ಬೆಂಗಳೂರು : ನಗರದ ತಲಘಟ್ಟಪುರ ಪ್ರದೇಶದಲ್ಲಿ ನಿರ್ಮಾಣ ಹಂತದ ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ಉತ್ತರಹಳ್ಳಿ ನಿವಾಸಿ ಮಂಜುನಾಥ್(44) ಎಂದು ಗುರುತಿಸಲಾಗಿದೆ. ಇವರು ಕಟ್ಟಡ ನಿರ್ಮಾಣ ಸ್ಥಳದಲ್ಲಿ ಕಬ್ಬಿಣದ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ರಾಯಲ್ ಇಂದ್ರಪ್ರಸ್ಥ ಬಿಲ್ಡರ್ ಕಂಪನಿಯಿಂದ ನಡೆಯುತ್ತಿದ್ದ ನಿರ್ಮಾಣ ಕಾಮಗಾರಿಯ ವೇಳೆ ಈ ದುರಂತ ಸಂಭವಿಸಿದೆ. ಕಟ್ಟಡದ ಅಡಿಪಾಯ ಭಾಗದಲ್ಲಿ ಕೆಲಸ ನಡೆಯುತ್ತಿದ್ದಾಗ ಏಕಾಏಕಿ ಮಣ್ಣು ಕುಸಿದು ಬಿದ್ದಿದೆ. ಪರಿಣಾಮ ಮಂಜುನಾಥ್ ಮಣ್ಣಿನಡಿ ಸಿಲುಕಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಈ ದುರ್ಘಟನೆಗೆ ರಾಯಲ್ ಇಂದ್ರಪ್ರಸ್ಥ ಕನ್ಸ್ಟ್ರಕ್ಷನ್ ಕಂಪನಿಯ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾಮಗಾರಿ ವೇಳೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದಿರುವುದೇ ದುರಂತಕ್ಕೆ ಕಾರಣವಾಗಿದೆ, ಈ ರೀತಿಯ ದುರಂತಗಳು ಮತ್ತೆ ಮರುಕಳಿಸದಂತೆ ಕಟ್ಟಡ ನಿರ್ಮಾಣ ಕಂಪನಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಜಿಬಿಎ ಅಧಿಕಾರಿಗಳಿಂದ ನೋಟಿಸ್
ಘಟನೆ ಸಂಬಂಧ GBA ಅಧಿಕಾರಿಗಳು ರಾಯಲ್ ಇಂದ್ರಪ್ರಸ್ಥ ಕನ್ಸ್ಟ್ರಕ್ಷನ್ ಕಂಪನಿಗೆ ನೋಟಿಸ್ ಜಾರಿ ಮಾಡಿದ್ದಾರೆ. ನೋಟಿಸ್ ನೀಡಿದ ಬಳಿಕ ಕಂಪನಿ ತಾತ್ಕಾಲಿಕವಾಗಿ ಕಾಮಗಾರಿ ಸ್ಥಗಿತಗೊಳಿಸಿರುವುದಾಗಿ ತಿಳಿದುಬಂದಿದೆ.
ಇದನ್ನೂ ಓದಿ : IPL ಬೆಟ್ಟಿಂಗ್ನಲ್ಲಿ ಭಾರಿ ನಷ್ಟ – ವಿಡಿಯೋ ಮಾಡಿಟ್ಟು ಯುವಕ ಆತ್ಮಹತ್ಯೆ


















