ನವದೆಹಲಿ: ರಾಜ್ಯ ಬಿಜೆಪಿ ಬಿಕ್ಕಟ್ಟು ಈಗ ಮತ್ತೆ ದೆಹಲಿ ಅಂಗಳ ತಲುಪಿದೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಬಸನಗೌಡ ಪಾಟೀಲ್ ಯತ್ನಾಳ್ ಬಣವು ಇನ್ನಿಲ್ಲದ ಪ್ರಯತ್ನ ಮಾಡುತ್ತಿರುವ ಮಧ್ಯೆಯೇ ಬಿ.ವೈ.ವಿಜಯೇಂದ್ರ ಅವರು ದಿಢೀರನೆ ದೆಹಲಿಗೆ ತೆರಳಿದ್ದಾರೆ. ಇದರ ಬೆನ್ನಲ್ಲೇ, ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದ ಭಿನ್ನರ ಬಣವು ಕೂಡ ದೆಹಲಿಗೆ ತೆರಳಿದ್ದು, ಎರಡೂ ಬಣಗಳ ನಡೆಯು ತೀವ್ರ ಕುತೂಹಲ ಕೆರಳಿಸಿದೆ.
ಬಿ.ವೈ.ವಿಜಯೇಂದ್ರ (Vijayendra)ಅವರು ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿದ್ದಾರೆ ಎನ್ನಲಾಗುತ್ತಿದೆ. ಹಾಗೆ ನೋಡಿದರೆ, ವಿಜಯೇಂದ್ರ ಅವರು ಸೋಮವಾರ ರಾಜನಹಳ್ಳಿಯಲ್ಲಿ ನಡೆಯಲಿರುವ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ, ಹೈಕಮಾಂಡ್ ಬುಲಾವ್ ನೀಡಿದ ಕಾರಣ ಅವರು ದಿಢೀರನೆ ದೆಹಲಿಗೆ ತೆರಳಿದ್ದಾರೆ ಎನ್ನಲಾಗಿದೆ. ವಿಜಯೇಂದ್ರ ಆಪ್ತ ಮೂಲಗಳ ಪ್ರಕಾರ, ಅವರು ಖಾಸಗಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿದ್ದಾರೆ ಎಂದು ತಿಳಿದುಬಂದಿದೆ. ಆದರೂ, ವಿಜಯೇಂದ್ರ ದೆಹಲಿ ಭೇಟಿಯು ಕುತೂಹಲ ಕೆರಳಿಸಿದೆ.
ಮತ್ತೊಂದೆಡೆ, ದೆಹಲಿಯಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ಅವರ ಸರ್ಕಾರಿ ಕಚೇರಿ ಉದ್ಘಾಟನೆ ನೆಪದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಸೇರಿ ಹಲವು ಬಂಡಾಯ ನಾಯಕರು ಮತ್ತೆ ದೆಹಲಿಗೆ ತೆರಳಿದ್ದಾರೆ. ಇದರೊಂದಿಗೆ, ವಿ. ಸೋಮಣ್ಣ ಅವರ ಕಾರ್ಯಕ್ರಮದ ಹೆಸರಿನಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಲು ಯತ್ನ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಒಟ್ಟಿನಲ್ಲಿ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಬೇಕು, ನಾನೇ ಬಿಜೆಪಿ ರಾಜ್ಯಾಧ್ಯಕ್ಷ ಎಂಬ ಹಂಬಲದಲ್ಲಿರುವ ಯತ್ನಾಳ್ ಅವರ ಸತತ ಪ್ರಯತ್ನವು ಮುಂದೆ ಏನಾಗುತ್ತದೆ ಎಂಬ ಕುತೂಹಲ ಮೂಡಿಸಿದೆ. ಇಬ್ಬರೂ ನಾಯಕರು ದೆಹಲಿಯಲ್ಲಿರುವ ಕಾರಣ ಹೈಕಮಾಂಡ್ ಭೇಟಿಯಾದರೂ ಅಚ್ಚರಿಯಿಲ್ಲ ಎನ್ನಲಾಗುತ್ತಿದೆ.