ಬೆಂಗಳೂರು: ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮುನಿರತ್ನ ವಿರುದ್ಧ ಎರಡು ಎಫ್ ಐಆರ್ ದಾಖಲಾಗಿವೆ.
ಆರ್.ಆರ್. ನಗರ ಬಿಜೆಪಿ (BJP) ಶಾಸಕ ಮುನಿರತ್ನ ವಿರುದ್ಧ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎರಡು ಎಫ್ ಐಆರ್ ದಾಖಲಾಗಿವೆ. ಜೀವ ಬೆದರಿಕೆ, ಜಾತಿ ನಿಂದನೆ ಆರೋಪದ ಹಿನ್ನೆಲೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ನನಗೆ ಕೊಲೆ ಬೆದರಿಕೆ, ಜಾತಿ ನಿಂದನೆ ಮಾಡಿದ್ದಾರೆ ಎಂದು ಗುತ್ತಿಗೆದಾರ ಚಲುವರಾಜು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದಗೆ ದೂರು ನೀಡಿದ್ದರು. ಅಲ್ಲದೇ, ರಕ್ಷಣೆಗೂ ಮನವಿ ಮಾಡಿದ್ದರು. ನಾಲ್ವರ ವಿರುದ್ಧ ಜೀವ ಬೆದರಿಕೆ ಪ್ರಕರಣ ದಾಖಲಾಗಿದೆ. ಎ1 ಶಾಸಕ ಮುನಿರತ್ನ ಆಗಿದ್ದಾರೆ. ಎ1 ಶಾಸಕ ಮುನಿರತ್ನ, ಎ2 ಆಪ್ತ ಸಹಾಯಕ ವಿಜಯ್ ಕುಮರ್, ಎ3 ಸೆಕ್ಯೂರಿಟಿ ಅಭಿಷೇಕ್ ಮತ್ತು ಎ4 ವಸಂತ್ ಕುಮಾರ್ ಆಗಿದ್ದಾರೆ.
ಶಾಸಕ ಮುನಿರತ್ನ 20 ಲಕ್ಷ ಹಣ ಕೇಳಿದ್ದರು. ಹಣ ನೀಡದಿದ್ದರೆ ರೇಣುಕಾಸ್ವಾಮಿ ರೀತಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ ಜಾತಿ ನಿಂದನೆ ಮಾಡಿದ್ದರು ಎಂದು ಚಲುವರಾಜು ಆರೋಪಿಸಿದ್ದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಶಾಸಕ ಮುನಿರತ್ನಗೆ ನೋಟಿಸ್ ನೀಡಲು ಮುಂದಾಗಿದ್ದಾರೆ.