ತುಮಕೂರು: ಜಿಲ್ಲೆಯಾದ್ಯಂತ ಇಂದಿನಿಂದ ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚಿಸಿದೆ.
ಜಿಲ್ಲೆಯಾದ್ಯಂತ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.
ಮಳೆ ಹಾನಿಯಾದರೆ ತ್ವರಿತವಾಗಿ ಸ್ಪಂದಿಸಲು ಕಂದಾಯ ಅಧಿಕಾರಿಗಳು ಸಜ್ಜಾಗಿರುವಂತೆ ಸೂಚಿಸಿದ್ದಾರೆ. ಜಿಲ್ಲೆಯಾದ್ಯಂತ ಮಳೆ ಹಾನಿಯಾದರೆ 24 ಗಂಟೆಯಲ್ಲಿ ಪರಿಶೀಲನೆ ಮಾಡಿ ಪರಿಹಾರ ಕೊಡಲು ಸೂಚಿಸಿದ್ದಾರೆ. ಈಗಾಗಲೇ ಜಿಲ್ಲೆಯಲ್ಲಿ ಮಳೆಯಿಂದ ನಾಲ್ವರು ವ್ಯಕ್ತಿಗಳು ಹಾಗೂ ಎರಡು ಹಸುಗಳು ಸಾವನ್ನಪ್ಪಿವೆ. ಮಳೆ ವ್ಯಾಪಕವಾಗುವ ಸಾಧ್ಯತೆ ಇರುವುದರಿಂದಾಗಿ ಜನರು ಮನೆಯಿಂದ ಹೊರಗೆ ಬರಬೇಡಿ ಎಂದು ಮನವಿ ಮಾಡಿದ್ದಾರೆ.
ಜಿಲ್ಲೆಯಲ್ಲಿ ಮಳೆಯಿಂದಾಗಿ ಈಗಾಗಲೇ ಸಾಕಷ್ಟು ಪ್ರಮಾಣದಲ್ಲಿ ಹಾನಿಯಾಗಿದೆ. 500ಕ್ಕೂ ಅಧಿಕ ವಿದ್ಯುತ್ ಕಂಬಗಳು, ತೋಟಗಾರಿಕೆ ಮತ್ತು ವಿವಿಧ ಬೆಳೆಗಳಿಂದ 6 ಹೆಕ್ಟೇರ್ ಪ್ರದೇಶ ನಾಶವಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.