ವಿಜಯನಗರ : ರಕ್ತದ ಮಡುವಿನಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ನಡೆದಿದೆ. ಪಟ್ಟಣದ ಅಗ್ನಿಶಾಮಕ ಠಾಣೆ ಸಮೀಪವೇ ಮಹಿಳೆಯ ಶವ ಪತ್ತೆಯಾಗಿದ್ದು, ಜನ ಬೆಚ್ಚಿಬಿದ್ದಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಯಾರೋ ಕಿಡಿಗೇಡಿಗಳು ಮಹಿಳೆಯನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಮೃತ ಮಹಿಳೆಯನ್ನು ರಾಮ್ ರಹೀಮ್ ನಗರದ ನಿವಾಸಿ ಪ್ರಿಯಾಂಕಾ ಎಂದು ಗುರುತಿಸಲಾಗಿದೆ. ಕಳೆದ ವರ್ಷ ಪ್ರಿಯಾಂಕಾ ವಿವಾಹವಾಗಿದ್ದರೂ, ಇತ್ತೀಚೆಗೆ ವಿಚ್ಛೇದನಗೊಂಡು ತಮ್ಮ ಮಗನೊಂದಿಗೆ ಪ್ರತ್ಯೇಕವಾಗಿ ವಾಸವಾಗಿದ್ದರು ಎಂದು ತಿಳಿದುಬಂದಿದೆ. ಇದೀಗ ಪ್ರಿಯಾಂಕಾ ಶವವಾಗಿ ಪತ್ತೆಯಾಗಿರುವುದು ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.
ಘಟನೆ ಮಾಹಿತಿ ತಿಳಿಯುತ್ತಿದ್ದಂತೆಯೇ ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಾಹ್ನವಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಸ್ಥಳ ಮಹಜರು ನಡೆಸಿ ಸಾಕ್ಷ್ಯ ಸಂಗ್ರಹ ಕಾರ್ಯ ಕೈಗೊಂಡಿದ್ದಾರೆ. ಈ ಘಟನಾ ಸಂಬಂಧ ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಹಿಳೆಯ ಸಾವಿನ ಹಿಂದಿನ ನಿಜವಾದ ಕಾರಣ ಪತ್ತೆ ಮಾಡಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ : ಬೀದರ್ ಜಿಲ್ಲಾಸ್ಪತ್ರೆಯಲ್ಲೇ ಯುವ ವೈದ್ಯನಿಗೆ ಹಿಗ್ಗಾಮುಗ್ಗಾ ಥಳಿಸಿದ ಕಿಡಿಗೇಡಿಗಳು!



















