ಬೆಂಗಳೂರು : ನಗರದ ಕೆ.ಆರ್.ಪುರಂನಲ್ಲಿ ಸರಣಿ ಮನೆಗಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಕುಖ್ಯಾತ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ರಾಜಸ್ಥಾನ ಮೂಲದ ಮೂವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿ ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಗಳನ್ನು ಗೋಪಾಲ್, ಕೈಲಾಸ್ ಹಾಗೂ ನಾಗೇಂದ್ರ ಸಹಾನಿ ಎಂದು ಗುರುತಿಸಲಾಗಿದೆ. ಈ ಮೂವರು ಮೂಲತಃ ರಾಜಸ್ಥಾನ ರಾಜ್ಯದವರಾಗಿದ್ದು, ಕೆಲಸ ಅರಸಿ ಬೆಂಗಳೂರಿಗೆ ಬಂದಿದ್ದರು ಎನ್ನಲಾಗಿದೆ. ಆರೋಪಿಗಳು ಕೆ.ಆರ್.ಪುರಂ ಸಮೀಪದ ಬಟ್ಟೆ ಅಂಗಡಿಯಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದರು. ಹಗಲಲ್ಲಿ ಸಾಮಾನ್ಯ ಕೆಲಸಗಾರರಂತೆ ವರ್ತಿಸುತ್ತಿದ್ದ ಇವರು, ರಾತ್ರಿ ವೇಳೆಯಲ್ಲಿ ಮನೆಗಳ್ಳತನ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ರಾತ್ರಿ ವೇಳೆ ಬೀಗ ಹಾಕಿದ್ದ ಹಾಗೂ ಜನರಿಲ್ಲದ ಮನೆಗಳನ್ನು ಟಾರ್ಗೆಟ್ ಮಾಡುತ್ತಿದ್ದ ಗ್ಯಾಂಗ್, ಮನೆಗಳ ಬೀಗ ಮುರಿದು ಚಿನ್ನಾಭರಣ ಮತ್ತು ನಗದು ಕಳವು ಮಾಡುತ್ತಿತ್ತು. ಸದ್ಯ ಬಂಧಿತರಿಂದ ಸುಮಾರು 40 ಲಕ್ಷ ರೂಪಾಯಿ ಮೌಲ್ಯದ 196 ಗ್ರಾಂ ಚಿನ್ನಾಭರಣ, ಒಂದು ಕೆಜಿ 756 ಗ್ರಾಂ ಬೆಳ್ಳಿ ಹಾಗೂ 22 ಸಾವಿರ ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ವಸ್ತುಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ.
ಪ್ರಕರಣದ ಸುಳಿವು ಬೆನ್ನಟ್ಟಿದ ಪೊಲೀಸರು ಆರೋಪಿಗಳ ಚಲನವಲನ ಪತ್ತೆಹಚ್ಚಿ ರಾಜಸ್ಥಾನಕ್ಕೆ ತೆರಳಿ ಅವರನ್ನು ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದಾರೆ. ಕಾರ್ಯಾಚರಣೆ ವೇಳೆ ಮಹತ್ವದ ಮಾಹಿತಿ ಕೂಡ ಸಂಗ್ರಹಿಸಲಾಗಿದೆ ಎಂದು ತಿಳಿದುಬಂದಿದೆ. ಈ ಯಶಸ್ವಿ ಕಾರ್ಯಾಚರಣೆಯನ್ನುಕೆ.ಆರ್.ಪುರಂ ಠಾಣೆಯ ಇನ್ಸ್ಪೆಕ್ಟರ್ ರಾಮಮೂರ್ತಿ ನೇತೃತ್ವದ ತಂಡ ನಡೆಸಿದೆ. ಆರೋಪಿಗಳ ವಿರುದ್ಧ ಹಲವು ಪ್ರಕರಣಗಳ ಸಂಪರ್ಕವಿದೆಯೇ ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ : ಬೀದರ್ನಲ್ಲಿ ಭೀಕರ ರಸ್ತೆ ಅಪಘಾತ – ಇಬ್ಬರು ಸ್ಥಳದಲ್ಲೇ ಸಾವು!



















