ಬೆಂಗಳೂರು : ನಗರದಲ್ಲಿ ಮದುವೆಯಾಗಿ ಕೇವಲ ಎಂಟು ತಿಂಗಳಲ್ಲೇ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಯಶವಂತಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಮೃತ ಮಹಿಳೆಯ ಕುಟುಂಬಸ್ಥರು ಪತಿಯ ವಿರುದ್ಧ ಕಿರುಕುಳ ಆರೋಪ ಮಾಡಿದ್ದಾರೆ.
ಮೃತ ಮಹಿಳೆಯನ್ನು ಶಾರದ ಎಂದು ಗುರುತಿಸಲಾಗಿದೆ. ಕಳೆದ ಎಂಟು ತಿಂಗಳ ಹಿಂದೆ ಮಹೇಶ್ ಎಂಬಾತನನ್ನು ಮದುವೆಯಾಗಿದ್ದ ಶಾರದ, ಮದುವೆಯಾದ ದಿನದಿಂದಲೇ ಹಣಕ್ಕಾಗಿ ಕಿರುಕುಳ ಅನುಭವಿಸುತ್ತಿದ್ದಳು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಆತ್ಮಹತ್ಯೆಗೂ ಮುನ್ನ ಶಾರದ ವಿಡಿಯೋ ಕಾಲ್ ಮಾಡಿ ತಾನು ಜೀವ ಕೊಳ್ಳುವ ನಿರ್ಧಾರ ಮಾಡಿಕೊಂಡಿರುವುದಾಗಿ ಹೇಳಿದ್ದಾಳೆ ಎನ್ನಲಾಗಿದೆ. ಆದರೆ ಈ ವೇಳೆ ಪತಿ ಮಹೇಶ್ ಅದನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂಬ ಆರೋಪ ಕೇಳಿಬಂದಿದೆ. ಗಂಡ ಮನೆಯಲ್ಲೇ ಇದ್ದಾಗಲೇ ಶಾರದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.
ಮದುವೆಯಾಗಿ ಇನ್ನೂ ಒಂದು ವರ್ಷವೂ ಪೂರೈಸದ ದಂಪತಿಯ ಜೀವನದಲ್ಲಿ ಈ ದುರಂತ ಸಂಭವಿಸಿರುವುದು ಕುಟುಂಬಸ್ಥರನ್ನು ಕಂಗಾಲಾಗಿಸಿದೆ. ಶಾರದ ಸಾವಿಗೆ ಪತಿಯ ಕಿರುಕುಳವೇ ಕಾರಣ ಎಂದು ಆರೋಪಿಸಿರುವ ಕುಟುಂಬಸ್ಥರು ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.
ಘಟನೆ ಬಳಿಕ ಪೊಲೀಸರು ಸ್ಥಳ ಮಹಜರು ಪ್ರಕ್ರಿಯೆ ಸರಿಯಾಗಿ ನಡೆಸಿಲ್ಲ ಎಂದು ಮೃತ ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಸಂಬಂಧ ಗೃಹ ಸಚಿವರಿಗೆ ದೂರು ನೀಡಿದ್ದ ಹಿನ್ನೆಲೆ, ಪೊಲೀಸರು ಇಂದು ಮತ್ತೆ ಸ್ಥಳ ಮಹಜರು ಪ್ರಕ್ರಿಯೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ಸಂಬಂಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣವೇನು..? ಹಣಕ್ಕಾಗಿ ಕಿರುಕುಳ ಆರೋಪದಲ್ಲಿ ಎಷ್ಟು ಸತ್ಯ ಇದೆ..? ಎಂಬ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಭಾರತ ಟಿ20 ತಂಡಕ್ಕೆ ವೈಭವ್ ಸೂರ್ಯವಂಶಿ ಪದಾರ್ಪಣೆ? ಬೆಂಬಲಕ್ಕೆ ನಿಂತ ದಿಗ್ಗಜ ಇಯಾನ್ ಬಿಷಪ್!


















