ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಖ್ಯ ಆಯುಕ್ತ ಮಹೇಶ್ವರ ರಾವ್ ಎಲ್ಲಾ ವಲಯ ಆಯುಕ್ತರಿಗೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದ್ದಾರೆ.
ಬೆಂಗಳೂರು ನಗರದಲ್ಲಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಇಂದು ಪಾಲಿಕೆ ಕೇಂದ್ರ ಕಚೇರಿಯಲ್ಲಿರುವ ನಿಯಂತ್ರಣ ಕೊಠಡಿ ಹಾಗೂ ಇಂಟಿಗ್ರೇಟೆಡ್ ಕಮಾಂಡ್ ಕಂಟ್ರೋಲ್ ಸೆಂಟರ್(ICCC)ಗೆ ಭೇಟಿ ನೀಡಿ ಎಲ್ಲಾ ವಲಯ ಆಯುಕ್ತರುಗಳಿಗೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿ ಮುಂಜಾಗೃತ ಕ್ರಮ ವಹಿಸುವಂತೆ ಸೂಚಿಸಿದರು.
ಮಳೆ ಹಾಗೂ ಗಾಳಿಗೆ ಧರೆಗುರುಳುವ ಮರಗಳು, ಮರದ ರೆಂಬೆ ಕೊಂಬೆಗಳನ್ನು ತುರ್ತಾಗಿ ತೆರವುಗೊಳಿಸುವಂತೆ ಅರಣ್ಯ ವಿಭಾಗದ ಅಧಿಕಾರಿಗಳಿಗೆ ಸೂಚಿಸಿದರು. ನಿಯಂತ್ರಣ ಕೊಠಡಿಗೆ ನಾಗರಿಕರಿಂದ ಬಂದಂತಹ ದೂರುಗಳನ್ನು ವೀಕ್ಷಿಸಿ ಕೂಡಲೇ ದೂರಗಳನ್ನು ಇತ್ಯರ್ಥಪಡಿಸಲು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲು ತಿಳಿಸಿದರು. ಇನ್ನು ರಸ್ತೆಯಲ್ಲಿ ನಿಂತಿರುವ ನೀರನ್ನು ಸೈಡ್ ಡ್ರೈನ್ ಗಳಿಗೆ ಸರಾಗವಾಗಿ ಹೋಗುವಂತೆ ಮಾಡಲು ಸೂಚಿಸಿದರು.
ವಾಣಿ ವಿಲಾಸ ರಸ್ತೆಯಲ್ಲಿ ಧರೆಗುರುಳಿದ ಮರ ತೆರವು ಕಾರ್ಯಾಚರಣೆ ಚುರುಕು:
ವಾಣಿ ವಿಲಾಸ ರಸ್ತೆಯಲ್ಲಿ ವಿದ್ಯುತ್ ತಂತಿಯ ಮೇಲೆ ಮರ ಬಿದ್ದು ಸ್ಥಳೀಯರಲ್ಲಿ ಆಂತಕ ಸೃಷ್ಟಿಯಾಗಿತ್ತು. ಜೊತೆಗೆ ಸಂಚಾರ ದಟ್ಟಣೆ ಕೂಡ ಹೆಚ್ಚಾಗಿತ್ತು. ಈ ಬಗ್ಗೆ ಮುಖ್ಯ ಆಯುಕ್ತರು ದಕ್ಷಿಣ ವಲಯದ ಆಯುಕ್ತರೊಂದಿಗೆ ದೂರವಾಣಿ ಮೂಲಕ ಮಾತನಾಡಿ ತುರ್ತು ಕ್ರಮಕ್ಕೆ ಸೂಚಿಸಿದರು.
ಈ ಸಂಬಂಧ ಬೆಸ್ಕಾಂ ನಿಂದ ಕೂಡಲೇ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗಿರುತ್ತದೆ. ಪಾಲಿಕೆಯ ಅರಣ್ಯ ಸಿಬ್ಬಂದಿ ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿದ್ದು, ಮರದ ತೆರವು ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ. ಸಂಚಾರ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳನ್ನು ಸಂಚಾರ ದಟ್ಟಣೆ ಆಗುವುದನ್ನು ನಿಯಂತ್ರಿಸುತ್ತಿದ್ದು, ಶೀಘ್ರ ಮರ ತೆರವುಗೊಳಿಸಿ ಸಮಸ್ಯೆಯನ್ನು ಬಗೆಹರಿಸಲಾಗಿದೆ. ದಕ್ಷಿಣ ವಲದಲ್ಲಿ 2 ಕಾರು ಹಾಗೂ ದಾಸರಹಳ್ಳಿ ವಲಯದಲ್ಲಿ 1 ಕಾರಿನ ಮೇಲೆ ಮರ ಬಿದ್ದು ಜಖಂಗೊಂಡಿದ್ದು, ಯಾರಿಗೂ ಯಾವುದೇ ಹಾನಿಯಾಗಿರುವುದಿಲ್ಲ. ಅರಣ್ಯ ವಿಭಾಗದ ಮರ ತೆರವುಗೊಳಿಸುವ ತಂಡಗಳು ಸಕ್ರಿಯವಾಗಿ ತೆರವು ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.
1533 ಗೆ ಕರೆ ಮಾಡಿ ದೂರು ನೀಡಿ:
ನಾಗರಿಕರು ಮಳೆಯಿಂದಾಗಿ ಯಾವುದೇ ಸಮಸ್ಯೆಯಾದರೂ ಪಾಲಿಕೆಯ ಸಹಾಯವಾಣಿ ಸಂಖ್ಯೆಯಾದ 1533 ಗೆ ಕರೆ ಮಾಡಿ ದೂರು ನೀಡಬಹುದಾಗಿದೆ. ಈ ವೇಳೆ ವಿಶೇಷ ಆಯುಕ್ತರಾದ ಮುನಿಷ್ ಮೌದ್ಗಿಲ್, ವಿಶೇಷ ಆಯುಕ್ತರಾದ ನವಿನ್ ಕುಮಾರ್ ರಾಜ್, ಪ್ರಧಾನ ಅಭಿಯಂತರರಾದ ಪ್ರಹ್ಲಾದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.