ಬೆಂಗಳೂರು : ಜೆಡಿಎಸ್ ಎಂಎಲ್ಸಿ ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪದಡಿ ದಾಖಲಾಗಿರುವ ಪ್ರಕರಣದ ಎ2 ಆರೋಪಿ ಶಿವಕುಮಾರ್ ಮಾಫಿ ಸಾಕ್ಷಿಯಾಗಲು ಮುಂದಾಗಿದ್ದು, ಈ ಹಿಂದೆ ಏಪ್ರಿಲ್ ತಿಂಗಳಲ್ಲಿ ತಮ್ಮ ವಕೀಲರ ಸಲಹೆ, ಒತ್ತಾಯದ ಮೇರೆಗೆ ನ್ಯಾಯಾಲಯದ ಮುಂದೆ ಹೇಳಿಕೆ ನೀಡಲು ಸಮ್ಮತಿ ಸೂಚಿಸಿದ್ದರು.
ಯೋಗೇಶ್ ಗೌಡ ಕೊಲೆ ಕೇಸಲ್ಲಿ ಆರೋಪಿ ಬಸವರಾಜ ಮುತ್ತಗಿ ಮಾಫಿ ಸಾಕ್ಷಿಯಾಗಿದ್ದ ಬೆಳವಣಿಗೆಯನ್ನು ಉಲ್ಲೇಖಿಸಿ ಎ2 ಆರೋಪಿ ಶಿವಕುಮಾರ್, ಸೂರಜ್ ರೇವಣ್ಣ ಪ್ರಕರಣದಲ್ಲೂ ಮಾಫಿ ಸಾಕ್ಷಿಯಾಗಲು ಅವಕಾಶ ನೀಡುವಂತೆ ನ್ಯಾಯಾಲಯಕ್ಕೆ ತಮ್ಮ ವಕೀಲರ ಮೂಲಕ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಆಕ್ಷೇಪಣೆ ಸಲ್ಲಿಸಿದ್ದ ಸೂರಜ್ ರೇವಣ್ಣ ಪರ ವಕೀಲ ಮಿತ್ತಳಿಕೆ ಗಂಗಾಧರ ಶೆಟ್ಟಿ ಅವರು, ಜೂನ್ ತಿಂಗಳಲ್ಲಿ ಅರ್ಜಿಯನ್ನು ವಜಾಗೊಳಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.
ಇದೀಗ ಆರೋಪಿ ಶಿವಕುಮಾರ್ 42ನೇ ಎಸಿಜೆಎಂ ಕೋರ್ಟ್ಗೆ ಅರ್ಜಿ ಸಲ್ಲಿಸಿ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಮನವಿ ಮಾಡಿರುವ ಅರ್ಜಿಯ ವಿಚಾರಣೆ ನಡೆದಿದ್ದು, ಈ ವೇಳೆ ಹಲವು ಕಾನೂನು ಅಂಶಗಳ ಕುರಿತು ವಾದ-ಪ್ರತಿವಾದಗಳು ನಡೆದಿವೆ.
ಶಿವಕುಮಾರ್ ಸಲ್ಲಿಸಿರುವ ಅರ್ಜಿಗೆ ಸೂರಜ್ ರೇವಣ್ಣ ಪರ ವಕೀಲ ಮಿತ್ತಳಿಕೆ ಗಂಗಾಧರ ಶೆಟ್ಟಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಶಿವಕುಮಾರ್ ಸಲ್ಲಿಸಿರುವ ಅರ್ಜಿಯನ್ನು ತಿರಸ್ಕರಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದು, ಸಾಕ್ಷಿಯಾಗಲು ಅವಕಾಶ ನೀಡಬಾರದು ಎಂದು ವಾದ ಮಂಡಿಸಿದ್ದಾರೆ.
ಸದ್ಯ ಈ ಪ್ರಕರಣದ ಹೊಸ ಬೆಳವಣಿಗೆ ಚರ್ಚೆಗೆ ಕಾರಣವಾಗಿದ್ದು, ಶಿವಕುಮಾರ್ಗೆ ಸಾಕ್ಷಿಯಾಗಲು ಸ್ಥಾನಮಾನ ನೀಡಬೇಕೇ ಅಥವಾ ಬೇಡವೇ ಎಂಬ ಬಗ್ಗೆ ನ್ಯಾಯಾಲಯದ ತೀರ್ಪಿನ ಮೇಲೆ ಪ್ರಕರಣದ ಮುಂದಿನ ತನಿಖೆಯ ದಿಕ್ಕು ನಿರ್ಧಾರವಾಗುವ ಸಾಧ್ಯತೆಯಿದೆ.
ಶಿವಕುಮಾರ್ ಮೇಲಿರುವ ಆರೋಪವೇನು?
ಸಂತ್ರಸ್ತ ಯುವಕನನ್ನು ಬೆದರಿಸಿ, ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳನ್ನು ಅಳಿಸಲು ಮತ್ತು ದೂರು ನೀಡದಂತೆ ಒತ್ತಡ ಹೇರಲು ಎ2 ಆರೋಪಿ ಶಿವಕುಮಾರ್ ಸಹಕರಿಸಿದ್ದ ಎಂಬ ಆರೋಪವಿದೆ.
ಪ್ರಕರಣದ ಹಿನ್ನೆಲೆ ;
ಜೆಡಿಎಸ್ ಕಾರ್ಯಕರ್ತರೊಬ್ಬರು ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದರು. ಈ ಸಂಬಂಧ 2024ರ ಜೂ.22ರಂದು ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಮೇರೆಗೆ ಸೂರಜ್ ರೇವಣ್ಣ ಮತ್ತು ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಿದ್ದ ಪೊಲೀಸರು ಜೂ.23ರಂದು ಸೂರಜ್ ರೇವಣ್ಣ ಅವರನ್ನು ಬಂಧಿಸಿ ಜೈಲಿಗಟ್ಟಿದ್ದರು. ಸುಮಾರು ತಿಂಗಳ ಕಾಲ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿದ್ದ ಸೂರಜ್ ರೇವಣ್ಣ ಬಳಿಕ ಜಾಮೀನು ಪಡೆದು ಬಿಡುಗಡೆಯಾಗಿದ್ದರು.
ಇದನ್ನೂ ಓದಿ : ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ ; ಲಾರಿ-ಕ್ರೂಸರ್ ಮುಖಾಮುಖಿ ಡಿಕ್ಕಿಯಾಗಿ 6 ಮಂದಿ ದುರ್ಮರಣ



















