ಮಂಗಳೂರು : ಕರಾವಳಿ ಜನರ ದಶಕಗಳ ಭಾವನಾತ್ಮಕ ಹಾಗೂ ಸಾಂಸ್ಕೃತಿಕ ಬೇಡಿಕೆಗೆ ಸ್ಪಂದಿಸಿರುವ ರಾಜ್ಯ ಸಚಿವ ಸಂಪುಟವು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಅನ್ವಯವಾಗುವಂತೆ ‘ತುಳು’ ಭಾಷೆಯನ್ನು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಘೋಷಿಸಲು ಮಹತ್ವದ ತೀರ್ಮಾನ ಕೈಗೊಂಡಿದೆ.
ಇದರೊಂದಿಗೆ, ‘ದಕ್ಷಿಣ ಕನ್ನಡ’ ಜಿಲ್ಲೆಯ ಹೆಸರನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡುವ ಪ್ರಸ್ತಾವಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರ ಅಭಿಪ್ರಾಯ ಆಲಿಸಲು ಒಂದು ತಿಂಗಳ ಕಾಲಾವಕಾಶ ನೀಡಿ ಕರಡು ಅಧಿಸೂಚನೆ ಹೊರಡಿಸಲು ನಿರ್ಧರಿಸಲಾಗಿದೆ.
ಪಡೀಲ್ನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ‘ಪ್ರಜಾಸೌಧ’ದಲ್ಲಿ ಶುಕ್ರವಾರ ನಡೆದ ಐತಿಹಾಸಿಕ ಸಂಪುಟ ಸಭೆಯ ಬಳಿಕ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈ ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದ್ದಾರೆ. ಕರಾವಳಿ ಮತ್ತು ರಾಜ್ಯದ ಅಭಿವೃದ್ಧಿಗಾಗಿ ಸಂಪುಟ ಸಭೆಯಲ್ಲಿ ಒಟ್ಟು 32,611 ಕೋಟಿ ರೂ. ವೆಚ್ಚದ ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಕರೆಯಬೇಕೆಂಬ ಪ್ರಸ್ತಾವನೆಗೆ ಸರ್ಕಾರದ ಒಲವಿದೆ. ಆದರೆ, ಜನರ ಮತ್ತು ಸಂಘ – ಸಂಸ್ಥೆಗಳ ಅಭಿಪ್ರಾಯ ಪಡೆಯಲು ಒಂದು ತಿಂಗಳ ಕಾಲ ಕರಡು ಅಧಿಸೂಚನೆ ಪ್ರಕಟಿಸಿ ಸಾರ್ವಜನಿಕ ಸಂವಾದಕ್ಕೆ ಮುಕ್ತ ಅವಕಾಶ ನೀಡಲಾಗುವುದು ಎಂದು ಸಿಎಂ ತಿಳಿಸದ್ದಾರೆ.
ಇನ್ನು ಸಂಪುಟ ಸಭೆಯಲ್ಲಿ ಒಟ್ಟು 32,611 ಕೋಟಿ ರೂ. ಅನುದಾನದ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದ್ದು, ಇದರಲ್ಲಿ 16,000 ಕೋಟಿ ರೂ. ಗ್ರಾಮೀಣಾಭಿವೃದ್ಧಿಗೆ ಹಾಗೂ ಉಳಿದ 16,000 ಕೋಟಿಗೂ ಅಧಿಕ ಮೊತ್ತವನ್ನು ಮಂಗಳೂರು, ಉಡುಪಿ ಸೇರಿದಂತೆ ಕರಾವಳಿ ಭಾಗದ ರಸ್ತೆ, ಮೂಲಸೌಕರ್ಯ, ಬಂದರು ಹಾಗೂ ನಗರಾಭಿವೃದ್ಧಿ ಯೋಜನೆಗಳಿಗೆ ಮೀಸಲಿಡಲಾಗಿದೆ.
ಇದನ್ನೂ ಓದಿ : ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ


















