ಬೆಂಗಳೂರು: ಕರ್ನಾಟಕದಲ್ಲಿರುವುದು ಶೇ. 40 ಸರ್ಕಾರವಲ್ಲ, ಶೇ. 80 ಸರ್ಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ನಮ್ಮ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ 40% ಕಮಿಷನ್ ಎಂಬ ಸುಳ್ಳು ಅಪಪ್ರಚಾರ ನಡೆಸಿದ್ದ ಕಾಂಗ್ರೆಸ್ ಪಕ್ಷದ ಆರೋಪ ಆಧಾರರಹಿತ ಹಾಗೂ ಹಸೀ ಸುಳ್ಳು ಎಂಬುದು ಇದೀಗ ಲೋಕಾಯುಕ್ತ ತನಿಖೆಯಲ್ಲೇ ಬಹಿರಂಗವಾಗಿದೆ. ಭ್ರಷ್ಟತೆಯ ಕೂಪದಲ್ಲಿ ಮುಳುಗಿರುವ ಕಾಂಗ್ರೆಸ್ ಹಾಗೂ ಕಾಂಗ್ರೆಸ್ ಸರ್ಕಾರ ತಾನು ಹೇಳುವುದೆಲ್ಲಾ ಸುಳ್ಳು, ಕಟ್ಟುಕಥೆ ಕಟ್ಟುವಲ್ಲಿ ತಾನು ನಿಸ್ಸೀಮ ಎಂಬುದು ಸಾಬೀತಾಗಿದೆ ಎಂದು ಆರೋಪಿಸಿದ್ದಾರೆ.
ನೈತಿಕ ಮಾರ್ಗದಲ್ಲಿ ಎಂದೂ ಅಧಿಕಾರ ಹಿಡಿಯದ ಕಾಂಗ್ರೆಸ್ಸಿಗರು ದುರ್ಮಾರ್ಗ, ಅನೀತಿ, ಅಪಪ್ರಚಾರ ಹಾಗೂ ಸಮಾಜ ಒಡೆಯುವ ಕೆಲಸಗಳಿಂದಲೇ ಅಧಿಕಾರ ಕಬಳಿಸಿದ್ದಾರೆ ಎಂಬುದಕ್ಕೆ ಪ್ರಸ್ತುತ ಬಹಿರಂಗವಾಗಿರುವ ಲೋಕಾಯುಕ್ತ ವರದಿ ಸಾಕ್ಷಿ ಹೇಳುತ್ತಿದೆ.ಕರ್ನಾಟಕದ ಜನತೆಯನ್ನು ವಂಚಿಸಿ, ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಈ ಕೂಡಲೇ ಅಧಿಕಾರದಿಂದ ಕೆಳಗಿಳಿದು ಕರ್ನಾಟಕದ ಜನತೆಯ ಕ್ಷಮೆ ಕೋರಲಿ ಎಂದು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವಾಗಲೇ ಲೋಕಾಯುಕ್ತ ತನಿಖಾ ವರದಿ ಬಹಿರಂಗವಾಗಿರುವ ಹಿನ್ನೆಲೆಯಲ್ಲಿ ಈ ಕುರಿತು ಕಾಂಗ್ರೆಸ್ಸಿಗರು ಇನ್ನೇನೂ ಸಮಜಾಯಿಸಿ ನೀಡುವುದಕ್ಕಾಗಲಿ, ವಿತಂಡವಾದ ಮಾಡುವುದಕ್ಕಾಗಲಿ ಅವಕಾಶವೇ ಇಲ್ಲ. ಬಾಕಿ ಬಿಲ್ ಪಾವತಿಯಾಗದೇ ಕಣ್ಣೀರಿನಲ್ಲಿ ಕೈ ತೊಳೆಯುತ್ತಿರುವ ಗುತ್ತಿಗೆದಾರರು ರಾಜ್ಯದಲ್ಲಿರುವುದು 40% ಅಲ್ಲ 80% ಕಾಂಗ್ರೆಸ್ ಸರ್ಕಾರ ಎಂಬ ಅಸಲಿ ಸತ್ಯವನ್ನು ಬಹಿರಂಗ ಪಡಿಸುತ್ತಿದ್ದಾರೆ. ಒಂದರ ಮೇಲೊಂದು ಹಗರಣಗಳ ತನಿಖೆಯ ಕಾನೂನಿನ ಉರುಳು ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಸರ್ಕಾರವನ್ನು ಸುತ್ತಿಕೊಳ್ಳುತ್ತಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಶಾಸಕರು ಮಾರಾಟವಾಗುತ್ತಿದ್ದಾರೆ ಎಂದು ಮುಖ್ಯಮಂತ್ರಿಗಳೇ ಅಧಿಕೃತ ಹೇಳಿಕೆ ನೀಡಿ ಕರ್ನಾಟಕದ ಗೌರವವನ್ನು ಹರಾಜು ಹಾಕುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.