ಚಿಕ್ಕಮಗಳೂರು: ಅಂಗನವಾಡಿ ಕೇಂದ್ರಗಳ ಶಿಕ್ಷಕರ ಹುದ್ದೆಗೆ ಉರ್ದು ಭಾಷೆ ಕಡ್ಡಾಯ ಮಾಡಿದ್ದು, ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಸರ್ಕಾರ ಈ ನಡೆಗೆ ಕನ್ನಡಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ.
ಉರ್ದು ಭಾಷೆ ಕಡ್ಡಾಯಗೊಳಿಸಿರುವ ನಿರ್ಧಾರದ ಬಗ್ಗೆ ವಿರೋಧ ಪಕ್ಷ ಬಿಜೆಪಿ ಟೀಕಿಸಿದ್ದು, ಇದು ಕಾಂಗ್ರೆಸ್ ಸರ್ಕಾರದ “ಮುಸ್ಲಿಂ ತುಷ್ಟೀಕರಣ” ಎಂದು ಆರೋಪಿಸಿದೆ. ಅಲ್ಲದೇ, ಉಗ್ರ ಹೋರಾಟ ಎಚ್ಚರಿಕೆಯನ್ನು ಕನ್ನಡಪರ ಸಂಘಟನೆಗಳು ನೀಡಿವೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಹೊರಡಿಸಿದ್ದ ಅಧಿಸೂಚನೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಅಂಗನವಾಡಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿತ್ತು. ಆ ಪ್ರದೇಶದಲ್ಲಿ ಮುಸ್ಲಿಂ ಸಮುದಾಯ ಹೆಚ್ಚಿದ್ದು, ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಉರ್ದು ಕಡ್ಡಾಯವಾಗಿ ತಿಳಿದಿರಬೇಕು ಎಂದು ಹೇಳಲಾಗಿದೆ. ಸದ್ಯ ಇದು ದೊಡ್ಡ ವಿವಾದಕ್ಕೆ ಕಾರಣವಾಗಿದೆ.
ಈ ಕುರಿತು ಗ್ಗೆ ಟ್ವೀಟ್ ಮಾಡಿರುವ ತೇಜಸ್ವಿ ಸೂರ್ಯ, ಕನ್ನಡಿಗರ ಮೇಲೆ ಉದ್ದೇಶ ಪೂರ್ವಕವಾಗಿ ಉರ್ದು ಹೇರಿಕೆಯ ರಾಜ್ಯ ಸರ್ಕಾರದ ಕ್ರಮವು, ಟಿಪ್ಪು ಮತ್ತು ಹೈದರಾಲಿ ಮಾದರಿಯ ಕನ್ನಡ ದಮನನೀತಿಯ ಮುಂದುವರಿದ ಭಾಗವಾಗಿದೆ. ಟಿಪ್ಪುವನ್ನು ಪರಮ ಆದರ್ಶವನ್ನಾಗಿ ಅಂಗೀಕರಿಸಿರುವ, ಕಳೆದ 1 ವರ್ಷದಿಂದ ಒಂದು ಸಮುದಾಯದ ಅತಿಯಾದ ತುಷ್ಟೀಕರಣ ನೀತಿಯನ್ನು ಆಡಳಿತದ ಪರಮ ಧ್ಯೇಯವನ್ನಾಗಿ ಮಾಡಿಕೊಂಡಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಗಳು ಕನ್ನಡದ ಅಸ್ಮಿತೆಗೆ, ಕನ್ನಡಿಗರಿಗೆ ಮಾಡುತ್ತಿರುವ ಅತೀ ದೊಡ್ಡ ಅಪಮಾನ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.