಗೆಲ್ಲುವ ನೆಚ್ಚಿನ ತಂಡವಾಗಿದ್ದ ಟೀಮ್ ಇಂಡಿಯಾ, ಅನಿರೀಕ್ಷಿತವಾಗಿ ಸೋತು ಆಸ್ಟ್ರೇಲಿಯಾಗೆ ಪ್ರಶಸ್ತಿಯನ್ನು ಬಿಟ್ಟು ಕೊಟ್ಟಿತ್ತು.