ಉಡುಪಿ : ಅಕ್ರಮವಾಗಿ ಭಾರತಕ್ಕೆ ಬಂದು ಮಲ್ಪೆಯಲ್ಲಿ ಬಂಧಿತರಾಗಿದ್ದ 10 ಮಂದಿ ಬಾಂಗ್ಲಾ ವಲಸಿಗರಿಗೆ ಇಲ್ಲಿನ ಜಿಲ್ಲಾ ನ್ಯಾಯಾಲಯ 2 ವರ್ಷ ಜೈಲು ಶಿಕ್ಷೆ ಮತ್ತು ತಲಾ 10 ಸಾವಿರ ರೂ. ದಂಡ ವಿಧಿಸಿದೆ.
ಬಾಂಗ್ಲಾ ದೇಶದಿಂದ ಅಕ್ರಮವಾಗಿ ಉಡುಪಿಗೆ ಬಂದಿದ್ದ ಹಕೀಮ್ ಆಲಿ, ಸುಜೋನ್ ಎಸ್.ಕೆ., ಇಸ್ಮಾಯಿಲ್ ಎಸ್.ಕೆ , ಕರೀಮ್ ಎಸ್.ಕೆ., ಸಲಾಂ ಎಸ್.ಕೆ., ರಾಜಿಕುಲ್ ಎಸ್.ಕೆ., ಮೊಹಮ್ಮದ್ ಸೋಜಿಬ್ , ರಿಮೂಲ್ , ಮೊಹಮ್ಮದ್ ಇಮಾಮ್ ಶೇಖ್, ಮೊಹಮ್ಮದ್ ಜಹಾಂಗಿರ್ ಆಲಂ ಶಿಕ್ಷೆಗೊಳಗಾದವರು.
2024ರ ಅ.11ರಂದು ಸಂಜೆ 7 ಗಂಟೆಗೆ ಮಲ್ಪೆ ಠಾಣೆ ಪಿಎಸ್ಐ ರೌಂಡ್ಸ್ ಕರ್ತವ್ಯದಲ್ಲಿರುವಾಗ ಮಲ್ಪೆ ವಡಭಾಂಡೇಶ್ವರ ಬಸ್ ನಿಲ್ದಾಣದ ಬಳಿ 7 ಜನರು ಅನುಮಾನಸ್ಪದವಾಗಿ ಲಗೇಜ್ ಸಮೇತ ಒಡಾಡುತ್ತಿದ್ದರು. ಇದನ್ನು ಕಂಡು ವಿಚಾರಿಸಿದಾಗ ಆರೋಪಿತರು ಯಾವುದೇ ಅನುಮತಿ ದಾಖಲೆಗಳನ್ನು ಪಡೆಯದೇ, ಅಕ್ರಮವಾಗಿ ನಕಲಿ ಆಧಾರ್ ಕಾರ್ಡ್ ದಾಖಲೆಗಳನ್ನು ಸೃಷ್ಟಿಸಿರುವುದು ಕಂಡುಬಂದಿತ್ತು. ಹೀಗಾಗಿ ಏಳು ಜನರನ್ನು ಬಂಧಿಸಲಾಗಿತ್ತು.
ಇನ್ನು ತನಿಖೆ ವೇಳೆ ಬಾಂಗ್ಲಾದೇಶದಿಂದ ಉಡುಪಿ ತಾಲೂಕಿನ ಪಡುತೋನ್ಸೆ ಗ್ರಾಮದ ಹೂಡೆಗೆ ಬಂದಿರುವುದಾಗಿ ಬಾಯ್ಬಿಟ್ಟಿದ್ದರು. ಅಲ್ಲದೇ ಇವರು ನೀಡಿದ ಮಾಹಿತಿಯಂತೆ ಉಳಿದ 3 ಮಂದಿ ಅಕ್ರಮ ವಲಸಿಗರನ್ನು ನಂತರ ಬಂಧಿಸಲಾಗಿತ್ತು.ಆರೋಪಿಗಳ ಪೈಕಿ ಸಿಕ್ಕಿಂ ಅಗರ್ತಲಾದ ಕಾಜೋಲ್ ಎಂಬಾತ ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿದ್ದು,ಹಾಗೇ ಮತ್ತೋರ್ವ ಆರೋಪಿ ಉಸ್ಮಾನ್ ಎಂಬಾತ ಅಕ್ರಮವಾಗಿ ಕರೆತಂದು ಉದ್ಯೋಗಕ್ಕೆ ವ್ಯವಸ್ಥೆ ಮಾಡಿದ್ದರು ಎಂದು ತಿಳಿದುಬಂದಿದೆ
ಇವರು ಭಾರತ ದೇಶದ ಯಾವುದೇ ಅನುಮತಿ ದಾಖಲೆಗಳನ್ನು ಪಡೆಯದೇ, ಅಕ್ರಮವಾಗಿ ನಕಲಿ ಆಧಾರ್ ಕಾರ್ಡ್ಗಳನ್ನು ಸೃಷ್ಟಿಸಿ ಬಾಂಗ್ಲಾ ದೇಶದಿಂದ ಉಡುಪಿ ತಾಲ್ಲೂಕಿನ ಪಡುತೋನ್ಸೆ ಗ್ರಾಮದ ಹೂಡೆಗೆ ಬಂದಿದ್ದರು ಎಂದು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು. ಇದೀಗ ಓದಿ : ಜಿಲ್ಲಾ ಪಂಚಾಯಿತಿಯಲ್ಲಿ ಪ್ರಾಜೆಕ್ಟ್ ಮ್ಯಾನೇಜರ್ ಹುದ್ದೆ ನೇಮಕ : 30 ಸಾವಿರ ರೂ. ಸಂಬಳ



















