ಬೆಂಗಳೂರು: ಬೀದಿ ಬದಿ ವ್ಯಾಪಾರಿಗಳಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ಸೌಲಭ್ಯ ನೀಡುವ ಪಿಎಂ ಸ್ವನಿಧಿ ಯೋಜನೆಯನ್ನು 2030ರ ಮಾರ್ಚ್ 31 ರವರೆಗೆ ವಿಸ್ತರಿಸಲಾಗಿದೆ. ಅಲ್ಲದೆ, ಸಾಲ ನೀಡುವ ಮಿತಿಯನ್ನು 50 ಸಾವಿರ ರೂ.ಗೆ ಏರಿಕೆ ಮಾಡಲಾಗಿದೆ. ಇದರ ಜತೆಗೆ, ಇನ್ನೂ ಹೆಚ್ಚಿನ 50 ಲಕ್ಷ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ನೀಡುವುದಾಗಿ ಸರ್ಕಾರ ಘೋಷಣೆ ಮಾಡಿದೆ.
ಯೋಜನೆಯ ಮೂಲಕ ಬೀದಿ ವ್ಯಾಪಾರಿಗಳು ಮತ್ತು ತಳ್ಳುಗಾಡಿ ವ್ಯಾಪಾರಿಗಳಿಗೆ ಮೊದಲ ಹಂತದಲ್ಲಿ 10 ಸಾವಿರ ರೂಪಾಯಿ ಸಾಲ ನೀಡಲಾಗುತ್ತಿತ್ತು. ಇದನ್ನು ಈಗ 15 ಸಾವಿರ ರೂಪಾಯಿಗೆ ಹೆಚ್ಚಿಸಲಾಗಿದೆ. ಎರಡನೇ ಹಂತದಲ್ಲಿ 20 ಸಾವಿರ ರೂ.ವರೆಗೆ ಸಾಲ ನೀಡಲಾಗುತ್ತಿತ್ತು, ಇದನ್ನು 25 ಸಾವಿರ ರೂ.ಗೆ ಏರಿಕೆ ಮಾಡಲಾಗಿದೆ. ಈ ಎರಡೂ ಹಂತಗಳ ಸಾಲವನ್ನು ಸಕಾಲದಲ್ಲಿ ಮರುಪಾವತಿಸಿದರೆ, ಮೂರನೇ ಹಂತದಲ್ಲಿ 30 ಸಾವಿರ ರೂ. ಸಾಲ ನೀಡಲಾಗುತ್ತಿತ್ತು. ಈಗ ಇದನ್ನು 50 ಸಾವಿರ ರೂ.ಗೆ ಹೆಚ್ಚಿಸಲಾಗಿದೆ.
ಕೊರೊನಾ ಬಿಕ್ಕಟ್ಟು ಆರಂಭವಾದ 2020ರಲ್ಲಿ ಬೀದಿ ಬದಿ ವ್ಯಾಪಾರಿಗಳ ಕ್ಷೇಯೋಭಿವೃದ್ಧಿಗಾಗಿ ಪಿಎಂ ಸ್ವನಿಧಿ ಯೋಜನೆ ಜಾರಿಗೆ ತರಲಾಗಿದೆ. ಯೋಜನೆ ಅನ್ವಯ ಇದುವರೆಗೆ 3,500ಕ್ಕೂ ಹೆಚ್ಚು ನಗರ ಸ್ಥಳೀಯ ಸಂಸ್ಥೆಗಳ ಮೂಲಕ 46 ಲಕ್ಷ ವ್ಯಾಪಾರಿಗಳ ಪ್ರೊಫೈಲ್ ತಯಾರಿಸಲಾಗಿದೆ. ಒಟ್ಟು 13,797 ಕೋಟಿ ರೂ. ಮೌಲ್ಯದ 96 ಲಕ್ಷಕ್ಕೂ ಹೆಚ್ಚು ಸಾಲಗಳು ವಿತರಿಸಲಾಗಿದೆ. 68 ಲಕ್ಷಕ್ಕೂ ಹೆಚ್ಚು ವ್ಯಾಪಾರಿಗಳು ಯೋಜನೆಯಡಿ ಪ್ರಯೋಜನ ಪಡೆದಿದ್ದಾರೆ.
ಅರ್ಜಿ ಸಲ್ಲಿಸುವುದು ಹೇಗೆ?
• ಮೊದಲಿಗೆ https://pmsvanidhi.mohua.gov.in/ ಗೆ ಭೇಟಿ ನೀಡುವ ಮೂಲಕ ನೇರವಾಗಿ ಸಾಲಗಳಿಗೆ ಅರ್ಜಿ ಸಲ್ಲಿಸಬಹುದು.
• ಹತ್ತಿರದ ಸಾಮಾನ್ಯ ಸೇವಾ ಕೇಂದ್ರಕ್ಕೆ ಭೇಟಿಯೂ ಅರ್ಜಿ ಸಲ್ಲಿಸಬಹುದು.
• ವಾಣಿಜ್ಯ ಬ್ಯಾಂಕುಗಳು, ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳು, ಸಣ್ಣ ಹಣಕಾಸು ಬ್ಯಾಂಕುಗಳು, ಸಹಕಾರಿ ಬ್ಯಾಂಕುಗಳು, ಬ್ಯಾಂಕೇತರ ಹಣಕಾಸು ಕಂಪನಿಗಳು, ಸೂಕ್ಷ್ಮ ಹಣಕಾಸು ಸಂಸ್ಥೆಗಳು ಮತ್ತು ಸ್ವ-ಸಹಾಯ ಗುಂಪು ಬ್ಯಾಂಕುಗಳಿಗೆ ಭೇಟಿ ನೀಡಿಯೂ, ಅಲ್ಲಿ ಅರ್ಜಿ ಸಲ್ಲಿಸಬಹುದು.
• ನಗರ ಸ್ಥಳೀಯ ಸಂಸ್ಥೆಗಳು ಕೂಡ ಬೀದಿ ವ್ಯಾಪಾರಿಗಳ ಪಟ್ಟಿಯನ್ನು ಹೊಂದಿದ್ದು, ಅವು ಬೀದಿ ವ್ಯಾಪಾರಿಗಳಿಗೆ ಅರ್ಜಿ ನಮೂನೆಯನ್ನು ಭರ್ತಿ ಮಾಡಲು ಮತ್ತು ದಾಖಲೆಗಳನ್ನು ಮೊಬೈಲ್ ತಂತ್ರಾಂಶ ಅಥವಾ ಆಯಾ ಪೋರ್ಟಲ್ ಗಳಲ್ಲಿ ಅಪ್ ಲೋಡ್ ಮಾಡಲು ಸಹಾಯ ಮಾಡುತ್ತವೆ.


















