ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಪ್ರಕರಣದ ಕುರಿತು ಚರ್ಚೆ ನಡೆಸಿದ್ದಾರೆ.
ದರ್ಶನ್ ಹಾಗೂ ಗ್ಯಾಂಗ್ ವಿರುದ್ಧ ತನಿಖಾಧಿಕಾರಿಗಳು ಚಾರ್ಜ್ ಶೀಟ್ ಸಿದ್ಧಪಡಿಸುತ್ತಿದ್ದು ಆಗಸ್ಟ್ ಎರಡನೇ ವಾರದಲ್ಲಿ ಚಾರ್ಜ್ ಶೀಟ್ ಸಲ್ಲಿಕೆ ಆಗಲಿದೆ. ಈ ಮಧ್ಯೆ ವಿಜಯಲಕ್ಷ್ಮಿ ಅವರು ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ತೆರಳಿ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಸಹೋದರ ದಿನಕರ್ ತೂಗುದೀಪ್, ನಿರ್ದೇಶಕ ಪ್ರೇಮ್ ಇದ್ದರು.
ಈ ವಿಷಯವಾಗಿ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್, ನಾನು ಕೆಂಪೇಗೌಡ ಜಯಂತಿ ಕಾರ್ಯಕ್ರಮಕ್ಕೆ ಹೋಗಿದ್ದೆ, ಅಲ್ಲಿ ಭೇಟಿ ಮಾಡಲು ಬಂದಿದ್ದರು. ಅಲ್ಲಿ ಭೇಟಿ ಮಾಡೋಕೆ ಆಗಲಿಲ್ಲ, ನಾಳೆ ಮನಗೆ ಬನ್ನಿ ಎಂದು ಹೇಳಿದ್ದೆ. ಅವರ ಮಗ ವಿನೀಷ್ ನಮ್ಮ ಶಾಲೆಯಲ್ಲಿ ಓದುತ್ತಿದ್ದ. ಆ ನಂತರ ಬೇರೆ ಶಾಲೆಗೆ ಸೇರಿಸಿದ್ದರು. ಈಗ ಮತ್ತೆ ನಮ್ಮ ಶಾಲೆಗೆ ಸೇರಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ. ನಾನು ಫ್ರಿನ್ಸಿಫಲ್ ಗೆ ಹೇಳುತ್ತೇನೆ ಎಂದು ಭರವಸೆ ನೀಡಿದ್ದೇನೆ. ಕೇಸ್ ವಿಚಾರವಾಗಿ ಮಾತನಾಡಿಲ್ಲ ಎಂದು ಹೇಳಿದ್ದಾರೆ.
ಈಗ ಕಾನೂನು ಕ್ರಮ ನಡೆಯುತ್ತಿದೆ. ಇಂಥಹಾ ಸಮಯದಲ್ಲಿ ಮಧ್ಯೆ ಪ್ರವೇಶ ಮಾಡಲು ಆಗುವುದಿಲ್ಲ. ಕಾನೂನು ಚೌಕಟ್ಟು ಅಡಿ ಏನಾದರೂ ಮಾಡೋಣ ಎಂದು ನಿನ್ನೆ ಹೇಳಿದ್ದೆ. ನಾನು ಈ ವಿಚಾರದಲ್ಲಿ ಮಧ್ಯ ಬರೋದಿಲ್ಲ, ಸ್ಕೂಲ್ ವಿಚಾರದಲ್ಲಿ ಅಷ್ಟೇ ನಾನು ಮಾತನಾಡುತ್ತೇವೆ, ಸಹಾಯ ಮಾಡುತ್ತೇನೆ’ ಎಂದು ಹೇಳಿದ್ದಾರೆ.


















