ಬೆಂಗಳೂರು: ಬೇಸಿಗೆ ಆಗಮಿಸಿದೆ. ಈ ವೇಳೆ ಸಿಲಿಕಾನ್ ಸಿಟಿಯ ಹಲವೆಡೆ ಕುಡಿಯುವ ನೀರಿನ ಸಮಸ್ಯೆ ಉಂಟಾಗುತ್ತಿದೆ. ಹೀಗಾಗಿ ಕುಡಿಯುವ ನೀರನ್ನು ಪೋಲು ಮಾಡದಂತೆ ಎಚ್ಚರಿಕೆ ನೀಡಲಾಗಿದೆ. ಎಚ್ಚರಿಕೆಯ ಮಧ್ಯೆಯೂ ಪೋಲು ಮಾಡಿದವರ ವಿರುದ್ಧ ಈಗ ಸಮರ ಸಾರಲಾಗಿದೆ.
ಕುಡಿಯುವ ನೀರು ಪೋಲು ಮಾಡುತ್ತಿದ್ದ 112 ಪ್ರಕರಣಗಳಲ್ಲಿ ದಂಡ ವಿಧಿಸಲಾಗಿದೆ. ಒಂದು ವಾರದಲ್ಲಿ ಇಷ್ಟೊಂದು ಸಂಖ್ಯೆಯಲ್ಲಿ ದಂಡ ವಿಧಿಸಲಾಗಿದೆ. ಅನಗತ್ಯ ಪೋಲು ಮಾಡಿದವರಿಂದ 5.60 ಲಕ್ಷ ರೂ. ದಂಡ ವಸೂಲಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯ ಅಧ್ಯಕ್ಷರಾದ ಡಾ ರಾಮ್ ಪ್ರಸಾತ್ ಮನೋಹರ್ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬೇಸಿಗೆಯಲ್ಲಿ ಎಲ್ಲರಿಗೂ ಶುದ್ದ ಕುಡಿಯುವ ನೀರನ್ನು ಸಮರ್ಪಕವಾಗಿ ಸರಬರಾಜು ಮಾಡುವ ನಿಟ್ಟಿನಲ್ಲಿ ಫೆ.17 ರಂದು, ಕುಡಿಯುವ ನೀರನ್ನು ಅನಗತ್ಯ ಪೋಲು ಮಾಡದಂತೆ ಜಲಮಂಡಳಿಯಿಂದ ಸುತ್ತೋಲೆ ಹೊರಡಿಸಲಾಗಿತ್ತು. ನಗರದಲ್ಲಿ ಪ್ರತಿದಿನ ಉಷ್ಣಾಂಶ ಏರುತ್ತಿದೆ. ಇತ್ತೀಚಿನ ದಿನಗಳಲ್ಲಿ ಮಳೆಯ ಕೊರತೆಯಿಂದ ಅಂತರ್ಜಲ ಕುಸಿತವಾಗಿದ್ದು, ಮುಂದಿನ ಬೇಸಿಗೆಯಲ್ಲಿ ಅಂತರ್ಜಲ ಕುಸಿತದಿಂದ ನೀರಿನ ಅಭಾವ ಎದುರಾಗಬಹುದು ಎಂದು ಐಐಎಸ್ಸಿ ವಿಜ್ಞಾನಿಗಳು ತಮ್ಮ ವರದಿಯಲ್ಲಿ ಹೇಳಿದ್ದಾರೆ.
ಹೀಗಾಗಿ ಈಗಿನಿಂದಲೇ ಸಾರ್ವಜನಿಕರು ಕುಡಿಯುವ ನೀರನ್ನು ಸಮರ್ಪಕವಾಗಿ ಬಳಸಬೇಕು. ಅನಗತ್ಯವಾಗಿ ನೀರು ಪೋಲು ಮಾಡುವುದನ್ನು ತಡೆಯುವುದು ಈ ಆದೇಶದ ಉದ್ದೇಶವಾಗಿತ್ತು. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಕಾಯ್ದೆ – 1964 ರ ಕಲಂ 33 ಮತ್ತು 34ರಂತೆ ಬೆಂಗಳೂರು ನಗರದಲ್ಲಿ ಕುಡಿಯುವ ನೀರನ್ನು, ವಾಹನಗಳ ಸ್ವಚ್ಚತೆಗೆ, ಕೈದೋಟಕ್ಕೆ, ಕಟ್ಟಡ ನಿರ್ಮಾಣಕ್ಕೆ, ಮನೋರಂಜಕವಾಗಿ ಕಾರಂಜಿಯಂತಹ ಆಕರ್ಷಕ ವ್ಯವಸ್ಥೆಗೆ, ಸಿನಿಮಾ ಮಂದಿರ ಮತ್ತು ಮಾಲ್ಗಳಲ್ಲಿ ಇನ್ನಿತರೆ ಕಾರ್ಯಕ್ಕೆ ಬಳಸುವಂತಿಲ್ಲ. ರಸ್ತೆ ನಿರ್ಮಾಣ ಹಾಗೂ ಸ್ವಚ್ಛತೆಗೆ ಶುದ್ದ ಕುಡಿಯುವ ನೀರಿನ ಬಳಕೆ ಮಾಡುವುದನ್ನು ನಿಷೇಧಿಸಲಾಗಿತ್ತು ಎಂದು ಹೇಳಿದ್ದಾರೆ.
ಕಳೆದ 7 ದಿನಗಳಲ್ಲಿ ನಮ್ಮ ಮಂಡಳಿ ಸಿಬ್ಬಂದಿ ಕುಡಿಯುವ ನೀರನ್ನು ಪೋಲು ಮಾಡಿದವರ ವಿರುದ್ದ ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿದ ದಂಡ ವಸೂಲಿ ಮಾಡಲು ಮುಂದಾಗಿದ್ದೇವೆ ಎಂದು ಜಲಮಂಡಳಿ ಅಧ್ಯಕ್ಷರು ಹೇಳಿದ್ದಾರೆ.
ಫೆ.23 ರ ವರೆಗೆ ಒಟ್ಟಾರೆಯಾಗಿ 112 ಪ್ರಕರಣಗಳನ್ನು ದಾಖಲಿಸಲಾಗಿದೆ. ದಕ್ಷಿಣ ವಲಯದಲ್ಲಿ ಹೆಚ್ಚು ಪ್ರಕರಣಗಳು ಅಂದರೆ ಬರೋಬ್ಬರಿ 33 ಪ್ರಕರಣಗಳು ದಾಖಲಾಗಿವೆ. ಉತ್ತರ ವಲಯದಲ್ಲಿ 23, ಪಶ್ಚಿಮ ವಲಯದಲ್ಲಿ 28, ಪೂರ್ವ ವಲಯದಲ್ಲಿ 28 ಪ್ರಕರಣಗಳು ದಾಖಲಾಗಿವೆ.
ಬೆಂಗಳೂರು ನಗರಕ್ಕೆ ಸುಮಾರು 100 ಕಿ.ಮೀ. ದೂರದಿಂದ ಕುಡಿಯುವ ನೀರನ್ನು ಸರಬರಾಜು ಮಾಡಲಾಗುತ್ತಿದೆ. ಅಂತರ್ಜಲ ಕುಸಿತದಿಂದ ನೀರಿನ ಕೊರತೆ ಹೆಚ್ಚಾಗಬಹುದು. ಹೀಗಾಗಿ ಸಾರ್ವಜನಿಕರು ಶುದ್ದ ಕುಡಿಯುವ ನೀರನ್ನು ಅನಗತ್ಯವಾಗಿ ಪೋಲು ಮಾಡುವುದನ್ನು ನಿಲ್ಲಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ದಂಡ ಅಭಿಯಾನವನ್ನು ಮತ್ತಷ್ಟು ವ್ಯಾಪಕಗೊಳಿಸಲಾಗುವುದು ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.