ನವದೆಹಲಿ: ಕರ್ನಾಟಕ ಸೇರಿ ದೇಶದ ತೆಂಗು ಬೆಳೆಗಾರರಿಗೆ ಕೇಂದ್ರ ಸರ್ಕಾರವು ಬಜೆಟ್ ನಲ್ಲಿ ಗುಡ್ ನ್ಯೂಸ್ ನೀಡಿದೆ. ರೈತರಿಗಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹಲವು ಘೋಷಣೆ ಮಾಡಿದರು. ಗ್ರಾಮ ಹಾಗೂ ಪಟ್ಟಣಗಳಲ್ಲಿ ಪಶು ಸಂಗೋಪನೆಗೆ ಉತ್ತೇಜನ ನೀಡಲಾಗುವುದು. ಇದಕ್ಕಾಗಿ ಸಾಲ ಸೌಲಭ್ಯ ನೀಡಲಾಗುತ್ತದೆ. ರೈತರ ಆದಾಯ ಹೆಚ್ಚಿಸಲು ತೆಂಗು, ಶ್ರೀಗಂಧ ಸೇರಿ ಹಲವು ಬೆಳೆಗಳಿಗೆ ಸಹಕಾರ ನೀಡಲಾಗುವುದು. 1.3 ಕೋಟಿ ರೈತರು ತೆಂಗು ಬೆಳೆಯಲ್ಲಿ ತೊಡಗಿದ್ದಾರೆ. ಇವರಿಗಾಗಿ ಕೇಂದ್ರ ಸರ್ಕಾರ ನೆರವು ನೀಡುತ್ತದೆ. ಇದಕ್ಕಾಗಿಯೇ ಪ್ರತ್ಯೇಕ ಯೋಜನೆ ಆರಂಭಿಸಲಾಗುತ್ತದೆ. ಇದರೊಂದಿಗೆ ತೆಂಗು ಉತ್ಪಾದನೆ, ಸಂಸ್ಕರಣೆ ಹಾಗೂ ರಫ್ತಿಗೆ ಆದ್ಯತೆ ನೀಡಲಾಗುತ್ತದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದರು. ಶ್ರೀಗಂಧದ ಬೆಳೆಗಾಗಿ ರಾಜ್ಯಗಳೊಂದಿಗೆ ಕೇಂದ್ರ ಸರ್ಕಾರ ಕೆಲಸ ಮಾಡಲಿದೆ ಎಂದೂ ಹೇಳಿದರು.
ಬಜೆಟ್ ಭಾಷಣದಲ್ಲಿ ನಿರ್ಮಲಾ ಸೀತಾರಾಮನ್ ಅವರು ಹಲವು ವಿಷಯಗಳನ್ನು ಪ್ರಸ್ತಾಪಿಸಿದರು. ಕಳೆದ 10 ವರ್ಷದಲ್ಲಿ 25 ಕೋಟಿ ಮಂದಿ ಬಡತನದಿಂದ ಮುಕ್ತರಾಗಿದ್ದಾರೆ. ಇದು ವಿಕಸಿತ ಭಾರತದ ಪ್ರಮುಖ ಮುನ್ನಡೆಯಾಗಿದೆ ಎಂದು ಹೇಳಿದರು. ಆಯುರ್ವೇದ ಔಷಧ ಉತ್ಪನ್ನಗಳ ರಫ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ಮೂರು ಅಖಿಲ ಭಾರತ ಆಯುರ್ವೇದ ಸಂಶೋಧನಾ ಸಂಸ್ಥೆಗಳನ್ನು (ಏಮ್ಸ್) ಸ್ಥಾಪಿಸುವ ಮೂಲಕ ರಫ್ತಿಗೆ ಉತ್ತೇಜನ ನೀಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದರು. ಹಾಗೆಯೇ, ಆರೋಗ್ಯ ಕ್ಷೇತ್ರದಲ್ಲಿ ತಂತ್ರಜ್ಞಾನದ ಅಳವಡಿಕೆಗೂ ಉತ್ತೇಜನ ನೀಡಲಾಗುವುದು ಎಂದು ತಿಳಿಸಿದರು.
ಪಶ್ಚಿಮ ಬಂಗಾಳದ ಡಾಂಗ್ಕುನಿಂದ ಸೂರತ್ ವರೆಗೆ ಸರಕು ಸಾಗಣೆ ಕಾರಿಡಾರ್ ನಿರ್ಮಿಸಲಾಗುವುದು. ಪರಿಸರ ಸ್ನೇಹಿ ಸರಕು ಸಾಗಣೆಗೆ ಉತ್ತೇಜನ ನೀಡುವ ದಿಸೆಯಲ್ಲಿ ಕಾರಿಡಾರ್ ನಿರ್ಮಾಣ ಮಾಡಲಾಗುತ್ತದೆ. ಪ್ರತಿ ಜಿಲ್ಲೆಯಲ್ಲಿ ಹೆಣ್ಣುಮಕ್ಕಳಿಗಾಗಿ ಹಾಸ್ಟೆಲ್ ನಿರ್ಮಾಣ ಮಾಡಲಾಗುತ್ತದೆ ಎಂದು ಕೂಡ ಹೇಳಿದರು.
ದಿವ್ಯಾಂಗರ ಕೌಶಲ ವೃದ್ಧಿ
ದಿವ್ಯಾಂಗ ಸಹಾರ ಯೋಜನೆ ಮೂಲಕ ದೇಶದ ದಿವ್ಯಾಂಗರ ಕೌಶಲ ಅಭಿವೃದ್ಧಿಗೆ ನೆರವು ನೀಡಲಾಗುತ್ತದೆ. ಅಲ್ಲದೆ, ದಿವ್ಯಾಂಗರಿಗೆ ಅನುಕೂಲವಾಗುವ ಡಿವೈಸ್ ಗಳನ್ನು ಉತ್ಪಾದನೆ ಮಾಡಲಾಗುತ್ತದೆ. ಇದಕ್ಕಾಗಿ ಆಧುನಿಕ ತಂತ್ರಜ್ಞಾನವನ್ನು ಅಳವಡಿಸಲಾಗುತ್ತದೆ ಎಂದು ಹೇಳಿದರು.
ಇದನ್ನೂ ಓದಿ: Union Budget 2026 | ಮೂರು ಕರ್ತವ್ಯಗಳನ್ನು ಪಟ್ಟಿ ಮಾಡಿದ ನಿರ್ಮಲಾ ಸೀತಾರಾಮನ್



















