ರಾಮನಗರ : ವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಕಾಡಾನೆಗಳು ಸಾವನ್ನಪ್ಪಿದ್ದ ಘಟನೆ ಇತ್ತೀಚೆಗೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಸುಳೆಗಾಳಿ ಗ್ರಾಮದಲ್ಲಿ ನಡೆದಿತ್ತು. ಆ ಘಟನೆ ಮಾಸುವ ಮುನ್ನವೇ ಮತ್ತೊಂದು ದುರಂತ ಸಂಭವಿಸಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲೂಕಿನ ಕೂನೂರು ಗ್ರಾಮದ ಅರ್ಕಾವತಿ ನದಿಯ ಹಾರೋಬೆಲೆ ಡ್ಯಾಂ ಹಿನ್ನೀರಿನಲ್ಲಿ ಮುಳುಗಿ ಎರಡು ಕಾಡಾನೆಗಳು ಮೃತಪಟ್ಟಿವೆ.

ಕಳೆದ ಒಂದು ವಾರದಿಂದ ಗ್ರಾಮದ ಸುತ್ತಮುತ್ತ ಏಳು ಗಂಡಾನೆಗಳು ಕಾಣಿಸಿಕೊಂಡಿದ್ದವು. ಹೀಗಾಗಿ ಅರಣ್ಯ ಇಲಾಖೆ ಸಿಬ್ಬಂದಿಗಳು ಎರಡು ದಿನಗಳ ಕೆಳಗೆ ಕಾಡಿಗೆ ಹಿಮ್ಮೆಟ್ಟಿಸುವ ಕೆಲಸ ಮಾಡಿದ್ದರು. ಈ ವೇಳೆ ಹದಿನೈದರಿಂದ ಇಪತ್ತು ವರ್ಷ ಪ್ರಾಯದ ಎರಡು ಗಂಡಾನೆಗಳು ನದಿ ದಾಟಲು ಹೋಗಿ ಜೊಂಡು (ಜಲಸಸ್ಯ) ಸಿಲುಕಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿವೆ.
ಆಹಾರ ಅರಿಸಿ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಿಂದ ಕಾಡಾನೆಗಳು ನಾಡಿಗೆ ಬಂದಿದ್ದವು. ಸದ್ಯ ಸಾವನ್ನಪ್ಪಿರುವ ಕಾಡಾನೆಗಳನ್ನು ಸಿಬ್ಬಂದಿ ನದಿಯಿಂದ ಮೇಲಕ್ಕೆತ್ತಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮರಣೋತ್ತರ ಪರೀಕ್ಷೆ ಬಳಿಕ ಅಂತ್ಯಸಂಸ್ಕಾರ ನಡೆಸಲಿದ್ದಾರೆ. ಕುನೂರು ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸದ್ಯ ಸ್ಥಳದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಮೊಕ್ಕಾಂ ಹೂಡಿದ್ದಾರೆ.
ಇದನ್ನೂ ಓದಿ : ಕಾಂಗ್ರೆಸ್ ಶಾಸಕ ಸತೀಶ್ ಸೈಲ್ಗೆ ಬಿಗ್ ಶಾಕ್ | ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿದ ಕೋರ್ಟ್



















