ಮಂಡ್ಯ : ಮಹಿಳಾ ಪಿಎಸ್ಐಗೆ ಕಪಾಳಮೋಕ್ಷ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪ ಸಂಬಂಧ ತುಮಕೂರು ಗ್ರಾಮಾಂತರ ಶಾಸಕ ಬಿ.ಸುರೇಶ್ಗೌಡ ಅವರ ಪುತ್ರಿ ಐಶ್ವರ್ಯ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಭೀಮನ ಅಮಾವಾಸ್ಯೆ ಹಿನ್ನೆಲೆಯಲ್ಲಿ ಆಗಸ್ಟ್ 12ರಂದು ರಾತ್ರಿ 8.15ರ ಸುಮಾರಿಗೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಆರತಿ ಉಕ್ಕಡ ದೇಗುಲದಲ್ಲಿ ವಿಶೇಷ ಭದ್ರತಾ ಕರ್ತವ್ಯಕ್ಕೆ PSI ಸವಿತಾ ಅವರನ್ನು ನಿಯೋಜಿಸಲಾಗಿತ್ತು. ಇದೇ ವೇಳೆ ದೇವರ ದರ್ಶನಕ್ಕೆ ಶಾಸಕ ಬಿ.ಸುರೇಶ್ಗೌಡ ಅವರ ಪುತ್ರಿ ಐಶ್ವರ್ಯ ಆಗಮಿಸಿದ್ದರು ಎನ್ನಲಾಗಿದೆ. ದರ್ಶನಕ್ಕೆ ಅವಕಾಶ ನೀಡುವಲ್ಲಿ ವಿಳಂಬವಾಗಿದೆ ಎಂಬ ಕಾರಣಕ್ಕೆ ಗಲಾಟೆ ಆರಂಭವಾಗಿದ್ದು, ಕರ್ತವ್ಯದಲ್ಲಿದ್ದ ಮಹಿಳಾ PSIಗೆ ಅವಾಚ್ಯ ಶಬ್ದಗಳಿಂದ ಬೈದು, ಕಪಾಳಕ್ಕೆ ಹೊಡೆದು ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿ ಬೆದರಿಕೆ ಹಾಕಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಹಲ್ಲೆ ಆರೋಪ ಎದುರಿಸುತ್ತಿರುವ ಐಶ್ವರ್ಯ ಅವರು ತುಮಕೂರು ಗ್ರಾಮಾಂತರ ಶಾಸಕ ಬಿ. ಸುರೇಶ್ಗೌಡ ಅವರ ಪುತ್ರಿ ಹಾಗೂ ACP ಗೌತಮ್ ಅವರ ಪತ್ನಿ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ PSI ಸವಿತಾ ಅವರು ದೂರು ನೀಡಿದ್ದು, ಐಶ್ವರ್ಯ ವಿರುದ್ಧ ಕ್ಯಾತನಹಳ್ಳಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. BNS ಸೆಕ್ಷನ್ 132, 115(2), 352 ಹಾಗೂ 351(2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕರ್ತವ್ಯ ನಿರತ ಮಹಿಳಾ ಪೊಲೀಸ್ ಅಧಿಕಾರಿಯ ಮೇಲೆಯೇ ಹಲ್ಲೆ, ಬೆದರಿಕೆ ಹಾಗೂ ದೌರ್ಜನ್ಯ ನಡೆದಿರುವ ಆರೋಪ ಗಂಭೀರ ಚರ್ಚೆಗೆ ಕಾರಣವಾಗಿದೆ. ಪ್ರಕರಣ ದಾಖಲಾಗಿ 24 ಗಂಟೆ ಕಳೆದರೂ ಆರೋಪಿಯನ್ನು ಬಂಧಿಸಿಲ್ಲ ಎಂಬ ಆರೋಪವೂ ಕೇಳಿಬಂದಿದೆ. ಜಾಮೀನು ಸಿಗದ ಅಪರಾಧದ ಆರೋಪಗಳಿದ್ದರೂ ಬಂಧನವಾಗಿಲ್ಲ, ನೋಟಿಸ್ ಕೂಡ ನೀಡಿಲ್ಲ ಎಂಬ ಪ್ರಶ್ನೆಯನ್ನು ಪೊಲೀಸ್ ಇಲಾಖೆಯ ವಲಯದಲ್ಲಿ ಕೆಲವರು ಎತ್ತಿದ್ದಾರೆ.
ಇನ್ನು ಇಲಾಖೆಯ ನೊಂದ ಅಧಿಕಾರಿಯ ಪರವಾಗಿ ನಿಲ್ಲುವ ಬದಲು ಪ್ರಭಾವಿ ಕುಟುಂಬದ ಮಹಿಳೆಯ ಪರವಾಗಿ ಪೊಲೀಸರು ನಿಂತಿದ್ದಾರೆಯೇ ಎಂಬ ಆರೋಪವೂ ಕೇಳಿಬಂದಿದೆ. ಪ್ರಕರಣದಲ್ಲಿ ಕೌಂಟರ್ ಕೇಸ್ ದಾಖಲಿಸಲು ಅವಕಾಶ ಇಲ್ಲದಿದ್ದರೂ ಅದಕ್ಕೂ ಅವಕಾಶ ಮಾಡಿಕೊಡುವಂತೆ ಕೆಲ ಹಿರಿಯ ಪೊಲೀಸ್ ಅಧಿಕಾರಿಗಳಿಂದ ಒತ್ತಡ ಬಂದಿದೆ ಎಂಬ ಆರೋಪ ಮಾಡಲಾಗಿದೆ. ಈ ಆರೋಪಗಳ ಬಗ್ಗೆ ಪೊಲೀಸ್ ಇಲಾಖೆ ಯಾವ ರೀತಿಯ ಕ್ರಮ ಕೈಗೊಳ್ಳಲಿದೆ ಎಂಬುದು ಈಗ ಕುತೂಹಲ ಮೂಡಿಸಿದೆ.
ಇದನ್ನೂ ಓದಿ : ಬಿಜೆಪಿ ಶಾಸಕಾಂಗ ಸಭೆಯಲ್ಲಿ ಮಹತ್ವದ ಚರ್ಚೆ ; ಅಧಿವೇಶನದಲ್ಲಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಪ್ಲ್ಯಾನ್



















