ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಬಿ.ವೈ. ವಿಜಯೇಂದ್ರ ರಾಜೀನಾಮೆಗೆ ಆಗ್ರಹಿಸಿದ್ದಾರೆ.
ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಈ ಮೂಲಕ ಸಿದ್ದರಾಮಯ್ಯ ಮುಖ್ಯಮಂತ್ರಿ ಕಚೇರಿಯ ಘನತೆ ಕಾಪಾಡಬೇಕು ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ವಿರುದ್ಧದ ಮುಡಾ ಹಗರಣದ ದೂರಿನ ಮೇಲೆ ಕಾನೂನು ಕ್ರಮಕ್ಕೆ ಅಧಿಕಾರ ನೀಡಲು ರಾಜ್ಯಪಾಲರು ತಮ್ಮ ಸಾಂವಿಧಾನಿಕ ಅಧಿಕಾರ ಚಲಾಯಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ, ಅಕ್ರಮಗಳ ಬಗ್ಗೆ ಸಾಕಷ್ಟು ಪುರಾವೆಗಳು ಇವೆ. ಗಂಭೀರ ಆರೋಪಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವುದು ನಿರ್ಣಾಯಕವಾಗಿದೆ. ಅವರು ರಾಜೀನಾಮೆ ನೀಡಿ ಪಾರದರ್ಶಕ ಮತ್ತು ನಿಷ್ಪಕ್ಷಪಾತ ತನಿಖೆಗೆ ಅವಕಾಶ ಕಲ್ಪಿಸಿ, ಮುಖ್ಯಮಂತ್ರಿ ಕಚೇರಿಯ ಘನತೆ ಕಾಪಾಡಬೇಕಿದೆ. ಅವರಿಗೆ ನ್ಯಾಯ ಸಿಗುತ್ತದೆ ಎಂದು ಬರೆದುಕೊಂಡಿದ್ದಾರೆ.
ಕೇಸ್ ನಲ್ಲಿದ್ದ ಅನುಮಾನಗಳಿಗೆ ವಿಧಾನಸಭೆಯಲ್ಲಿ ಸ್ಪಷ್ಟನೆ ಕೊಡಲು ಸಿದ್ದರಾಮಯ್ಯಗೆ ಅವಕಾಶವಿತ್ತು. ಆದರೆ ಅವರು ಕಲಾಪದಿಂದ ಓಡಿ ಹೋದರು. ಸಾಮಾಜಿಕ ಕಾರ್ಯಕರ್ತರು ಪ್ರಾಸಿಕ್ಯೂಷನ್ ಗೆ ಮನವಿ ಮಾಡಿದ್ದರು. ಈಗ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಮುಡಾ ವಿರುದ್ಧದ ನಮ್ಮ ಹೋರಾಟ ಯಶಸ್ವಿ ನೀಡಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.